ಬಂಗಾಳ: ಬಿಜೆಪಿ ರಾಜ್ಯಾಧ್ಯಕ್ಷರ ಬೆಂಗಾವಲು ಸಿಬ್ಬಂದಿ ಮೇಲೆ ಹಲ್ಲೆ!?
ಕೋಲ್ಕತ್ತಾ, ಏಪ್ರಿಲ್ 07: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಪ್ರಚಾರ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ತಮ್ಮ ಬೆಂಗಾವಲು ಸಿಬ್ಬಂದಿ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಆರೋಪಿಸಿದ್ದಾರೆ.
West Bengal BJP chief Dilip Ghosh says that his convoy was attacked in Sitalkuchi, Cooch Behar. pic.twitter.com/KZ5rGpJ4Vh
— ANI (@ANI) April 7, 2021
"ಭಾರತೀಯ ಜನತಾ ಪಕ್ಷದ ಪರವಾಗಿ ಕೂಚ್ ಬೆಹರ್ ಜಿಲ್ಲೆಯ ಸಿಟಾಲ್ ಕುಚಿ ಎಂಬಲ್ಲಿ ಪ್ರಚಾರ ನಡೆಸುತ್ತಿದ್ದೆನು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಮೆರವಣಿಗೆ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಕೆಲವು ನಮ್ಮ ಕಾರ್ಯಕರ್ತರನ್ನು ಬೆದರಿಸುವುದಕ್ಕೆ ಮುಂದಾದರು. ಮಾರಕಾಸ್ತ್ರಗಳನ್ನು ಹಿಡಿದು ಬೆದರಿಕೆಯೊಡ್ಡಲು ಮುಂದಾದಾಗ ಸ್ಥಳದಲ್ಲಿ ಉದ್ವಿಗ್ನತೆ ಸೃಷ್ಟಿಯಾಯಿತು. ಇದರ ಮಧ್ಯೆ ಪೊಲೀಸರು ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ" ಎಂದು ದಿಲೀಪ್ ಘೋಷ್ ದೂಷಿಸಿದ್ದಾರೆ.
ಟಿಎಂಸಿ ಕಾರ್ಯಕರ್ತರಿಂದ ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು. ಪೊಲೀಸರು ನೀಡಿದ ಸೂಚನೆ ಮೇರೆಗೆ ಕೆಲ ಹೊತ್ತಿನ ಬಳಿಕ ಬಿಜೆಪಿ ಕಾರ್ಯಕರ್ತರು ಅಲ್ಲಿಂದ ವಾಪಸ್ಸಾದರು. ಇದೇ ಸಮಯವನ್ನು ಎದುರು ನೋಡುತ್ತಿದ್ದ ಟಿಎಂಸಿ ಕಾರ್ಯಕರ್ತರು ನಮ್ಮ ಮೇಲೆ ಇಟ್ಟಿಗೆ, ಬಡಿಗೆ ಹಿಡಿದು ಹಲ್ಲೆಗೆ ಮುಂದಾದರು. ಘಟನೆಯಲ್ಲಿ ನನಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಹಲವು ವಾಹನಗಳಿಗೆ ಹಾನಿಯಾಗಿದೆ ಎಂದು ದಿಲೀಪ್ ಘೋಷಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಆಯೋಗದ ನೋಟಿಸ್
ಸಿಎಂ ಮಮತಾ ಬ್ಯಾನರ್ಜಿ ಪ್ರಚೋದನೆ:
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ನಿರ್ದಿಷ್ಟ ಸಮುದಾಯದ ಜನರಿಗೆ ಪ್ರಚೋದನೆ ನೀಡುತ್ತಿದ್ದಾರೆ. ಇಂದು ನಡೆದ ಘಟನೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ರಾಜ್ಯದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಬೇಕು. ಮಮತಾ ಬ್ಯಾನರ್ಜಿ ಅವರ ಚುನಾವಣಾ ರ್ಯಾಲಿಗಳನ್ನು ತಡೆಯಬೇಕು. ಇಲ್ಲದಿದ್ದರೆ ರಾಜ್ಯದಲ್ಲಿ ರಕ್ತಪಾತವಾಗಲಿದೆ ಎಂದು ದಿಲೀಪ್ ಘೋಷ್ ಆರೋಪಿಸಿದ್ದಾರೆ.