ಕೊಪ್ಪಳ ಬಿಜೆಪಿ ಅಭ್ಯರ್ಥಿಯಾಗಿ ಬಿ.ಶ್ರೀರಾಮುಲು ಕಣಕ್ಕೆ?
ಕೊಪ್ಪಳ, ಮಾರ್ಚ್ 26 : ಕೊಪ್ಪಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ. ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಅವರು ಕಣಕ್ಕಿಳಿಯುವ ಸಾಧ್ಯತೆ ಇದೆ.
ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ 2ನೇ ಹಂತದಲ್ಲಿ ಏಪ್ರಿಲ್ 23ರಂದು ಚುನಾವಣೆ ನಡೆಯಲಿದೆ. ಕರ್ನಾಟಕ ಬಿಜೆಪಿ ಇನ್ನೂ ಕೊಪ್ಪಳಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಎಲ್ಲಾ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡಲಾಗಿದೆ. ಆದರೆ, ಕೊಪ್ಪಳದಲ್ಲಿ?.
ಸಂಗಣ್ಣ ಕರಡಿ, ಸಿ.ಬಿ.ಚಂದ್ರಶೇಖರ್, ಡಾ.ಕೆ.ಬಸವರಾಜ ಅವರ ಹೆಸರು ಕೇಳಿ ಬರುತ್ತಿದೆ. ಇದರ ನಡುವೆಯೇ ಬಿ.ಶ್ರೀರಾಮುಲು ಅವರ ಹೆಸರು ಚಾಲ್ತಿಗೆ ಬಂದಿದೆ. ಆದರೆ, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಶ್ರೀರಾಮುಲು ಒಪ್ಪಲಿದ್ದಾರೆಯೇ? ಕಾದು ನೋಡಬೇಕು.
2014ರ ಲೋಕಸಭಾ ಚುನಾವಣೆಯಲ್ಲಿ ಬಿ.ಶ್ರೀರಾಮುಲು ಬಳ್ಳಾರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಲ್ಲಿ ಗೆದ್ದ ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು....

ಚುನಾವಣಾ ಸಮಿತಿಯಲ್ಲಿ ಚರ್ಚೆ
ಕರ್ನಾಟಕ ಬಿಜೆಪಿ 26 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ. ಆದರೆ, ಹಾಲಿ ಸಂಸದರು ಇದ್ದರೂ ಕೊಪ್ಪಳ ಕ್ಷೇತ್ರದ ಟಿಕೆಟ್ ಅಂತಿಮವಾಗಿಲ್ಲ. ಸೋಮವಾರ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಬಿ.ಶ್ರೀರಾಮುಲು ಅವರನ್ನು ಕಣಕ್ಕಿಳಿಸುವ ಕುರಿತು ಚರ್ಚೆ ನಡೆದಿದೆ.

ಹಾಲಿ ಸಂಸದರಿಗೆ ಟಿಕೆಟ್ ಬೇಡ
ಕೊಪ್ಪಳ ಕ್ಷೇತ್ರದಲ್ಲಿ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ನೀಡಲು ವಿರೋಧ ವ್ಯಕ್ತವಾಗುತ್ತಿದೆ. ಆದ್ದರಿಂದ, ಬಿಜೆಪಿ ಬೇರೆ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಅವರನ್ನು ಕಣಕ್ಕಿಳಿಸಬೇಕು ಎಂಬುದು ಚಿಂತನೆಯಾಗಿದೆ.

ರಾಜಕೀಯ ಲೆಕ್ಕಾಚಾರಗಳು
ಬಿ.ಶ್ರೀರಾಮುಲು ಅವರು ಕೊಪ್ಪಳದಿಂದ ಕಣಕ್ಕಿಳಿದರೆ ಕೊಪ್ಪಳ, ಬಳ್ಳಾರಿ, ರಾಯಚೂರು, ಹಾವೇರಿ-ಗದಗ, ಬಾಗಲಕೋಟೆ ಕ್ಷೇತ್ರಗಳಲ್ಲೂ ಪಕ್ಷಕ್ಕೆ ಸಹಾಯಕವಾಗಲಿದೆ ಎಂಬುದು ಲೆಕ್ಕಾಚಾರವಾಗಿದೆ. ಆದ್ದರಿಂದ, ಈ ಬಗ್ಗೆ ಹೈಕಮಾಂಡ್ ಗಂಭೀರ ಚಿಂತನೆ ನಡೆಸುತ್ತಿದೆ.

ಆಸಕ್ತಿ ತೋರಿಸಿಲ್ಲ
ಬಿ.ಶ್ರೀರಾಮುಲು ಅವರು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಒಪ್ಪಿಗೆ ನೀಡಿಲ್ಲ. ಆದರೆ, ಹೈಕಮಾಂಡ್ ನಾಯಕರು ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಮತ್ತೊಂದು ಕಡೆ ಕರಡಿ ಸಂಗಣ್ಣ ಅವರು ಸಹ ಟಿಕೆಟ್ ಪಡೆಯಲು ಪ್ರಯತ್ನವನ್ನು ಮುಂದುವರೆಸಿದ್ದಾರೆ.

ರಾಜಶೇಖರ್ ಹಿಟ್ನಾಳ್
ಕೊಪ್ಪಳ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದೆ. ರಾಜಶೇಖರ ಹಿಟ್ನಾಳ್ ಅಭ್ಯರ್ಥಿಯಾಗಿದ್ದಾರೆ. ಆದರೆ, ಎದುರಾಳಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ.












Click it and Unblock the Notifications