"ಮಮತಾ ಬ್ಯಾನರ್ಜಿ ಗೆದ್ದರೆ ಪಶ್ಚಿಮ ಬಂಗಾಳವೇ ಮಿನಿ ಪಾಕಿಸ್ತಾನ"!
ಕೋಲ್ಕತ್ತಾ, ಮಾರ್ಚ್ 29: ಪಶ್ಚಿಮ ಬಂಗಾಳದ ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದ ಮತದಾರರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ ನೀಡಿದರೆ ಈ ಕ್ಷೇತ್ರ ಮಿನಿ ಪಾಕಿಸ್ತಾನ ಆಗಲಿದೆ ಎಂದು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.
ಏಪ್ರಿಲ್ 1ರಂದು ನಡೆಯುವ ಎರಡನೇ ಹಂತದ ಚುನಾವಣೆಯಲ್ಲಿ ನಂದಿಗ್ರಾಮ್ ವಿಧಾನಸಭಾ ಕ್ಷೇತ್ರಕ್ಕೂ ಮತದಾನ ನಡೆಯಲಿದೆ. ಈ ಹಿನ್ನೆಲೆ ಪ್ರಚಾರ ನಡೆಸಿದ ಸುವೇಂದು ಅಧಿಕಾರಿ ಅವರು ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಅವರು ಬೇಗಂ ಎಂದು ಕರೆದಿದ್ದಾರೆ. "ಬೇಗಂ ಅವರು ಈದ್-ಮುಬಾರಕ್ ಬದಲಿಗೆ ಈದ್-ಹೋಳಿ ಎನ್ನುತ್ತಿದ್ದಾರೆ, ಅವರನ್ನು ಹೀಗೆ ಬಿಟ್ಟರೆ ರಾಜ್ಯವನ್ನು ಮಿನಿ ಪಾಕಿಸ್ತಾನವಾಗಿ ಮಾಡುತ್ತಾರೆ" ಎಂದು ಲೇವಡಿ ಮಾಡಿದರು.

ಬಿಜೆಪಿ ಮತ್ತು ಟಿಎಂಸಿ ನಡುವೆ ಮಾತಿನ ಸಮರ
ಏಪ್ರಿಲ್ 1ರಂದು ನಡೆಯುವ ಎರಡನೇ ಹಂತದ ಚುನಾವಣೆಯಲ್ಲಿ ನಂದಿಗ್ರಾಮ್ ವಿಧಾನಸಭಾ ಕ್ಷೇತ್ರವು ತೀವ್ರ ಕುತೂಹಲ ಕೆರಳಿಸಿದೆ. ಡಿಸೆಂಬರ್ ತಿಂಗಳಿನಲ್ಲಿ ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾದ ಸುವೇಂದು ಅಧಿಕಾರಿಗೆ ಟಿಕೆಟ್ ನೀಡಲಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸುವ ಕಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸುವೇಂದು ಅಧಿಕಾರಿ ಪೈಪೋಟಿಗೆ ಇಳಿದಿದ್ದಾರೆ. ಪರಸ್ಪರ ಉಭಯ ನಾಯಕರ ನಡುವೆ ಮಾತಿನ ಸಮರ ಮುಂದುವರಿದಿದೆ.

ದೀದಿಗೆ ಕಾಡುತ್ತಿದೆಯಾ ಸೋಲಿನ ಭೀತಿ?
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದಿಢೀರನೇ ಬದಲಾಗುತ್ತಿದ್ದಾರೆ. ಇತ್ತೀಚಿಗೆ ಅವರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಅಂದರೆ ಅವರಿಗೆ ಸೋಲಿನ ಭೀತಿ ಕಾಡುತ್ತಿದೆಯಾ ಎಂದು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಪ್ರಶ್ನೆ ಮಾಡಿದ್ದಾರೆ.

ಹಿಂದೂ ಮತಗಳನ್ನು ಸೆಳೆಯಲು ಸುವೇಂದು ಅಧಿಕಾರಿ ತಂತ್ರ
ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂಗಳ ಭಾವನೆಗಳನ್ನು ಸೆಳೆಯಲು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ ಮಮತಾ ಬ್ಯಾನರ್ಜಿ ವಿರುದ್ಧ ಸಮಾನತೆ ಅಸ್ತ್ರ ಪ್ರಯೋಗಿಸಲಾಗುತ್ತಿದೆ. ಆ ಮೂಲಕ ಹಿಂದೂ ಮತದಾರರನ್ನು ಸೆಳೆಯಲು ತಂತ್ರ ಹೆಣೆಯಲಾಗುತ್ತಿದೆ.

ದೀದಿಯ ಹೆಲಿಕಾಪ್ಟರ್, ಸೀರೆ, ಶೂಗಳ ಬಗ್ಗೆ ಸುವೇಂದು ಮಾತು
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪರವಾಗಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ, ರಾಜ್ಯದಲ್ಲೂ ಅದೇ ರೀತಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು. ಇದೇ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದರು. ಈ ಮೊದಲ ಮಮತಾ ಬ್ಯಾನರ್ಜಿ ಕಾರಿನಲ್ಲಿ ಸಂಚರಿಸುತ್ತಿದ್ದರು, ಇದೀಗ ಹೆಲಿಕಾಪ್ಟರ್ ನಲ್ಲಿ ಸಂಚರಿಸುತ್ತಾರೆ. ಮೊದಲು ಅಜಂತಾ ಶೂಗಳನ್ನು ಧರಿಸುತ್ತಿದ್ದ ಅವರು, ಬ್ರಾಡೆಂಡ್ ಶೂಗಳನ್ನು ಹಾಕಿಕೊಳ್ಳುತ್ತಾರೆ. ಇದಕ್ಕೂ ಮೊದಲು 400 ಸೀರೆ ಉಡುತ್ತಿದ್ದ ಅವರು ಇಂದು 4000 ರೂಪಾಯಿ ಸೀರೆಯನ್ನು ಉಟ್ಟುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಮಮತಾ ಬ್ಯಾನರ್ಜಿಗೆ ಸುವೇಂದು ಅಧಿಕಾರಿ ಸವಾಲು
ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ಆಗಿರುವ ಮಮತಾ ಬ್ಯಾನರ್ಜಿ ಅವರನ್ನು ಈ ಬಾರಿ 50,000 ಮತಗಳಿಂದ ಬಿಜೆಪಿ ಸೋಲಿಸಲಿದೆ ಎಂದು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಸವಾಲು ಹಾಕಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27ರಂದು ರಾಜ್ಯದ 30 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ. ಇದರ ಬಳಿಕ ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.












Click it and Unblock the Notifications