ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಕೋಲ್ಕತ್ತಾ ಏಪ್ರಿಲ್ 11: ತೃಣಮೂಲ ಕಾಂಗ್ರೆಸ್ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಬರ್ಭೂಮ ಹಿಂಸಾಚಾರ ಇನ್ನೂ ಮಾಸಿಲ್ಲ. ಅದಾಗಲೇ ಮತ್ತೊಂದು ಆರೋಪವನ್ನು ತೃಣಮೂಲ ಕಾಂಗ್ರೆಸ್ ಹೊತ್ತುಕೊಂಡಿದೆ.
ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಅಪ್ರಾಪ್ತ ಬಾಲಕಿ ಭಾನುವಾರ ಸಾವನ್ನಪ್ಪಿದ ದಾರುಣ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ ಪಂಚಾಯತ್ ಸದಸ್ಯನ ಮಗ ಎಂದು ಬಾಲಕಿಯ ಕುಟುಂಬ ಹೇಳಿಕೊಂಡಿದ್ದು, ಹೆಚ್ಚಿನ ತನಿಖೆಗಾಗಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾವನ್ನಪ್ಪಿ ಸಂತ್ರಸ್ತೆಯನ್ನು 9ನೇ ತರಗತಿಯ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಘಟನೆ ನಡೆದು ನಾಲ್ಕು ದಿನಗಳ ನಂತರ ಅಂದರೆ ಕಳೆದ ಶನಿವಾರ ವಿದ್ಯಾರ್ಥಿಯ ಪೋಷಕರು ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ.
ದೂರಿನ ಪ್ರಕಾರ, ಬಾಲಕಿ ಸೋಮವಾರ ಮಧ್ಯಾಹ್ನ ಆರೋಪಿಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪಾಲ್ಗೊಳ್ಳಲು ಆತನ ಮನೆಗೆ ಹೋಗಿದ್ದಳು, ಆದರೆ ಅವಳು ಅಸ್ವಸ್ಥಳಾಗಿ ಮನೆಗೆ ಮರಳಿದ್ದಳು ಮತ್ತು ಶೀಘ್ರದಲ್ಲೇ ಸಾವನ್ನಪ್ಪಿದ್ದಾಳೆ. "ಸ್ಥಳೀಯ ಟಿಎಂಸಿ ನಾಯಕನ ಮಗನ ನಿವಾಸದಲ್ಲಿ ಪಾರ್ಟಿಯಿಂದ ಹಿಂತಿರುಗಿದ ನಂತರ ನಮ್ಮ ಮಗಳಿಗೆ ತೀವ್ರವಾಗಿ ರಕ್ತಸ್ರಾವವಾಗುತ್ತಿತ್ತು ಮತ್ತು ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ನಾವು ಅವಳನ್ನು ಆಸ್ಪತ್ರೆಗೆ ಕರೆದೊಯ್ಯುವ ಮೊದಲು ಅವಳು ಸಾವನ್ನಪ್ಪಿದ್ದಾಳೆ" ಎಂದು ಪೋಷಕರು ಆರೋಪಿಸಿದ್ದಾರೆ.

"ಘಟನೆಯ ನಂತರ ಪಾರ್ಟಿಯಲ್ಲಿ ಹಾಜರಿದ್ದ ಜನರೊಂದಿಗೆ ನಾವು ಮಾತನಾಡಿದೆವು. ಈ ವೇಳೆ ಆರೋಪಿ ಮತ್ತು ಅವನ ಸ್ನೇಹಿತರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ನಮಗೆ ಖಚಿತವಾಗಿದೆ" ಎಂದು ಹುಡುಗಿಯ ತಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಆಕೆಯ ಮರಣ ಪ್ರಮಾಣ ಪತ್ರ ನೀಡುವ ಮುನ್ನವೇ ಜನರ ಗುಂಪೊಂದು ಅಪ್ರಾಪ್ತ ಬಾಲಕಿಯ ಶವವನ್ನು ಶವಸಂಸ್ಕಾರಕ್ಕೆ ಬಲವಂತವಾಗಿ ಕೊಂಡೊಯ್ದಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಟಿಎಂಸಿಯ ಹಿರಿಯ ನಾಯಕ ಮತ್ತು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಶಶಿ ಪಂಜ ಅವರು, ಅಪ್ರಾಪ್ತರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಆಡಳಿತ ಪಕ್ಷ ಕೂಲಂಕಶವಾಗಿ ತನಿಖೆ ಮಾಡಬೇಕು. ಘಟನೆಯಲ್ಲಿ ಯಾವುದೇ ರಾಜಕೀಯ ಮಾಡಬಾರದು, ಪೊಲೀಸರು ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಾರೆ ಎಂದು ಅವರು ಹೇಳಿದರು. ಘಟನೆಯನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ ಹಂಸಖಾಲಿಯಲ್ಲಿ 12 ಗಂಟೆಗಳ ಬಂದ್ಗೆ ಕರೆ ನೀಡಿದೆ.

ಕಳೆದ ತಿಂಗಳು ತೃಣಮೂಲ ಕಾಂಗ್ರೆಸ್ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಬರ್ಭೂಮ ಹಿಂಸಾಚಾರ ಭುಗಿಲೆದ್ದಿತ್ತು. ಈ ಘಟನೆಯಲ್ಲಿ ಮನೆಗೆ ಬೆಂಕಿ ಹಚ್ಚುವ ಮೂಲಕ ಜನರನ್ನು ಸಜೀವ ದಹನ ಮಾಡಲಾಗಿತ್ತು. ಇದಕ್ಕೆ ರಾಜಕೀಯ ಬಣ್ಣ ಹಚ್ಚಿ ಮಮತಾ ಬ್ಯಾನರ್ಜಿ ಅವರ ಅಸಹಾಯಕ ಆಡಳಿತವೇ ಇದಕ್ಕೆ ಕಾರಣ ಎಂದು ಬಿಜೆಪಿ ದೂರಿತ್ತು. ಇದನ್ನು ದೀದಿ ಕೂಡ ಅಲ್ಲಗಳಿದಿದ್ದರು. ಕೇಂದ್ರ ಸರ್ಕಾರ ತಮ್ಮ ಮೇಲೆ ಒತ್ತಡ ಹೇರುತ್ತಿದೆ ಎನ್ನುವ ಆರೋಪ ಮಾಡಿದ್ದ ದೀದಿ ಇದರ ವಿರುದ್ಧ ಎಲ್ಲಾ ಕಾಂಗ್ರೆಸ್ ಸಿಎಂಗಳಿಗೆ ಶಾಸಕರಿಗೆ ಒಟ್ಟಾಗಿ ಸೇರಿ ಹೋರಾಡಬೇಕೆಂದು ಕರೆ ನೀಡಿದ್ದರು. ಅಷ್ಟರಲ್ಲಾಗಲೇ ಮತ್ತೊಂದು ಪ್ರಕರಣದಲ್ಲಿ ಕಾಂಗ್ರೆಸ್ ಹೆಸರು ಕೇಳಿ ಬಂದಿದೆ.












Click it and Unblock the Notifications