ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರಿಗೆ ರಕ್ಷಣೆ ಕೊಡಿ ಎಂದ ಮಮತಾ ಬ್ಯಾನರ್ಜಿ!
ಕೋಲ್ಕತ್ತಾ, ಮಾರ್ಚ್ 30: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಹಲ್ಲೆ ಗಾಯಗೊಂಡಿದ್ದಾರೆ ಎನ್ನಲಾದ ಟಿಎಂಸಿ ಕಾರ್ಯಕರ್ತರ ನಿವಾಸಕ್ಕೆ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮಂಗಳವಾರ ಭೇಟಿ ನೀಡಿದರು.
ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಲರಾಂಪುರ್ ಗ್ರಾಮದಲ್ಲಿ ಬಿಜೆಪಿಯ ಗೂಂಡಾಗಳು ಟಿಎಂಸಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಟಿಎಂಸಿ ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ದೀದಿ ಆಗ್ರಹಿಸಿದ್ದಾರೆ.
ಟಿಎಂಸಿ ಕಾರ್ಯಕರ್ತನ ಮನೆ ಮೇಲೆ ದಾಳಿ; ಪಶ್ಚಿಮ ಬಂಗಾಳದಲ್ಲಿ ತಾರಕಕ್ಕೇರಿದ ಟಿಎಂಸಿ-ಬಿಜೆಪಿ ಕಾದಾಟ
ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆಯು ಇದೀಗ ಚುನಾವಣಾ ಆಯೋಗದ ವ್ಯಾಪ್ತಿಗೆ ಬರುತ್ತದೆ. ಈ ಹಿನ್ನೆಲೆ ಟಿಎಂಸಿ ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ಸಂಘರ್ಷ:
ಕಳೆದ ಮಾರ್ಚ್ 29ರಂದು ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರತೀಯ ಜನತಾ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ಸಂಘರ್ಷ ನಡೆದಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು ನಡೆಸಿದ ಹಲ್ಲೆಯಿಂದ ಮೂವರು ಟಿಎಂಸಿ ಕಾರ್ಯಕರ್ತರು ಗಾಯಗೊಂಡಿದ್ದರು ಎಂದು ತಿಳಿದು ಬಂದಿತ್ತು. ಈ ಹಿನ್ನೆಲೆ ಮಂಗಳವಾರ ಚುನಾವಣಾ ಪ್ರಚಾರದ ನಡುವೆ ಗಾಯಗೊಂಡ ಟಿಎಂಸಿ ಕಾರ್ಯಕರ್ತರನ್ನು ಭೇಟಿ ಮಾಡಿದ ಮಮತಾ ಬ್ಯಾನರ್ಜಿ ಅವರಿಗೆ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡರು.
ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 1ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.