"ರಾಜಕೀಯ ವಿರೋಧಿಗಳನ್ನು ಹತ್ತಿಕ್ಕುವುದೊಂದೇ ದೀದಿ ಸಾಧನೆ": ನಡ್ಡಾ
ಕೋಲ್ಕತ್ತಾ, ಅಕ್ಟೋಬರ್.08: ಪಶ್ಚಿಮ ಬಂಗಾಳದಲ್ಲಿ ಶ್ರೀಮಂತಿಕೆಯ ವೈಭವವನ್ನು ಉಳಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷದ ಹೋರಾಟವು ಮುಂದುವರಿಯುತ್ತದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಟ್ವೀಟ್ ಮಾಡಿದ್ದಾರೆ.
"ರಾಜ್ಯದಲ್ಲಿ ಮುಖ್ಯಮಂತ್ರಿ ಮಮತಾ ದೀದಿ ಅವರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದರೂ, ನಾವು ಅಲ್ಲಿನ ಬಡ ಜನರ ಪರವಾಗಿ ನಿಲ್ಲುತ್ತೇವೆ. ನಮ್ಮ ಬಿಜೆಪಿ ಕಾರ್ಯಕರ್ತರು ಅಲ್ಲಿನ ಸಚಿವಾಲಯವನ್ನು ಮುಚ್ಚುವಂತೆ ಕೋರಿದರು. ಇದರಿಂದಲೇ ಅವರು ಸಾರ್ವಜನಿಕರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂಬುದು ಗೊತ್ತಾಗುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ.
ಬಂಗಾಳದಲ್ಲಿ ಫ್ಯಾಸಿಸ್ಟ್ ಆಡಳಿತ: ತೇಜಸ್ವಿ ಸೂರ್ಯ
ಬಿಜೆಪಿ ರಾಷ್ಟ್ರಾಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಮಾಡಿರುವ ಮತ್ತೊಂದು ಟ್ವೀಟ್ ನಲ್ಲಿ "ಬಂಗಾಳದ ಕಳೆದುಹೋದ ವೈಭವ ಮತ್ತು ಹೆಮ್ಮೆಯನ್ನು ಪುನಃಸ್ಥಾಪಿಸಲು ಬಿಜೆಪಿ ಕಾರ್ಯಕರ್ತರು ಹೋರಾಡುತ್ತಾರೆ. ಇದರ ಜೊತೆಗೆ ಭ್ರಷ್ಟ, ಹಿಂಸಾತ್ಮಕ ಮತ್ತು ಸರ್ವಾಧಿಕಾರಿ ಆಡಳಿತದ ವಿರುದ್ಧ ಪ್ರಜಾಸತ್ತಾತ್ಮಕವಾಗಿ ಹೋರಾಡಲು ನಿರ್ಧರಿಸಿದ್ದಾರೆ ಎಂಬುದನ್ನು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ" ಎಂದು ಬರೆದುಕೊಂಡಿದ್ದಾರೆ.
ರಾಜಕೀಯ ವಿರೋಧಿಗಳ ವಿರುದ್ಧ ಹಿಂಸಾಚಾರ:
"ಪಶ್ಚಿಮ ಬಂಗಾಳದಲ್ಲಿ ಹಿಂದಿನ ಎಡ ಪ್ರಭುತ್ವಗಳಿಗಿಂತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ಮಾಡಿರುವ ಏಕೈಕ ಉತ್ತಮ ಕಾರ್ಯ ಎಂದರೆ ಅದು ವಿರೋಧ ಪಕ್ಷಗಳನ್ನು ಹತ್ತಿಕ್ಕುವುದು. ತಮ್ಮ ಆಧಿಕಾರಿವನ್ನು ರಾಜಕೀಯ ವಿರೋಧಿಗಳ ವಿರುದ್ಧ ಕ್ರೂರ ಮತ್ತು ರಾಜಕೀಯ ಹಿಂಸಾಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ" ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಟ್ವೀಟ್ ಮಾಡಿದ್ದಾರೆ.
ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಬಿಜೆಪಿ ಯುವ ಮೋರ್ಚಾದ ನೂತನ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಬಿಜೆಪಿಯ ಯುವ ಘಟಕವು ನಡೆಸುತ್ತಿದ್ದ 'ನಬನ್ನಾಕ್ಕೆ ನಡಿಗೆ' ಪ್ರತಿಭಟನಾ ಮೆರವಣಿಗೆ ಸಂದರ್ಭದಲ್ಲಿ ತೀವ್ರ ಸಂಘರ್ಷ ನಡೆದಿತ್ತು. ನಬನ್ನಾಕ್ಕೆ ಮೆರವಣಿಗೆ ಸಾಗುತ್ತಿದ್ದ ಬಿಜೆಪಿ ಕಾರ್ಯಕರ್ತರು ಮತ್ತು ಪಶ್ಚಿಮ ಬಂಗಾಳದ ಪೊಲೀಸರ ನಡುವೆ ಘರ್ಷಣೆ ನಡೆದಿತ್ತು. ಮೆರವಣಿಗೆ ತಡೆಯಲು ಮುಂದಾದ ಪಶ್ಚಿಮ ಬಂಗಾಳ ಪೊಲೀಸರು ಹೌರಾದ ಸಂಟ್ರಗಚಿಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿ, ಅಶ್ರುವಾಯು ಹಾಗೂ ಜಲಫಿರಂಗಿ ಪ್ರಯೋಗ ಮಾಡಲಾಗಿತ್ತು.