ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನ ಮಂತ್ರ!
ಕೋಲ್ಕತ್ತಾ, ಮಾರ್ಚ್.04: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪಶ್ಚಿಮ ಬಂಗಾಳದ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಪರವಾಗಿ ಅಖಿಲೇಶ್ ಯಾದವ್ ಪ್ರಚಾರ ನಡೆಸಲಿದ್ದಾರೆ. ಬುಧವಾರವಷ್ಟೇ ಮಾಲ್ಡಾ ಜಿಲ್ಲೆಯಲ್ಲಿ ನಡೆದ ಬಿಜೆಪಿ ರ್ಯಾಲಿ ಉದ್ದೇಶಿಸಿ ಯೋಗಿ ಆದಿತ್ಯನಾಥ್ ಮಾತನಾಡಿ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ; ತೃಣಮೂಲಕ್ಕೆ ಬಲ ತುಂಬಲು ಆರ್ಜೆಡಿ ಜೊತೆ ಮೈತ್ರಿ?
ರಾಜ್ಯದಲ್ಲಿ ಜಾನುವಾರುಗಳ ಕಳ್ಳಸಾಗಾಣಿಕೆ ಮತ್ತು ಲವ್ ಜಿಹಾದ್ ಅಬಾಧಿತವಾಗಿ ನಡೆಯುತ್ತಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ಓಲೈಕೆ ರಾಜಕಾರಣದಲ್ಲಿ ತೊಡಗಿರುವುದು ದೇಶದ ಭದ್ರತೆಗೆ ಅಪಾಯವನ್ನು ಉಂಟು ಮಾಡುತ್ತಿದೆ ಎಂದು ಯೋಗಿ ಆದಿತ್ಯನಾಥ್ ಆರೋಪಿಸಿದ್ದರು.
"ಅಧಿಕಾರಕ್ಕೆ ಬರುಲು ಗೊಂದಲ ಸೃಷ್ಟಿಸುತ್ತಿರುವ ಬಿಜೆಪಿ"
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷವು ಗೊಂದಲಗಳನ್ನು ಸೃಷ್ಟಿಸುವುದರಲ್ಲಿ ತೊಡಗಿದೆ. ಬಿಜೆಪಿ ನಾಯಕರು ಗೊಂದಲದ ವಿಷಯಗಳ ಮೇಲೆ ಪ್ರಚಾರ ಮಾಡುತ್ತಲೇ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ ಎಂದು ಅಖಿಲೇಶ್ ಯಾದವ್ ಕಿಡಿ ಕಾರಿದ್ದಾರೆ. ಅಲ್ಲದೇ, ಬಿಜೆಪಿಯ ಈ ಪಿತೂರಿ ಯಶಸ್ವಿಯಾಗುವುದಕ್ಕೆ ಸಮಾಜವಾದಿ ಪಕ್ಷವು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು.
"ದ್ವೇಷದ ರಾಜಕಾರಣ ನಡೆಸುತ್ತಿರುವ ಬಿಜೆಪಿ"
ಪಶ್ಚಿಮ ಬಂಗಾಳದಲ್ಲಿ ಪ್ರಚಾರ ನಡೆಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜನರಿಗೆ ತಪ್ಪು ಮಾಹಿತಿ ನೀಡುವ ಮೂಲಕ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯು ದ್ವೇಷದ ರಾಜಕಾರಣವನ್ನು ಹುಟ್ಟು ಹಾಕುತ್ತಿರುವ ಬಿಜೆಪಿಯ ಬಲೆಗೆ ಬೀಳದಂತೆ ಜನರಲ್ಲಿ ಅಖಿಲೇಶ್ ಯಾದವ್ ಮನವಿ ಮಾಡಿಕೊಂಡಿದ್ದಾರೆ. ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಜಾಗರೂಕರಾಗಿ ಇರುವಂತೆ ತಿಳಿಸಿದ್ದಾರೆ.
ಮಮತಾ ಬ್ಯಾನರ್ಜಿಯವರಿಗೆ ತೇಜಸ್ವಿ ಯಾದವ್ ಬೆಂಬಲ
ಕಳೆದ ಎರಡು ದಿನಗಳ ಹಿಂದೆಯಷ್ಟೇ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರನ್ನು ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಭೇಟಿ ಮಾಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಿಸಿದ್ದರು. ಪಶ್ಚಿಮ ಬಂಗಾಳದಲ್ಲಿ ಬಿಹಾರ, ಉತ್ತರ ಪ್ರದೇಶ ಮತ್ತು ಜಾರ್ಖಂಡ್ ಮೂಲದ ಅತಿಹೆಚ್ಚು ಹಿಂದಿ ಮಾತನಾಡುವ ಜನರು ವಾಸವಾಗಿದ್ದು, ರಾಜ್ಯದಲ್ಲಿ ಈ ಬಾರಿ ನಡೆಯುತ್ತಿರುವ ಚುನಾವಣೆಯಲ್ಲಿ ಆರ್ ಜೆಡಿ ಪಕ್ಷವು ಟಿಎಂಸಿಗೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ತೇಜಸ್ವಿ ಯಾದವ್ ಹೇಳಿದ್ದರು.
ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ
ಪಶ್ಚಿಮ ಬಂಗಾಳ ವಿಧಾನಸಭೆಯ 294 ಕ್ಷೇತ್ರಗಳಿಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಘೋಷಿಸಿದೆ. ಕಳೆದ ಫೆಬ್ರವರಿ.26ರಂದು ನಾಲ್ಕು ರಾಜ್ಯ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಿಸಿತ್ತು. ಈ ಪೈಕಿ ಪಶ್ಚಿಮ ಬಂಗಾಳದಲ್ಲಿ ಮಾರ್ಚ್.27ರಿಂದ ಆರಂಭವಾಗಲಿರುವ ಚುನಾವಣೆಯು ಏಪ್ರಿಲ್.29ರಂದು ಮುಕ್ತಾಯಗೊಳ್ಳಲಿದ್ದು, ಮೇ.02ರಂದು ಫಲಿತಾಂಶ ಹೊರ ಬೀಳಲಿದೆ.