ಪಶ್ಚಿಮ ಬಂಗಾಳ ಚುನಾವಣೆ: ಮಮತಾ ವಿರುದ್ಧ ಸುವೇಂದು ಅಧಿಕಾರಿ ಸ್ಪರ್ಧೆ?
ಕೋಲ್ಕತ್ತಾ, ಮಾರ್ಚ್ 04: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಪಕ್ಷದ ಕಾರ್ಯಕರ್ತರು ಸುವೇಂದು ಅಧಿಕಾರಿ ನಂದಿಗ್ರಾಮದಿಂದ ಸ್ಪರ್ಧಿಸಲು ಬಯಸುತ್ತಿದ್ದಾರೆ. ಆದರೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಬಿಜೆಪಿ ಮುಖಂಡ ಮುಕುಲ್ ರಾಯ್ ತಿಳಿಸಿದ್ದಾರೆ.
ಮಮತಾ ಬ್ಯಾನರ್ಜಿ ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೂ ಕಠಿಣ ಸ್ಪರ್ಧೆಯನ್ನು ನೀಡಲಿದ್ದಾರೆ. ಟಿಎಂಸಿ ಕಾರ್ಯಕರ್ತರು ಈಗಲೂ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. 200 ಸೀಟುಗಳ ಗುರಿಯೊಂದಿಗೆ ನಾವು ಮುನ್ನಡೆಯುತ್ತಿದ್ದೇವೆ. ಅದನ್ನು ಸಾಧಿಸಲಿದ್ದೇವೆ ಎಂದು ಆತ್ಮ ವಿಶ್ವಾಸ ವ್ಯಕ್ತ ಪಡಿಸಿದ್ದರು. ಅದೇ ಸಂದರ್ಭದಲ್ಲಿ ಸುವೇಂದು ಅಧಿಕಾರಿ ಬಿಜೆಪಿ ಸೇರ್ಪಡೆಯಾಗಿದ್ದರು.

ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವ ಸುವೇಂದು
ಮಮತಾ ಬ್ಯಾನರ್ಜಿ ಆಪ್ತರಾಗಿದ್ದ ಸುವೇಂದು ಅಧಿಕಾರಿ ಇದೇ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದು, ಮಮತಾ ವಿರುದ್ಧ ಸ್ಪರ್ಧಿಸುವ ಸೂಚನೆಯನ್ನು ವರಿಷ್ಠರು ನೀಡಿದ್ದಾರೆ.

ನಂದಿ ಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಸೋಲು
ನಂದಿಗ್ರಾಮದಿಂದ ಯಾವ ಅಭ್ಯರ್ಥಿಯು ಕಣಕ್ಕಿಳಿದರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು 50 ಸಾವಿರ ಮತಗಳಿಂದ ಸೋಲಿಸಲಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಹೇಳಿದ್ದಾರೆ.

ಶೀಘ್ರ ಅಭ್ಯರ್ಥಿಗಳ ಹೆಸರು ಪ್ರಕಟ
ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಹೆಸರುಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಸ್ಪಷ್ಟಪಡಿಸಿದ್ದಾರೆ.
ಮೊದಲೆರೆಡು ಹಂತಗಳ ಚುನಾವಣೆಗಾಗಿ ಸೀಟು ಹಂಚಿಕೆ ಬಗ್ಗೆ ಚರ್ಚಿಸಲಾಗಿದೆ, ವರಿಷ್ಠರ ಅಂತಿಮ ನಿರ್ಧಾರದ ಬಳಿಕ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ
ಮಾರ್ಚ್ 27ಕ್ಕೆ ಮೊದಲ ಹಂತದಲ್ಲಿ ಚುನಾವಣೆ ಆರಂಭಗೊಳ್ಳಲಿದೆ. ಏಪ್ರಿಲ್ 29ಕ್ಕೆ ಅಂತಿಮ ಹಂತದ ಚುನಾವಣೆ ನಡೆಯಲಿರುವುದಾಗಿ ಆಯೋಗ ತಿಳಿಸಿದೆ. ಮೇ 2ಕ್ಕೆ ಚುನಾವಣಾ ಫಲಿತಾಂಶ ಹೊರಬೀಳಲಿದೆ.
ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಪುದುಚೇರಿ ವಿಧಾನಸಭೆಗಳಲ್ಲಿ ತಕ್ಷಣವೇ ನೀತಿ ಸಂಹಿತೆ ಜಾರಿಗೆ ಬರಲಿದೆ. 5 ರಾಜ್ಯಗಳಲ್ಲಿನ 824 ಕ್ಷೇತ್ರಗಳಲ್ಲಿ 18.68 ಕೋಟಿ ಮತದಾರರಿದ್ದಾರೆ. ಚುನಾವಣಾ ಆಯೋಗದ ಸಹಾಯವಾಣಿ ಸಂಖ್ಯೆ 1950 ಬಳಸಲು ಸೂಚಿಸಲಾಗಿದೆ. ಮತದಾನಕ್ಕೆ 1 ಗಂಟೆ ಹೆಚ್ಚಿನ ಅವಧಿ ನೀಡಲಾಗಿದೆ











Click it and Unblock the Notifications