ಬಂಗಾಳಕ್ಕೆ ಬೆಂಬಲವಾಗಿ ಕರ್ನಾಟಕದಲ್ಲೂ ವೈದ್ಯರ ಮುಷ್ಕರ?
ಬೆಂಗಳೂರು, ಜೂನ್ 14: ಕೋಲ್ಕತ್ತಾದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ವೈದ್ಯರ ಮುಷ್ಕರ ದೇಶದ ವಿವಿಧ ರಾಜ್ಯಗಳ ವೈದ್ಯಕೀಯ ಸೇವೆಯ ಮೇಲೂ ಪರಿಣಾಮ ಬೀರಿದೆ.
ಇಷ್ಟು ದಿನ ಬಂಗಾಳಕ್ಕಷ್ಟೇ ಸೀಮಿತವಾಗಿದ್ದ ಮುಷ್ಕರ ಇದೀಗ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿಯನ್ನೂ ವ್ಯಾಪಿಸಿದ್ದು, ಇತ್ತ ಕರ್ನಾಟಕದಲ್ಲೂ ಸರ್ಕಾರಿ ಆಸ್ಪತ್ರೆಯ ವೈದ್ಯರು ಮುಷ್ಕರಕ್ಕೆ ಬೆಂಬಲ ನೀಡಲು ಮುಂದಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಶುಕ್ರವಾರದಂದು "ಆಲ್ ಇಂಡಿಯಾ ಪ್ರೊಟೆಸ್ಟ್ ಡೇ" ಎಂದು ಕರೆದು ರಾಷ್ಟ್ರದಾದ್ಯಂತ ಸರ್ಕಾರಿ ಆಸ್ಪತ್ರೆಯ ವೈದ್ಯರನ್ನು ಮುಷ್ಕರಕ್ಕೆ ಬೆಂಬಲ ನೀಡುವಂತೆ ಬಂಗಾಳದ ವೈದ್ಯರು ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲೂ ವೈದ್ಯರು ಬೆಂಬಲ ನೀಡಿದ್ದೇ ಆದಲ್ಲಿ ರಾಜ್ಯದಲ್ಲಿ, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರಿ ಆಸ್ಪತ್ರೆಗಳ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಜೂನ್ 10 ರಂದು ಮೃತರಾದ 80 ವರ್ಷ ವಯಸ್ಸಿನ ರೋಗಿಯೊಬ್ಬರ ಸಾವಿಗೆ ಕವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ದೂರು ಕಿರಿಯ ವೈದ್ಯರೊಬ್ಬರ ಮೇಲೆ ರೋಗಿಯ ಸಂಬಂಧಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಪರಿಬೊನೊ ಮುಖರ್ಜಿ ಎಂಬ ವೈದ್ಯರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ವಿರುದ್ಧ ನಡೆದ ದೌರ್ಜನ್ಯವನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಸರ್ಕಾರಿ ಆಸ್ಪತ್ರೆಗಳಿಗೆ ಭದ್ರತೆ ನೀಡಲು ಸರ್ಕಾರ ಬದ್ಧವಾದರೆ ಮಾತ್ರ ಪ್ರತಿಭಟನೆಯನ್ನು ಹಿಂದೆ ತೆಗೆದುಕೊಲ್ಳುತ್ತೇವೆ ಎಂದು ಪ್ರತಿಭಟನಾನಿರತ ವೈದ್ಯರು ಆಗ್ರಹಿಸಿದ್ದಾರೆ.












Click it and Unblock the Notifications