"900 ಕೋಟಿ ರೂ. ಕಲ್ಲಿದ್ದಲು ಹಗರಣದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ"
ಕೋಲ್ಕತ್ತಾ, ಏಪ್ರಿಲ್ 04: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ನಡುವೆ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಗಂಭೀರ ಆರೋಪ ಮಾಡಿದ್ದಾರೆ.
ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲ್ಲಿದ್ದಲು ಅಕ್ರಮದಲ್ಲಿ ಮುಖ್ಯಮಂತ್ರಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಹೇಳಿದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಲ್ಲಿದ್ದಲು ಹಗರಣದಲ್ಲಿ 900 ಕೋಟಿ ರೂಪಾಯಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದರು.
ಸಿಎಂ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಗಣೇಶ್ ಬಗಾಡಿಯಾ ಜೊತೆ ನಿಕಟ ಸಂಬಂಧ ಹೊಂದಿದ್ದು, ಅವರ ವಿರುದ್ಧವೂ ಗಂಭೀರ ಆರೋಪಗಳಿವೆ. ಸೋದರಳಿಯನ ಮತ್ತೊಬ್ಬ ಮಿತ್ರ ಬಿಕಾಶ್ ಮಿಶ್ರಾರನ್ನು ಈಗಾಗಲೇ ಬಂಧಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಮತ್ತು ಐಪಿಎಸ್ ಅಧಿಕಾರಿಗಳು ಎಲ್ಲರೂ ಈ ಅಕ್ರಮದಲ್ಲಿಸಿಲುಕಿದ್ದಾರೆ ಎಂದು ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ದೂರಿದ್ದಾರೆ. ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ನಡೆಸಿದ ಮೂರು ಸಂಭಾಷಣೆಗಳ ಆಡಿಯೋ ಇದೀಗ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಸೃಷ್ಟಿಸಿದೆ.

ಪೊಲೀಸ್ ವಾಹನದಲ್ಲೇ ಕೋಟಿ ಕೋಟಿ ವರ್ಗಾವಣೆ
ಪಶ್ಚಿಮ ಬಂಗಾಳದಲ್ಲಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾದ ಬಂಕುರಾ ಜಿಲ್ಲೆಯ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಮಿಶ್ರಾರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಅಶೋಕ್ ಮಿಶ್ರಾ ಅಕ್ರಮ ಹಣ ವರ್ಗಾವಣೆಯ ಪ್ರಮುಖ ಕೊಂಡಿಯಾಗಿದ್ದರು. ಪೊಲೀಸ್ ವಾಹನಗಳಲ್ಲಿ ಶಾಂತಿನಿಕೇತನಕ್ಕೆ ಹಣ ವರ್ಗಾವಣೆ ಮಾಡಲು ಸಹಾಯ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಕಲ್ಲಿದ್ದಲು ಹಗರಣದ ಆರೋಪಿ ಜೊತೆ ಚರ್ಚಿಸಿದ ಆಡಿಯೋ
ಪಶ್ಚಿಮ ಬಂಗಾಳದಲ್ಲಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿ ಗಣೇಶ್ ಬಗಾಡಿಯಾ ಮತ್ತು ಹಗರಣದ ಪ್ರಮುಖ ಆರೋಪಿ ಆಗಿರುವ ಅನುಪ್ ಮಾಜಿ ಅಲಿಯಾಸ್ ಲಾಲಾ ನಡುವೆ ನಡೆದಿರುವ ಸಂಭಾಷಣೆಯ ಆಡಿಯೋ ಬಿಡುಗಡೆಯಾಗಿದೆ. ಈ ಆಡಿಯೋ ಸಂಭಾಷಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್ ಬ್ಯಾನರ್ಜಿಗೆ ಹಣ ಹೇಗೆ ಸೇರುತ್ತಿತ್ತು ಎಂಬುದರ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

ಬಂಗಾಳ ಸಿಎಂ ಅಳಿಯನಿಗೆ 35 ಕೋಟಿ ರೂಪಾಯಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್ ಬ್ಯಾನರ್ಜಿ ಅವರಿಗೆ ಆರಂಭದಲ್ಲಿ 15 ರಿಂದ 20 ಕೋಟಿ ರೂಪಾಯಿ ಕಳುಹಿಸಿ ಕೊಡಲಾಗುತ್ತಿತ್ತು. ಎರಡರಿಂದ ಮೂರು ವರ್ಷಗಳ ನಂತರ ಪ್ರತಿ ತಿಂಗಳು 15 ರಿಂದ 20 ಕೋಟಿ ರೂಪಾಯಿ ಹಣವನ್ನು ನೀಡಲಾಗುತ್ತಿತ್ತು ಎಂಬ ಬಗ್ಗೆ ಸರ್ಕಾರಿ ಅಧಿಕಾರಿ ಗಣೇಶ್ ಬಗಾಡಿಯಾ ಮತ್ತು ಅನುಪ್ ಮಾಜಿ ಚರ್ಚಿಸಿದ್ದಾರೆ.

ಟಿಎಂಸಿ ವಿರುದ್ಧ ಬಿಜೆಪಿ ಆರೋಪಗಳ ಅಸ್ತ್ರ
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಆಡಿಯೋ ಸಂಭಾಷಣೆ ಬಿಡುಗಡೆ ಆಗುತ್ತಿದ್ದಂತೆ ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಟಿಎಂಸಿ ವಿರುದ್ಧ ಬಿಜೆಪಿ ನಾಯಕರು ಮೇಲಿಂದ ಮೇಲೆ ಮುಗಿಬೀಳುತ್ತಿದ್ದಾರೆ. ಸಿಎಂ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಬ್ಯಾನರ್ಜಿ ಜೊತೆಗೆ ಅಪ್ತರಾಗಿ ಗುರುತಿಸಿಕೊಂಡಿರುವ ರಾಜಕಾರಣಿಗಳು ಮತ್ತು ಹಿರಿಯ ಅಧಿಕಾರಿಗಳ ವಿರುದ್ಧ ಕಾನೂನು ಅಡಿ ಕ್ರಮ ತೆಗೆದುಕೊಳ್ಳುವಂತೆ ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಆಗ್ರಹಿಸಿದ್ದಾರೆ.

ಬಂಗಾಳದಲ್ಲಿ ಇನ್ನೂ ಆರು ಹಂತಗಳ ಮತದಾನ ಬಾಕಿ
ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಎರಡು ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.












Click it and Unblock the Notifications