ಭವಾನಿಪುರ್ ವಿಧಾನಸಭಾ ಕ್ಷೇತ್ರದಿಂದ ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧೆ?
ಕೋಲ್ಕತ್ತಾ, ಮೇ 21: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ ಟಿಎಂಸಿ ಮುಖ್ಯಸ್ಥೆ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ತಮ್ಮ ಸ್ವಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಒಂದು ಕಾಲದಲ್ಲಿ ಮಮತಾ ಬ್ಯಾನರ್ಜಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸುವೇಂದು ಅಧಿಕಾರಿ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಸವಾಲು ಸ್ವೀಕರಿಸಿದ ಮಮತಾ ಬ್ಯಾನರ್ಜಿ ನಂದಿಗ್ರಾಮ್ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಸಿಎಂಗಳನ್ನು ಬೊಂಬೆಗಳಂತೆ ಕೂರಿಸಿ ಅವಮಾನ ಮಾಡುತ್ತಿದ್ದಾರೆ; ದೀದಿ
ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ ನಂದಿಗ್ರಾಮ್ ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯ ನಾಯಕತ್ವಕ್ಕೆ ಮತದಾರರು ಮಣೆ ಹಾಕಿದರು. ಅಲ್ಪಮತಗಳ ಅಂತರದಲ್ಲಿ ಮಮತಾ ಬ್ಯಾನರ್ಜಿ ಸೋಲು ಅನುಭವಿಸಿದರೂ, ಅವರದ್ದೇ ನೇತೃತ್ವದ ಟಿಎಂಸಿ ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿ ಆಯಿತು.
ಭವಾನಿಪುರ್ ಕ್ಷೇತ್ರದಿಂದ ದೀದಿ ಸ್ಪರ್ಧೆ:
ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಭವಾನಿಪುರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ. 2021ರ ಏಪ್ರಿಲ್ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಭವಾನಿಪುರ್ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿರುವ ಟಿಎಂಸಿ ಶಾಸಕ ಶೋಭಾಂದೇಬ್ ಚಚ್ಟೋಪಾಧ್ಯಾಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಭಾರತ ಸಂವಿಧಾನದ 164ನೇ ವಿಧಿಯ ಪ್ರಕಾರ, ವಿಧಾನಸಭಾ ಸದಸ್ಯರಿಗೆ ಮಾತ್ರ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರುವ ಅಧಿಕಾರ ಇರುತ್ತದೆ. ಒಂದು ವೇಳೆ ಮುಖ್ಯಮಂತ್ರಿ ಅಭ್ಯರ್ಥಿ ಶಾಸಕ ಸ್ಥಾನವನ್ನು ಹೊಂದಿಲ್ಲದಿದ್ದರೆ, ಉಪ ಚುನಾವಣೆಯಲ್ಲಿ ಸ್ಪರ್ಧಿಸಿ 6 ತಿಂಗಳೊಳಗೆ ವಿಧಾನಸಭಾ ಸದಸ್ಯ ಸ್ಥಾನವನ್ನು ಹೊಂದುವುದು ಕಡ್ಡಾಯವಾಗುತ್ತದೆ.