ಪಶ್ಚಿಮ ಬಂಗಾಳವನ್ನು ಗುಜರಾತ್ ಮಾಡಲು ಬಿಡುವುದಿಲ್ಲ: ಮಮತಾ ಗುಡುಗು
ಕೋಲ್ಕತಾ, ಜೂನ್ 10: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ನ ಕಾರ್ಯಕರ್ತರ ನಡುವೆ ತೀವ್ರ ಸಂಘರ್ಷ ನಡೆದು ಕನಿಷ್ಠ ನಾಲ್ಕು ಮಂದಿ ಮೃತಪಟ್ಟ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಎಲ್ಲೆಡೆ ಸುಳ್ಳು ಸುದ್ದಿ ಹರಡುತ್ತಿದೆ ಎಂದು ಮಮತಾ ಸೋಮವಾರ ಆರೋಪಿಸಿದ್ದಾರೆ.
'ಬಂಗಾಳವು ಗುಜರಾತ್ ಅಲ್ಲ. ಉತ್ತರ ಪ್ರದೇಶದಲ್ಲಿ ಮಕ್ಕಳನ್ನು ಹತ್ಯೆ ಮಾಡಲಾಗುತ್ತಿದೆ. ಆ ರೀತಿ ಇಲ್ಲಿ ಆಗಲು ನಾನು ಬಿಡುವುದಿಲ್ಲ. ಬಿಜೆಪಿ ರಾಷ್ಟ್ರೀಯ ನಾಯಕರು ತಮ್ಮ ಸಂಚಿನ ಭಾಗವಾಗಿ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಶಕ್ತಿಗಳ ಒತ್ತಡಕ್ಕೆ ನಾವು ಮಣಿಯುವುದಿಲ್ಲ' ಎಂದು ಹೇಳಿದ್ದಾರೆ.

ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಅವರು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.
'ನನ್ನ ಸರ್ಕಾರವನ್ನು ಉರುಳಿಸಲು ಯಾರಾದರೂ ಪ್ರಯತ್ನಿಸಿದರೆ ಅದನ್ನು ಸಹಿಸುವುದಿಲ್ಲ. 2021ರಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಯಾರಾದರೂ ಸರ್ಕಾರವನ್ನು ಒಡೆಯಲು ಪ್ರಯತ್ನ ಮಾಡಿದರೆ ಅವರನ್ನು ಸುಮ್ಮನೆ ಬಿಡುವುದಿಲ್ಲ. ಈ ಸುಳ್ಳು ಪ್ರಚಾರವನ್ನು ನಾನು ಸಹಿಸುವುದಿಲ್ಲ' ಎಂದು ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದ್ದಾರೆ.












Click it and Unblock the Notifications