ಮಮತಾ ಬ್ಯಾನರ್ಜಿಯನ್ನು ಭೇಟಿಯಾಗಿ ರೈತ ಮುಖಂಡ ರಾಕೇಶ್ ಟಿಕಾಯತ್ ಮಾತುಕತೆ
ಕೊಲ್ಕತ್ತಾ ಜೂನ್ 9: ಭಾರತೀಯ ಕಿಸಾನ್ ಯೂನಿಯನ್ನ ಮುಖಂಡ ರಾಕೇಶ್ ಟಿಕಾಯತ್ ಬುಧವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ರೈತರ ಹೋರಾಟದ ಬಗ್ಗೆ ಚರ್ಚೆ ನಡೆಸಲಾಗಿದೆ.
ಮಾತುಕತೆಯ ಬಳಿಕ ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. "ಕೈಗಾರಿಕೆಗಳು ತೊಂದರೆ ಅನುಭವಿಸುತ್ತಿದೆ, ಔಷಧಿಗಳ ಮೇಲೆಯೂ ಜಿಎಸ್ಟಿ ವಿಧಿಸಲಾಗುತ್ತಿದೆ. ತಮ್ಮ ಬೇಡಿಕೆಗಳನ್ನು ಮುಂದಿಟ್ಟು ರೈತರು ಸತತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಕಳೆದ 7 ತಿಂಗಳಿಂದ ಕೇಂದ್ರ ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸುವ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ನಾನು ಒತ್ತಾಯಿಸುತ್ತೇನೆ" ಎಂದು ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ.
ಓದಿ ತಿಳಿಯಿರಿ: ಎಚ್ಎಎಲ್ಗೆ ಹೊಡೆತ ಕೊಟ್ಟ ಕೊರೊನಾವೈರಸ್!
ಬಳಿಕ ರೈತ ಮುಖಂಡ ರಾಕೇಶ್ ಮಾಧ್ಯಮಗಳಿಗೆ ಹೇಳಿಕೆಯನ್ನು ನೀಡಿದ್ದು "ರೈತರ ಆಂದೋಲನಕ್ಕೆ ತನ್ನ ಬೆಂಬಲವನ್ನು ಮುಂದುವರಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಈ ಬೆಂಬಲಕ್ಕೆ ಅವರಿಗೆ ನಾವು ಆಭಾರಿಗಳಾಗಿದ್ದೇವೆ. ಪಶ್ಚಿಮ ಬಂಗಾಳ ಮಾದರೊ ರಾಜ್ಯವಾಗಿ ಕರ್ತವ್ಯ ನಿರ್ವಹಿಸಬೇಕು ಹಾಗೂ ಇಲ್ಲಿನ ರೈತರು ಹೆಚ್ಚಿನ ಲಾಭವನ್ನು ಪಡೆಯುವಂತಾಗಬೇಕು" ಎಂದು ಟಿಕಾಯತ್ ಪ್ರತಿಕ್ರಿಯಿಸಿದ್ದಾರೆ.
ಈ ಮಧ್ಯೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು. ಆದರೆ ಮೂರು ಕೃಷಿ ಕಾನೂನುಗಳ ನಿಬಂಧನೆಗಳ ಬಗ್ಗೆ ತಮ್ಮ ತರ್ಕಬದ್ಧವಾದ ಆಕ್ಷೇಪಣೆಯನ್ನು ವ್ಯಕ್ತಪಡಿಸಬೇಕು ಎಂದು ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಸಂಘಟನೆಗಳಿಗೆ ಕೇಳಿಕೊಂಡಿದ್ದಾರೆ.
ವಿವಾದಾತ್ಮಕ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಪಡೆಯುವ ಸಲುವಾಗಿ ಸರ್ಕಾರ ಹಾಗೂ ಯೂನಿಯನ್ಗಳ ನಡುವೆ 11 ಬಾರಿ ಮಾತುಕತೆಗಳು ನಡೆದಿದೆ. ಆದರೆ ಕೇಂದ್ರ ಸರ್ಕಾರ ಹಾಗೂ ರೈತ ಸಂಘಟನೆಗಳು ತಮ್ಮ ಪಟ್ಟು ಸಡಿಲಿಸಲು ಒಪ್ಪಿಕೊಳ್ಳದ ಕಾರಣ ಈ ತಿಕ್ಕಾಟ ಮುಂದುವರಿದುಕೊಂಡೇ ಬಂದಿದೆ. ಈ ವಿಚಾರವಾಗಿ ಜನವರಿ 22ರಂದು ಕೊನೆಯ ಬಾರಿಗೆ ಮಾತುಕತೆ ನಡೆಸಲಾಗಿತ್ತು. ಜನವರಿ 26ರಂದು ರೈತರ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ವ್ಯಾಪಕ ಹಿಂಸಾಚಾರಗಳು ನಡೆದ ನಂತರ ಸರ್ಕಾರ ಹಾಗೂ ಯೂನಿಯನ್ಗಳ ನಡುವಿನ ಮಾತುಕತೆ ನಡೆದಿಲ್ಲ.
ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಾವಿರಾರು ರೈತರು ದೆಹಲಿ ಗಡಿ ಭಾಗಕ್ಕೆ ಆಗಮಿಸಿ ಸತತವಾಗಿ ಆರು ತಿಂಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಪ್ರಮುಖವಾಗಿ ಪಂಜಾಬ್, ಹರಿಯಾಣ ಹಾಗೂ ಉತ್ತರ ಪ್ರದೇಶದ ಪಶ್ಚಿಮ ಭಾಗದ ರೈತರು ಪಾಲ್ಗೊಂಡಿದ್ದರು. ವ್ಯಾಪಕ ವಿರೋಧದ ನಂತರ ಸುಪ್ರೀಂಕೋರ್ಟ್ ಈ ಮೂರು ಕಾಯ್ದೆಗಳ ಅನುಷ್ಟಾನಕ್ಕೆ ಮುಂದಿನ ಆದೇಶದವರೆಗೆ ತಡೆ ನೀಡಿದ್ದು ಪರಿಹಾರವನ್ನು ಕಂಡುಹಿಡಿಯಲು ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಿದೆ.