ಮಮತಾ ಬ್ಯಾನರ್ಜಿಯಿಂದ ಹಿಂಸಾಚಾರಕ್ಕೆ ಪ್ರಚೋದನೆ; ಪ್ರಿಯಾಂಕಾ ಟಿಬ್ರೆವಾಲ್ ಆರೋಪ
ಕೋಲ್ಕತ್ತಾ, ಸೆಪ್ಟೆಂಬರ್ 27: ಪಶ್ಚಿಮ ಬಂಗಾಳ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧೆಗಿಳಿದಿರುವ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್, ಪಶ್ಚಿಮ ಬಂಗಾಳ ಸಿಎಂ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಮೇಲೆ ಹರಿಹಾಯ್ದಿದ್ದಾರೆ.
ರಾಜ್ಯದಲ್ಲಿ ಉಪಚುನಾವಣೆ ನೆಪದಲ್ಲಿ ಅಶಾಂತಿಗೆ ಪ್ರಚೋದನೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಸೋಮವಾರ ಈ ಸಂಬಂಧ ಮಾಧ್ಯಮದೊಂದಿಗೆ ಮಾತನಾಡಿದ ಪ್ರಿಯಾಂಕಾ, 'ಪಶ್ಚಿಮ ಬಂಗಾಳ ಜನರ ಒಳಿತಿನ ಕುರಿತು ನಾವು ಯೋಚನೆ ಮಾಡುತ್ತಿದ್ದರೆ, ಮಮತಾ ಬ್ಯಾನರ್ಜಿ ಜನರ ಮೇಲೆ ದಾಳಿಗೆ ಪ್ರಚೋದನೆ ನೀಡುತ್ತಿದ್ದಾರೆ. ಸಿಎಂ ಸ್ಥಾನವನ್ನು ಮರಳಿ ಪಡೆಯಲು ರಕ್ತ ಹರಿಸುತ್ತಿದ್ದಾರೆ' ಎಂದು ದೂರಿದ್ದಾರೆ.

'ಪಶ್ಚಿಮ ಬಂಗಾಳದ ಬಗೆಗಾಗಲೀ ಅಥವಾ ನಾಗರಿಕರ ಮೇಲಾಗಲೀ ಅವರಿಗೆ ಯಾವುದೇ ಕಾಳಜಿಯಿಲ್ಲ. ಅವರಿಗೆ ತಮ್ಮ ಸ್ಥಾನ, ಕುರ್ಚಿ ಕಂಡರೆ ಮಾತ್ರ ಪ್ರೀತಿ' ಎಂದು ಟೀಕಿಸಿದ್ದಾರೆ.
ದಿಲೀಪ್ ಘೋಷ್ ಮೇಲೆ ಹಲ್ಲೆ ಆರೋಪ:
ಪಶ್ಚಿಮ ಬಂಗಾಳದಲ್ಲಿ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ಕೊನೆ ದಿನವಾದ ಸೋಮವಾರ ಬಿಜೆಪಿ ಹಾಗೂ ಟಿಎಂಸಿ ನಡುವೆ ವಾಗ್ವಾದ ಉಂಟಾಗಿದೆ. ಸೋಮವಾರ ತೃಣಮೂಲ ಕಾಂಗ್ರೆಸ್ ಬೆಂಬಲಿಗರು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಪರ ಪ್ರಚಾರ ಮಾಡುತ್ತಿದ್ದ ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ದಿಲೀಪ್ ಘೋಷ್ ಅವರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಭವಾನಿಪುರದ ಜಡುಬಾಬರ್ ಬಜಾರ್ ಬಳಿ ಟಿಎಂಸಿ ಬೆಂಬಲಿಗರು ದಿಲೀಪ್ ಘೋಷ್ ಪ್ರಚಾರ ಮಾಡುತ್ತಿದ್ದ ಮಾರ್ಗವನ್ನು ಬಂದ್ ಮಾಡಿ ಅವರನ್ನು ತಳ್ಳಿದ್ದಾರೆ ಎಂಬ ಆರೋಪ ಬಂದಿದೆ. ದಿಲೀಪ್ ಘೋಷ್ ವೈಯಕ್ತಿಕ ಭದ್ರತಾ ಸಿಬ್ಬಂದಿ ಹಾಗೂ ಟಿಎಂಸಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿಯೂ ಉಂಟಾಗಿತ್ತು.

'ಇದು ಪಶ್ಚಿಮ ಬಂಗಾಳದ ಸದ್ಯದ ಪರಿಸ್ಥಿತಿ. ತೃಣಮೂಲ ಕಾಂಗ್ರೆಸ್ ಪ್ರಚಾರ ಮಾಡಲೂ ಬಿಡುತ್ತಿಲ್ಲ. ನಾನು ನನ್ನ ಅಭ್ಯರ್ಥಿ ಪರ ಪ್ರಚಾರ ಮಾಡಲು ಬಂದರೆ ನನ್ನ ಮೇಲೆ ಹಲ್ಲೆ ನಡೆಸಿದರು. ರಾಜ್ಯದಲ್ಲಿ ಪ್ರಜಾಪ್ರಭುತ್ವವಿಲ್ಲ ಎಂಬುದನ್ನು ಇದು ತೋರುತ್ತದೆ. ನಾನು ದೂರು ನೀಡುತ್ತೇನೆ' ಎಂದು ದಿಲೀಪ್ ಘೋಷ್ ಹೇಳಿದ್ದಾರೆ.
ಈ ಘಟನೆ ಬೆನ್ನಲ್ಲೇ ಟಿಎಂಸಿ ವಿರುದ್ಧ ಬಿಜೆಪಿ ನಾಯಕರು ಟೀಕಾ ಬಾಣಗಳನ್ನು ಬಿಟ್ಟಿದ್ದಾರೆ. 'ಹಿರಿಯರ ಪಾದಗಳಿಗೆ ನಮಿಸುವುದು ಬಂಗಾಳದ ಸಂಸ್ಕೃತಿ. ಆದರೆ ದಿಲೀಪ್ ಘೋಷ್ ಅವರ ವಯಸ್ಸನ್ನೂ ಲೆಕ್ಕಿಸದೇ ಅವರ ಮೇಲೂ ಕೈ ಮಾಡಿದ್ದಾರೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ ಟೀಕಿಸಿದ್ದಾರೆ.
ಸೆಪ್ಟೆಂಬರ್ 30ರಂದು ನಿಗದಿಯಾಗಿರುವ ಉಪಚುನಾವಣೆಗೆ ಪಶ್ಚಿಮ ಬಂಗಾಳದ ಭವಾನಿಪುರ ಸಜ್ಜಾಗುತ್ತಿದ್ದು, ಬಿಜೆಪಿ ಹಾಗೂ ಟಿಎಂಸಿ ಪ್ರಚಾರ ಬಿರುಸಾಗಿ ಸಾಗಿದೆ. ಸೋಮವಾರ ಪ್ರಚಾರಕ್ಕೆ ಕೊನೆಯ ದಿನವಾಗಿದೆ.
ಈಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಸ್ಪರ್ಧಿಸಿದ್ದ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಕೆಲವೇ ಮತಗಳಿಂದ ಮಮತಾ ಬ್ಯಾನರ್ಜಿ ಸೋತಿದ್ದು, ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲು ಉಪಚುನಾವಣೆಯಲ್ಲಿ ಗೆಲುವು ಅನಿವಾರ್ಯವಾಗಿದೆ. ಬಿಜೆಪಿಯು ವಕೀಲೆಯಾದ ಪ್ರಿಯಾಂಕ ಟಿಬ್ರೆವಾಲ್ರನ್ನು ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿಯ ಎದುರು ಕಣಕ್ಕೆ ಇಳಿಸಿದೆ. ಭವಾನಿಪುರ ಕ್ಷೇತ್ರದಲ್ಲಿ ಎರಡೂ ಕಡೆಗಳ ಪ್ರಚಾರ ಬಿರುಸಾಗಿ ನಡೆದಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲನ್ನುಂಡಿದ್ದರು. ಆದರೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಭರ್ಜರಿ ಜಯಗಳಿಸಿದ ಹಿನ್ನೆಲೆ ಪಕ್ಷ ಮಮತಾ ಬ್ಯಾನರ್ಜಿಯನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಇದೀಗ ತಮ್ಮ ಈ ಮುಖ್ಯಮಂತ್ರಿ ಸ್ಥಾನವನ್ನು ಮಮತಾ ಉಳಿಸಿಕೊಳ್ಳಬೇಕಾದರೆ ನವೆಂಬರ್ 5ರ ಒಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications