ಬಿಜೆಪಿ ವಿರುದ್ಧ ಜತೆಗೂಡೋಣ ಬನ್ನಿ: ವಿರೋಧ ಪಕ್ಷಗಳಿಗೆ ಮಮತಾ ಬ್ಯಾನರ್ಜಿ ಸುದೀರ್ಘ ಪತ್ರ
ಕೋಲ್ಕತಾ, ಮಾರ್ಚ್ 31: ಬಿಜೆಪಿ ವಿರುದ್ಧ ಒಗ್ಗೂಡಲು ಮತ್ತು ಭಾರತದ ಪ್ರಜಾಪ್ರಭುತ್ವವನ್ನು ಉಳಿಸಲು ಎಲ್ಲರೂ ಒಂದುಗೂಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿರೋಧಪಕ್ಷಗಳ ಪ್ರಮುಖ ನಾಯಕರಿಗೆ ಬುಧವಾರ ಪತ್ರ ಬರೆದಿದ್ದಾರೆ.
ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮುಂತಾದೆಡೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಅವರು ಬಿಜೆಪಿ ವಿರುದ್ಧ ಎಲ್ಲ ವಿರೋಧಪಕ್ಷಗಳನ್ನು ಒಂದುಗೂಡಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. 'ಬಿಜೆಪಿ ಹಾಗೂ ಕೇಂದ್ರದಲ್ಲಿನ ಅದರ ಸರ್ಕಾರವು ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನಾತ್ಮಕ ಗಣರಾಜ್ಯದ ಮೇಲೆ ಸತತ ಹಲ್ಲೆ ನಡೆಸುತ್ತಿರುವುದರ ಕುರಿತಾದ ನನ್ನ ಗಂಭೀರ ಕಳವಳವನ್ನು ತಿಳಿಸಲು ಈ ಪತ್ರವನ್ನು ನಾನು ಬರೆಯುತ್ತಿದ್ದೇನೆ' ಎಂದು ಮಮತಾ ಅವರು ಮೂರು ಪುಟಗಳ ಪತ್ರದಲ್ಲಿ ಹೇಳಿದ್ದಾರೆ.
ಹೌದು ಬಿಜೆಪಿ ನಾಯಕನಿಗೆ ಕರೆ ಮಾಡಿದ್ದೆ, ತಪ್ಪೇನಿದೆ: ಮಮತಾ ಬ್ಯಾನರ್ಜಿ
ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ, ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್, ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಸೇರಿದಂತೆ 15 ನಾಯಕರಿಗೆ ಮಮತಾ ಪತ್ರ ಬರೆದಿದ್ದಾರೆ.
ಇತ್ತೀಚೆಗೆ ಸಂಸತ್ನ ಎರಡೂ ಸದನಗಳಲ್ಲಿ ಅಂಗೀಕಾರಗೊಂಡ ವಿವಾದಾತ್ಮಕ ರಾಷ್ಟ್ರೀಯ ರಾಜಧಾನಿ ದೆಹಲಿ ಪ್ರದೇಶ (ತಿದ್ದುಪಡಿ) ಮಸೂದೆ ಕುರಿತು ಪ್ರಸ್ತಾಪಿಸಿರುವ ಮಮತಾ, ಇದು ಅತ್ಯಂತ ಆಪತ್ಕಾರಿ ಬೆಳವಣಿಗೆ ಎಂದು ಹೇಳಿದ್ದಾರೆ.
ಬ್ಯಾಂಡೇಜ್ ಸುತ್ತಿದ ಕಾಲಿನಲ್ಲೇ ರಾಷ್ಟ್ರಗೀತೆಗೆ ಎದ್ದುನಿಂತ ಮಮತಾ ಬ್ಯಾನರ್ಜಿ
'ಎನ್ಸಿಟಿ ಮಸೂದೆಯು ಭಾರತ ಗಣರಾಜ್ಯದ ಒಕ್ಕೂಟ ವ್ಯವಸ್ಥೆಯ ಮೇಲಿನ ನೇರ ದಾಳಿಯಾಗಿದೆ. ಇದು ರಾಷ್ಟ್ರೀಯ ರಾಜಧಾನಿಯ ಜನರ ಅಧಿಕಾರಗಳನ್ನು ಕಸಿದುಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಗಳನ್ನು ಅಣಕಿಸುತ್ತದೆ' ಎಂದು ಬರೆದಿದ್ದಾರೆ.