ಪಶ್ಚಿಮಬಂಗಾಳ: ಬಿಜೆಪಿ ಅಭ್ಯರ್ಥಿ ಅಣ್ಣನ ಮೇಲೆ ದಾಳಿ ನಡೆಸಿತಾ ಟಿಎಂಸಿ?
ಕೋಲ್ಕತ್ತಾ, ಮಾರ್ಚ್ 27: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲೇ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಸಹೋದರ ಸೋಮೇಂದು ಅಧಿಕಾರಿ ಮೇಲೆ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ಪಶ್ಚಿಮ ಬಂಗಾಳದ ಪೂರ್ಬಾ ಮೆಡಿನಿಪುರ್ ಜಿಲ್ಲೆಯ ಕೊಂಟೈ ನಗರದ ಬಳಿ ಟಿಎಂಸಿ ಕಾರ್ಯಕರ್ತರು ಕಾರಿನ ಮೇಲೆ ದಾಳಿ ನಡೆಸಿ, ನನ್ನ ಕಾರು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸೋಮೇಂದು ಅಧಿಕಾರಿ ಆರೋಪಿಸಿದ್ದಾರೆ.
ಬಂಗಾಳ ಚುನಾವಣೆ: ಬಿಜೆಪಿ ವಿರುದ್ಧ ಟಿಎಂಸಿ ಸಾಲು ಸಾಲು ಆರೋಪ
"ಟಿಎಂಸಿ ಬ್ಲಾಕ್ ಅಧ್ಯಕ್ಷ ರಾಮ್ ಗೋವಿಂದ್ ದಾಸ್ ಮತ್ತು ಅವರ ಪತ್ನಿ ಈ ಪ್ರದೇಶದ ಮೂರು ಕಡೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಿದ್ದರು. ಅಂಥ ಸಂದರ್ಭದಲ್ಲಿ ನಾನಾ ಅಲ್ಲಿಗೆ ತೆರಳಿದ್ದು ಅವರ ಪ್ರಚಾರಕ್ಕೆ ತೊಂದರೆ ಉಂಟಾಯಿತು. ಆದ್ದರಿಂದ ಅವರು ನನ್ನ ಮೇಲೆ ದಾಳಿ ನಡೆಸಿ, ನನ್ನ ಕಾರು ಚಾಲಕನ ಮೇಲೆ ಹಲ್ಲೆ ನಡೆಸಿದರು. ಟಿಎಂಸಿ ಕಾರ್ಯಕರ್ತರು ನಡೆಸಿದ ಹಲ್ಲೆಯಿಂದ ನಮ್ಮ ನಾಲ್ವರು ಕಾರ್ಯಕರ್ತರು ಗಾಯಗೊಂಡಿದ್ದು, ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಸೋಮೇಂದು ಅಧಿಕಾರಿ ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ 8 ಹಂತದ ಚುನಾವಣೆ:
ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27ರಂದು ರಾಜ್ಯದ 30 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇದರ ಬಳಿಕ ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.