ಪಶ್ಚಿಮ ಬಂಗಾಳ ಹಿಂಸಾಚಾರ: ದೀದಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್
ಕೋಲ್ಕತ್ತಾ, ಮೇ 25: ವಿಧಾನಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಮಂಗಳವಾರ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ವಿನೀತ್ ಸರನ್ ಮತ್ತು ನ್ಯಾ. ಬಿ ಆರ್ ಗಾವೈ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿತು. ಅರ್ಜಿದಾರರ ಪರ ಹಿರಿಯ ವಕೀಲ ಪಿಂಕಿ ಆನಂದ್ ಮನವಿಗೆ ಸ್ಪಂದಿಸಿರುವ ಕೋರ್ಟ್ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಮತ್ತು ಮಕ್ಕಳ ಆಯೋಗ, ಇಬ್ಬರು ವಕೀಲರು ಸೇರಿದಂತೆ ಐವರು ಅರ್ಜಿದಾರರು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಹಿಂಸಾಚಾರದ ಮೂಲ ಪತ್ತೆಗೆ ವಿಶೇಷ ತನಿಖಾ ತಂಡವನ್ನು ರಚಿಸಬೇಕು ಆಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿಕೊಳ್ಳಲಾಗಿತ್ತು.

ನೊಂದವರಿಗೆ ಪುನರ್ವಸತಿ ಕಲ್ಪಿಸುವಂತೆ ಮನವಿ:
ಪಶ್ಚಿಮ ಬಂಗಾಳದಲ್ಲಿ ಮತದಾನದ ಬಳಿಕ ನಡೆದ ಹಿಂಸಾಚಾರ ಬಗ್ಗೆ ಎಸ್ಐಟಿ ತನಿಖೆ ನಡೆಸಬೇಕು. ಈ ಘಟನೆ ನಂತರ ಸ್ಥಳಾಂತರಗೊಂಡ ಜನರಿಗೆ ಪುನರ್ವಸತಿ ಕಲ್ಪಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಜೂನ್ 7ರ ಒಳಗೆ ಪ್ರತಿಕ್ರಿಯೆ ನೀಡಲು ಸೂಚಿಸಿರುವ ಸುಪ್ರೀಂಕೋರ್ಟ್ ಜೂನ್ ಎರಡನೇ ವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರವು ಜನರ ವಲಸೆ ಮತ್ತು ಆಂತರಿಕ ಸ್ಥಳಾಂತರಕ್ಕೆ ಕಾರಣವಾಗಿದೆ ಎಂದು ಅರುಣ್ ಮುಖರ್ಜಿ ಮತ್ತು ಇತರರು ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ. ಪೊಲೀಸರು ಮತ್ತು "ರಾಜ್ಯ ಪ್ರಾಯೋಜಿತ ಗೂಂಡಾಗಳು" ಸರ್ಕಾರದ ನಿಯಂತ್ರಣದಲ್ಲಿದ್ದಾರೆ. ಈ ಕಾರಣದಿಂದ ಹಿಂದಿನವರು ಪ್ರಕರಣಗಳ ತನಿಖೆ ನಡೆಸುತ್ತಿಲ್ಲ. ಜೀವ ಬೆದರಿಕೆ ಎದುರಿಸುತ್ತಿರುವವರಿಗೆ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಅರ್ಜಿಯಲ್ಲಿ ದೂಷಿಸಲಾಗಿದೆ.












Click it and Unblock the Notifications