ಪಶ್ಚಿಮ ಬಂಗಾಳ ಹಿಂಸಾಚಾರ: ರಾಜ್ಯಪಾಲರಿಂದ ಸರ್ಕಾರಕ್ಕೆ ಖಡಕ್ ಸಂದೇಶ
ಕೊಲ್ಕತ್ತ, ಜೂನ್ 13: ಪಶ್ಚಿಮ ಬಂಗಾಳ ರಾಜ್ಯದಲ್ಲಿ ರಾಜಕೀಯ ಪ್ರೇರಿತ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಇಂದು ರಾಜ್ಯಪಾಲ ಕೇಶರಿ ನಾಥ್ ತ್ರಿಪಾಠಿ ಅವರು ಸರ್ಕಾರಕ್ಕೆ ಖಡಕ್ ಸಂದೇಶ ರವಾನಿಸಿದರು.
ಪ್ರಮುಖ ಪಕ್ಷಗಳ ಮುಖಂಡರ ಸಭೆ ಕರೆದಿದ್ದ ರಾಜ್ಯಪಾಲರು ಬಂಗಾಳದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಿ, ಸರ್ಕಾರ ಹಾಗೂ ಎಲ್ಲ ಪಕ್ಷಗಳಿಗೂ ಖಡಕ್ ಸಂದೇಶವನ್ನು ನೀಡಿದರು.
ನ್ಯಾಯವಾದ ರೀತಿಯಲ್ಲಿ ಪರಿಣಾಮಕಾರಿಯಾಗಿ ಕಾನೂನು ಸುವ್ಯವಸ್ಥೆಯನ್ನು ಪಾಲಿಸಿ ಎಂದು ರಾಜ್ಯಪಾಲರು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಜೊತೆಗೆ ಎಲ್ಲ ಪಕ್ಷಗಳಿಗೂ ರಚನಾತ್ಮಕ ರೀತಿಯಲ್ಲಿ ತಮ್ಮ ವಾದವನ್ನು ಮುಂದಿಡಿ, ದ್ವೇಷ ಹೆಚ್ಚಿಸುವ ಮಾತುಗಳು ಬೇಡ ಎಂದು ಅವರು ಹೇಳಿದ್ದಾರೆ.

ರಾಜ್ಯಪಾಲರು ಇಂದು ಕರೆದಿದ್ದ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಮುಖಂಡರು, ಬಿಜೆಪಿ, ಸಿಪಿಐಎಂ, ಕಾಂಗ್ರೆಸ್ ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು.
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಈ ವರೆಗೆ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಂಕಿ-ಅಂಶ ಹೇಳುತ್ತಿವೆ. ಬಿಜೆಪಿ ಮತ್ತು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನಡುವೆ ಜಿದ್ದಾ-ಜಿದ್ದಿ ಏರ್ಪಟ್ಟಿದೆ.
ಪಶ್ಚಿಮ ಬಂಗಾಳ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು ಎಂಬ ಒತ್ತಾಯವೂ ಇದೇ ಸಮಯ ಕೇಳಿ ಬರುತ್ತಿದ್ದು, ರಾಜ್ಯಪಾಲರು ಸಹ ಆಡಳಿತ ಪಕ್ಷದ ಬಗ್ಗೆ ಅಸಹನೆ ಹೊಂದಿದ್ದಾರೆ. ಹಿಂಸೆ ಹೀಗೆಯೇ ಮುಂದುವರೆದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆ ಆಗುವ ಸಂಭವ ಇದೆ.












Click it and Unblock the Notifications