ಹೌರಾದಲ್ಲಿ ಪ್ರತಿಭಟನೆ: ಕಠಿಣ ಕ್ರಮದ ಭರವಸೆ ನೀಡಿದ ಮಮತಾ
ಹೌರಾ ಜೂನ್ 11: ಹೌರಾದ ಪಂಚ್ಲಾ ಬಜಾರ್ನಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಹೊಸ ಘರ್ಷಣೆ ಸಂಭವಿಸಿದೆ. ಈ ನಡುವೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಭರವಸೆ ನೀಡಿದ್ದಾರೆ. ಜೊತೆಗೆ ಹಿಂಸಾಚಾರದ ಹಿಂದೆ ಕೆಲವು ರಾಜಕೀಯ ಪಕ್ಷಗಳು ಇವೆ ಎಂದು ಹೇಳಿದ್ದಾರೆ.
ಈ ಕುರಿತು ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಮಮತಾ ಬ್ಯಾನರ್ಜಿ, "ನಾನು ಈ ಹಿಂದೆಯೂ ಹೇಳಿದ್ದೇನೆ... ಕಳೆದ ಎರಡು ದಿನಗಳಿಂದ ಹೌರಾದಲ್ಲಿ ಹಿಂಸಾತ್ಮಕ ಘಟನೆಗಳಿಂದ ದೈನಂದಿನ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ರಾಜಕೀಯ ಪಕ್ಷಗಳು ಇದರ ಹಿಂದೆ ಇವೆ ಮತ್ತು ಅವರು ಗಲಭೆಯನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ ಮತ್ತು ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು, ಬಿಜೆಪಿ ಪಾಪಗಳನ್ನು ಮಾಡುತ್ತದೆ. ಅದರಿಂದ ಜನರು ತೊಂದರೆ ಅನುಭವಿಸುತ್ತಾರೆ'' ಎಂದು ಹೇಳಿದ್ದಾರೆ.
ಶುಕ್ರವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹೌರಾ ಪೊಲೀಸರು ನಿನ್ನೆ ರಾತ್ರಿಯಿಂದ 70 ಜನರನ್ನು ಬಂಧಿಸಿದ್ದಾರೆ. ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸುತ್ತಿದ್ದಂತೆಯೇ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಹಿಂಸಾತ್ಮಾಕ ಘಟನೆಯಿಂದಾಗಿ ಉಲುಬೇರಿಯಾ ಉಪವಿಭಾಗದಲ್ಲಿ ವಿಧಿಸಲಾಗಿದ್ದ CrPC ಯ ಸೆಕ್ಷನ್ 144 ಅನ್ನು ಜೂನ್ 15 ರವರೆಗೆ ವಿಸ್ತರಿಸಲಾಗಿದೆ. ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಜಿಲ್ಲೆಯ ಹಲವಾರು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.
আগেও বলেছি, দুদিন ধরে হাওড়ার জনজীবন স্তব্ধ করে হিংসাত্মক ঘটনা ঘটানো হচ্ছে । এর পিছনে কিছু রাজনৈতিক দল আছে এবং তারা দাঙ্গা করাতে চায়- কিন্তু এসব বরদাস্ত করা হবে না এবং এ সবের বিরুদ্ধে কঠোর ব্যবস্থা হবে। পাপ করল বিজেপি, কষ্ট করবে জনগণ?
— Mamata Banerjee (@MamataOfficial) June 11, 2022
ಜೊತೆಗೆ ಬಿಜೆಪಿ ಸಂಸದ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಸೌಮಿತ್ರಾ ಖಾನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯದಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಒತ್ತಾಯಿಸಿದ್ದಾರೆ.
ಕೋಲ್ಕತ್ತಾದಲ್ಲಿ ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯಿಸಿ ನಿನ್ನೆಯಿಂದ ಪ್ರತಿಭಟನೆ ಚುರುಕುಗೊಂಡಿದೆ. ಬಿಜೆಪಿ ವಕ್ತಾರರಾಗಿದ್ದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಪ್ರತಿಭಟಿಸಿ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಹಲವು ಸ್ಥಳಗಳಲ್ಲಿ ಪ್ರತಿಭಟನಾಕಾರರು ರಸ್ತೆ ತಡೆಗಳನ್ನು ಮಾಡಿದರು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದಾಗ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.