ಎರಡು ದಿನದ ಭೇಟಿಗಾಗಿ ಪಶ್ಚಿಮ ಬಂಗಾಳಕ್ಕೆ ಆಗಮಿಸಿದ ಅಮಿತ್ ಶಾ
ಕೋಲ್ಕತಾ, ಡಿಸೆಂಬರ್ 19: ಬಿಜೆಪಿ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎರಡು ದಿನಗಳ ಪಶ್ಚಿಮ ಬಂಗಾಳ ಭೇಟಿಗಾಗಿ ಶನಿವಾರ ರಾತ್ರಿ 1 ಗಂಟೆಗೆ ಕೋಲ್ಕತಾಕ್ಕೆ ಆಗಮಿಸಿದರು. ಮುಂದಿನ ಕೆಲವು ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಚಟುವಟಿಕೆಗಳನ್ನು ಚುರುಕುಗೊಳಿಸಲು ಅವರು ಈ ಎರಡು ದಿನ ಸ್ಥಳೀಯ ನಾಯಕರೊಂದಿಗೆ ಚರ್ಚಿಸಲಿದ್ದಾರೆ.
ಕೋಲ್ಕತಾಕ್ಕೆ ಕಾಲಿಟ್ಟ ಬಳಿಕ ಟ್ವೀಟ್ ಮಾಡಿರುವ ಅಮಿತ್ ಶಾ, 'ಗುರುದೇವ್ ಟ್ಯಾಗೋರ್, ಈಶ್ವರ ಚಂದ್ರ ವಿದ್ಯಾಸಾಗರ್ ಮತ್ತು ಶ್ಯಾಮ್ ಪ್ರಸಾದ್ ಮುಖರ್ಜಿ ಅವರಂತಹ ಮಹಾನ್ ವ್ಯಕ್ತಿಗಳ ಪುಣ್ಯಭೂಮಿಗೆ ನಾನು ತಲೆಬಾಗುತ್ತೇನೆ' ಎಂದಿದ್ದಾರೆ. ಅಮಿತ್ ಶಾ ಅವರನ್ನು ರಾಜ್ಯ ಬಿಜೆಪಿ ಮುಖಂಡರು ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಕೆಲವು ದಿನಗಳ ಹಿಂದೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರೆ ನಾಯಕರು ತೆರಳುತ್ತಿದ್ದ ಕಾರಿನ ಮೇಲೆ ದಾಳಿ ನಡೆದ ಪ್ರಕರಣ ಭಾರಿ ವಿವಾದ ಸೃಷ್ಟಿಸಿತ್ತು. ಅದರ ಬಳಿಕ ಗೃಹ ಸಚಿವ ಅಮಿತ್ ಶಾ ಈಗ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ.

ಮುಖ್ಯವಾಗಿ ಅಮಿತ್ ಶಾ ಭೇಟಿ ಬಿಜೆಪಿಯಲ್ಲಿ ಹೊಸ ಬದಲಾವಣೆಗಳನ್ನು ತರುವ ಸಾಧ್ಯತೆ ಇದ್ದು, ಮಮತಾ ಬ್ಯಾನರ್ಜಿ ವಿರುದ್ಧ ಬಂದಾಯವೆದ್ದು ರಾಜೀನಾಮೆ ನೀಡಿರುವ ತೃಣಮೂಲ ಕಾಂಗ್ರೆಸ್ ಶಾಸಕ ಸುವೇಂದು ಅಧಿಕಾರಿ ಅವರು ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಅಮಿತ್ ಶಾ ಅವರು ಶನಿವಾರ ಮಿಡ್ನಾಪುರ್ದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಟಿಎಂಸಿಎ ಅನೇಕ ಬೆಂಬಲಿಗರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಲ್ಲಿಯವರೆಗೆ ಪ್ರತಿ ತಿಂಗಳೂ ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.












Click it and Unblock the Notifications