ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ; ಚುನಾವಣಾ ಆಯೋಗದ ಕದ ತಟ್ಟಿದ ಬಿಜೆಪಿ, ಟಿಎಂಸಿ
ಕೋಲ್ಕತ್ತಾ, ಮಾರ್ಚ್ 31: ಪಶ್ಚಿಮ ಬಂಗಾಳದಲ್ಲಿ ಗುರುವಾರ ಎರಡನೇ ಹಂತದ ಚುನಾವಣೆಗೆ ತಯಾರಿ ಸಾಗುತ್ತಿರುವ ಬೆನ್ನಲ್ಲೇ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ಬುಧವಾರ ಪರಸ್ಪರ ಆರೋಪಿಸಿ ಚುನಾವಣಾ ಆಯೋಗದ ಬಾಗಿಲು ತಟ್ಟಿವೆ.
ಚುನಾವಣಾ ಆಯೋಗದ ಮುಖ್ಯಾಧಿಕಾರಿಗಳಿಗೆ ತೃಣಮೂಲ ಕಾಂಗ್ರೆಸ್ ಪತ್ರ ಬರೆದಿದ್ದು, ಬಿಜೆಪಿ ಅಭ್ಯರ್ಥಿಯಾಗಿ ನಂದಿಗ್ರಾಮದಿಂದ ಕಣಕ್ಕಿಳಿದಿರುವ ಸುವೇಂದು ಅಧಿಕಾರಿ ಮತದಾನ ಕ್ಷೇತ್ರದಲ್ಲಿ ಅಪರಾಧಿಗಳಿಗೆ ಆಶ್ರಯ ನೀಡುತ್ತಿದ್ದಾರೆ ಎಂದು ಆರೋಪಿಸಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿರುವ ನಂದಿಗ್ರಾಮ ಕ್ಷೇತ್ರದ ಏಳು ಕಡೆಗಳಲ್ಲಿ ಸುವೇಂದು ಅಧಿಕಾರಿ ಅಪರಾಧಿಗಳಿಗೆ ನೆಲೆ ನೀಡಿದ್ದಾರೆ. ಚುನಾವಣೆ ಸಂದರ್ಭ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೀವು ಮಧ್ಯ ಪ್ರವೇಶಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದೆ.
ಇದೇ ಸಂದರ್ಭ ಬಿಜೆಪಿ ಕೂಡ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ವಿರುದ್ಧ ದೂರು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಅವರಯ ಸುಳ್ಳು ಆರೋಪ ಮಾಡುತ್ತಿದ್ದಾರೆ. ಸುಳ್ಳು ಹೇಳಿ ಮತದಾರರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ದೂರಿದೆ. ಅಮಿತ್ ಶಾಗೆ ಪಶ್ಚಿಮ ಬಂಗಾಳದಲ್ಲಿ ತಮ್ಮ ಪರಿಸ್ಥಿತಿ ಬಗ್ಗೆ ಅರಿವಿದೆ. ಹೀಗಾಗಿ ಚುನಾವಣಾ ಆಯೋಗದ ಸಹಾಯ ಪಡೆದುಕೊಂಡು ಚುನಾವಣೆ ನಡೆಯುವಾಗ ಗಲಭೆ ಎಬ್ಬಿಸುವ ಯೋಜನೆ ಹಾಕಿದ್ದಾರೆ ಎಂದು ಕಲ್ಯಾಣ್ ಬ್ಯಾನರ್ಜಿ ಹೇಳಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ 291 ಕ್ಷೇತ್ರಗಳಿಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಮಾರ್ಚ್ 27ರಂದು ಮೊದಲ ಹಂತದ ಚುನಾವಣೆ ಮುಗಿದಿದೆ. ಗುರುವಾರ, ಏಪ್ರಿಲ್ 1ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ












Click it and Unblock the Notifications