ತಬ್ಲೀಗ್ ಜಮಾತ್: ಇನ್ನೂ 69 ವಿದೇಶಿಯರು ನಾಪತ್ತೆ!
ಕೋಲ್ಕತ್ತಾ, ಏಪ್ರಿಲ್ 05 : ತಬ್ಲೀಗ್ ಜಮಾತ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡ ಇನ್ನೂ 69 ಜನರನ್ನು ಪತ್ತೆ ಮಾಡಬೇಕಿದೆ. ಮಾರ್ಚ್ ತಿಂಗಳಿನಲ್ಲಿ ದೆಹಲಿಯ ಮರ್ಕಜ್ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ತಬ್ಲೀಗ್ ಜಮಾತ್ ಧಾರ್ಮಿಕ ಸಭೆ ಕೊರೊನಾ ವೇಗವಾಗಿ ಹರಡಲು ಕಾರಣವಾಗಿದೆ.
ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಈ ಕುರಿತು ಮಾಹಿತಿ ಮಾತನಾಡಿದ್ದಾರೆ. ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ತಬ್ಲೀಗ್ ಜಮಾತ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡ ಇನ್ನು 69 ಜನರನ್ನು ರಾಜ್ಯ ಸರ್ಕಾರ ಪತ್ತೆ ಹಚ್ಚಬೇಕು" ಎಂದು ಒತ್ತಾಯಿಸಿದ್ದಾರೆ.
"ನಾಪತ್ತೆಯಾಗಿರುವವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ಗೆ ಒಳಪಡಿಸಬೇಕು. ಇದರಿಂದಾಗಿ ಕೊರೊನಾ ಹರಡದಂತೆ ತಡೆಯಬಹುದಾಗಿದೆ" ಎಂದು ಹೇಳಿದ್ದಾರೆ.

"ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ತಬ್ಲೀಗ್ ಜಮಾತ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡ 109 ವಿದೇಶಿಯರು ಪಶ್ಚಿಮ ಬಂಗಾಳಕ್ಕೆ ಬಂದಿದ್ದರು. ಇವರಲ್ಲಿ 40 ಜನರನ್ನು ಮಾತ್ರ ಪತ್ತೆ ಹಚ್ಚಿ ಕ್ವಾರಂಟೈನ್ನಲ್ಲಿ ಇಡಲಾಗಿದೆ" ಎಂದರು.
"ಇನ್ನೂ 69 ಜನ ನಾಪತ್ತೆಯಾಗಿದ್ದಾರೆ ಎಂದು ನಾವು ಹೇಳುತ್ತಿದ್ದೇವೆ. ಇವರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಆದರೆ, ನಮ್ಮ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕೈಗಳನ್ನು ತೊಳೆಸಿರಬಹುದು" ಎಂದು ದಿಲೀಪ್ ಘೋಷ್ ಆಕ್ರೋಶ ವ್ಯಕ್ತಪಡಿಸಿದರು.
"ದೆಹಲಿಯಲ್ಲಿನ ಧಾರ್ಮಿಕ ಸಭೆ ಮುಗಿಸಿಕೊಂಡು ಪಶ್ಚಿಮ ಬಂಗಾಳಕ್ಕೆ ಬಂದ 160 ಭಾರತೀಯರನ್ನು ಇದುವರೆಗೂ ಗುರುತಿಸಲು ಸಾಧ್ಯವಾಗಿಲ್ಲ. ಮಮತಾ ಬ್ಯಾನರ್ಜಿ ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿದ್ದಾರೆ" ಎಂದು ದಿಲೀಪ್ ಘೋಷ್ ಆರೋಪಿಸಿದ್ದಾರೆ.
ಟಿಎಂಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. "ದೇಶ ಮತ್ತು ರಾಜ್ಯ ಇಷ್ಟು ದೊಡ್ಡ ಸಂಕಷ್ಟದಲ್ಲಿ ಸಿಲುಕಿರುವಾಗ ಬಿಜೆಪಿ ಕೆಳಮಟ್ಟದ ರಾಜಕೀಯ ಮಾಡುತ್ತಿದೆ" ಎಂದು ದೂರಿದ್ದಾರೆ.












Click it and Unblock the Notifications