ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷರಾಗಿ ಸುಕಾಂತ ಮಜುಂದಾರ್ ನೇಮಕ
ಕೋಲ್ಕತಾ, ಸೆಪ್ಟೆಂಬರ್ 21: ಇತ್ತೀಚಿಗೆ ಹಲವು ಬಣಗಳಾಗಿ ಒಡೆದು ಹೋಗಿದ್ದ ಬಿಜೆಪಿ ಪಶ್ಚಿಮ ಬಂಗಾಳ ಘಟಕಕ್ಕೆ ಸೋಮವಾರ ಸರ್ಜರಿ ಮಾಡಲಾಗಿದ್ದು, ಇದೀಗ ಹೊಸ ಅಧ್ಯಕ್ಷರನ್ನು ನೇಮಿಸಲಾಗಿದೆ.
ಪಶ್ಚಿಮ ಬಂಗಾಳದ ಬಲೂರ್ಘಾಟ್ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಆಯ್ಕೆಯಾಗಿರುವ ಸಂಸದ ಸುಕಾಂತ ಮಜುಂದಾರ್ರನ್ನು ಪಶ್ಚಿಮ ಬಂಗಾಳ ಘಟಕದ ನೂತನ ಅಧ್ಯಕ್ಷರಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇಮಿಸಿದ್ದಾರೆ.
ಈ ಹಿಂದೆ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ದಿಲೀಪ್ ಘೋಷ್ ಬದಲಿಗೆ ಸುಕಾಂತ ಮಜುಂದಾರ್ರನ್ನು ನೇಮಿಸಿದೆ. ಇನ್ನು ಇದೇ ವೇಳೆ ದಿಲೀಪ್ ಘೋಷ್ರನ್ನು ಬಿಜೆಪಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇದೇ ಸಂದರ್ಭದಲ್ಲಿ ಉತ್ತರಾಖಂಡದ ಮಾಜಿ ರಾಜ್ಯಪಾಲೆ, ಬೇಬಿ ರಾಣಿ ಮೌರ್ಯರನ್ನೂ ಬಿಜೆಪಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ ಸ್ಪರ್ಧಿಸುತ್ತಿರುವ ಪ್ರತಿಷ್ಠಿತ ಭವಾನಿಪುರ ಕ್ಷೇತ್ರ ಸೇರಿದಂತೆ ರಾಜ್ಯದ ವಿವಿಧ ಕ್ಷೇತ್ರಗಳ ವಿಧಾನಸಭಾ ಉಪ ಚುನಾವಣೆಗೆ 10 ದಿನಗಳ ಮುನ್ನ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.
ಮೊದಲ ಬಾರಿಗೆ ಸಂಸದರಾಗಿರುವ ಸುಕಾಂತ ಮಜುಂದಾರ್ ಈ ಹಿಂದೆ ಬಿಜೆಪಿಯ ರಾಜ್ಯ ಚುನಾವಣಾ ನಿರ್ವಹಣಾ ತಂಡದ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅವರು ಉತ್ತರ ಬಂಗಾ ವಲಯಕ್ಕೆ ಪಕ್ಷದ ಸಹ ಸಂಚಾಲಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
"ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ಡಾ. ಸುಕಾಂತ ಮಜುಂದಾರ್ರಿಗೆ ಅಭಿನಂದನೆಗಳು. ಅವರ ಯಶಸ್ಸನ್ನು ನಾನು ಬಯಸುತ್ತೇನೆ," ಎಂದು ಹಿಂದಿನ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಟ್ವೀಟ್ ಮಾಡಿದ್ದಾರೆ.
ಈವರೆಗೆ ಪಶ್ಚಿಮ ಬಂಗಾಳ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ದಿಲೀಪ್ ಘೋಷ್ರಿಗೆ ರಾಷ್ಟ್ರೀಯ ಉಪಾಧ್ಯಕ್ಷರ ಸ್ಥಾನ ನೀಡಿ, ರಾಷ್ಟ್ರಮಟ್ಟದಲ್ಲಿ ಪಕ್ಷದ ಸಂಘಟನೆಗೆ ಬಳಸಿಕೊಳ್ಳಲಾಗುತ್ತಿದೆ. ಕಳೆದ ಮಾರ್ಚ್- ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ದಿಲೀಪ್ ಘೋಷ್ ಬಿಜೆಪಿಯನ್ನು ಮುನ್ನಡೆಸಿದ್ದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯನ್ನು ಅಧಿಕಾರದಿಂದ ಕೆಳಗಿಳಿಸಲು ವಿಫಲರಾದ ಹಿನ್ನೆಲೆಯಲ್ಲಿ ದಿಲೀಪ್ ಘೋಷ್ ಬದಲಾವಣೆ ಅನಿವಾರ್ಯವಾಗಿತ್ತು ಎಂದು ಬಿಜೆಪಿ ಪಕ್ಷದ ಮೂಲಗಳು ಹೇಳಿವೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಹತ್ತಾರು ರೋಡ್ ಶೋ ನಡೆಸಿ, ರಾಜ್ಯದ ಬಹುತೇಕ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದರೂ ಟಿಎಂಸಿಯನ್ನು ಅಧಿಕಾರದಿಂದ ದೂರವಿಡಲು ಸಾಧ್ಯವಾಗಿರಲಿಲ್ಲ. ತಾನು ಸೋತರೂ ಸ್ಪಷ್ಟ ಬಹುಮತದೊಂದಿಗೆ ಮಮತಾ ಬ್ಯಾನರ್ಜಿ ಟಿಎಂಸಿಯನ್ನು ಮೂರನೇ ಬಾರಿಗೆ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು.
294 ಸದಸ್ಯ ಬಲದ ಪಶ್ಚಿಮ ಬಂಗಾಳದ ಇತಿಹಾಸದಲ್ಲಿ ಬಿಜೆಪಿ ಮೊದಲ ಬಾರಿಗೆ 77 ಸ್ಥಾನಗಳಲ್ಲಿ ಜಯ ಗಳಿಸಿತ್ತು. ಆದರೆ ಹಲವು ಶಾಸಕರು ಟಿಎಂಸಿಗೆ ಪಕ್ಷಾಂತರ ಮಾಡಿದ್ದರಿಂದ ಪಕ್ಷದ ಬಲ 71ಕ್ಕೆ ಇಳಿದಿದೆ. ಕಳೆದ ಶನಿವಾರವಷ್ಟೇ ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಕೂಡ ಟಿಎಂಸಿಗೆ ಸೇರಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿಗೂ ದಿಲೀಪ್ ಘೋಷ್ರ ಪದಚ್ಯುತಿಗೂ ಸಂಬಂಧವಿಲ್ಲ. ಘೋಷ್ರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ನವೆಂಬರ್ 2015ರಂದು ನೇಮಿಸಲಾಗಿತ್ತು. ಪಕ್ಷದ ಮುಖ್ಯಸ್ಥರಾಗಿ ಎರಡು ಅವಧಿ ಪೂರ್ಣಗಳಿಸಿದ್ದ ಅವರನ್ನು ಸಹಜವಾಗಿಯೇ ಬದಲಿಸಲಾಗಿದೆ. ಅವರ ಸ್ಥಾನಕ್ಕೆ ಯಾರನ್ನು ತರಬೇಕು ಎಂಬ ಬಗ್ಗೆ ಪಕ್ಷದ ಹಿರಿಯ ನಾಯಕರು ಪರಿಶೀಲನೆ ನಡೆಸುತ್ತಿದ್ದರು. ಹೀಗಾಗಿ ಅವರ ಬದಲಾವಣೆ ತಡವಾಯಿತು ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
ಬಂಗಾಳ ಬಿಜೆಪಿ ಘಟಕವು ಕಳೆದ ಕೆಲವು ತಿಂಗಳುಗಳಲ್ಲಿ ಸರಣಿ ಪಕ್ಷಾಂತರಗಳಿಗೆ ಸಾಕ್ಷಿಯಾಗಿದೆ. ಈ ಹಿಂದೆ ಮೇ ತಿಂಗಳ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದ ಮೂವರು ಶಾಸಕರು ಮತ್ತು ಒಬ್ಬ ಸಂಸದರು ಪಕ್ಷವನ್ನು ತೊರೆದು ಟಿಎಂಸಿ ಸೇರಿದ್ದರು.