ಕೈ ತಪ್ಪಿದ ಬಿಜೆಪಿ ಟಿಕೆಟ್: ಮಹತ್ವದ ಸಭೆ ಕರೆದ ಸಂಗಣ್ಣ ಕರಡಿ!
ಕೊಪ್ಪಳ, ಮಾರ್ಚ್ 19: ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ಚುನಾವಣಾ ವೇಳಾಪಟ್ಟಿ ಈಗಾಗಲೇ ಘೋಷಣೆಯಾಗಿದ್ದು, ಮೇ 7ರಂದು ಮತದಾನ ನಡೆಯಲಿದೆ. ಚುನಾವಣೆಗೆ ಬಿಜೆಪಿ ಡಾ. ಬಸವರಾಜ ಕ್ಯಾವಟರ್ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.
ಕೊಪ್ಪಳದಲ್ಲಿ ಬಿಜೆಪಿ ಹಾಲಿ ಸಂಸದ ಸಂಗಣ್ಣ ಕರಡಿಗೆ ಟಿಕೆಟ್ ನೀಡಿಲ್ಲ. ಡಾ. ಬಸವರಾಜ ಕ್ಯಾವಟರ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದು, ಸಂಗಣ್ಣ ಕರಡಿ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ.

ಟಿಕೆಟ್ ಕೈ ತಪ್ಪಿರುವುದಕ್ಕೆ ಸಂಗಣ್ಣ ಕರಡಿ ಬೇಸಗೊಂಡಿದ್ದಾರೆ. ಪಕ್ಷದ ವರಿಷ್ಠರಿಗೆ ಮೂರು ಪ್ರಶ್ನೆಗಳನ್ನು ಹಾಕಿರುವ ಅವರು, ಉತ್ತರ ನೀಡುವ ತನಕ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಪರವಾಗಿ ಪ್ರಚಾರ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ.
ಗುರುವಾರ ಮಹತ್ವದ ಸಭೆ: ಸಂಗಣ್ಣ ಕರಡಿಗೆ ಟಿಕೆಟ್ ಕೈ ತಪ್ಪಿದ್ದು ಅವರ ಅಭಿಮಾನಿಗಳಲ್ಲೂ ಬೇಸರ ಮೂಡಿಸಿದೆ. ಈ ನಡುವೆಯೇ ಮುಂದಿನ ನಡೆ ಕುರಿತು ಚರ್ಚೆ ನಡೆಸಲು ಸಂಗಣ್ಣ ಕರಡಿ ಗುರುವಾರ ಮಹತ್ವದ ಸಭೆಯನ್ನು ಕರೆದಿದ್ದಾರೆ.
ಕೊಪ್ಪಳದ ಚುನಾವಣೆಗೆ ಏಪ್ರಿಲ್ 12ರಂದು ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರಗಳನ್ನು ಸಲ್ಲಿಕೆಗೆ ಏಪ್ರಿಲ್ 19 ಕೊನೆ ದಿನ. ಏಪ್ರಿಲ್ 20ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 22 ಕೊನೆ ದಿನ. ಆದ್ದರಿಂದ ಸಂಗಣ್ಣ ಕರಡಿ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಲ್ಲಿ ಸಂಗಣ್ಣ ಕರಡಿ ಸೊಸೆ ಮಂಜುಳಾ ಕರಡಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಚುನಾವಣೆಯಲ್ಲಿ ಅವರು 54170 ಮತಗಳನ್ನು ಪಡೆದು, ಕಾಂಗ್ರೆಸ್ನ ಕೆ. ರಾಘವೇಂದ್ರ ಹಿಟ್ನಾಳ್ (90430 ಮತ) ಸೋಲು ಕಂಡಿದ್ದರು. ಈಗ ಲೋಕಸಭೆ ಚುನಾವಣೆಯಲ್ಲಿ ಸಂಗಣ್ಣ ಕರಡಿಗೆ ಟಿಕೆಟ್ ಕೈತಪ್ಪಿದೆ.
ಡಾ. ಬಸವರಾಜ ಕ್ಯಾವಟರ್ ಈಗಾಗಲೇ ಚುನಾವಣಾ ತಯಾರಿ ಆರಂಭಿಸಿದ್ದಾರೆ. ಜೆಡಿಎಸ್ ನಾಯಕರು, ಮಾಜಿ ಸಚಿವ ಆನಂದ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಆದರೆ ಸಂಗಣ್ಣ ಕರಡಿ ಅವರ ನಡೆ ಏನು? ಎಂಬುದು ಎಲ್ಲರ ಪ್ರಶ್ನೆ.
ಬಿಜೆಪಿ ಘೋಷಿತ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಮಾತನಾಡಿ, "ಪಕ್ಷ ಹಾಗೂ ಮೈತ್ರಿ ಪಕ್ಷದ ನಾಯಕರನ್ನು ಭೇಟಿಯಾಗಿ ಪ್ರಚಾರಕ್ಕೆ ಬರಬೇಕು ಎಂದು ಕೋರಿದ್ದೇನೆ. ಎಲ್ಲರೂ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಅದ್ಧೂರಿಯಾಗಿ ಪ್ರಚಾರ ಆರಂಭವಾಗಲಿದ್ದು, ಸಂಗಣ್ಣ ಕರಡಿ ನೇತೃತ್ವದಲ್ಲಿಯೇ ಪ್ರಚಾರ ನಡೆಯಲಿದೆ" ಎಂದು ಹೇಳಿದ್ದಾರೆ.
2019ರ ಚುನಾವಣೆಯ ಸಂದರ್ಭದಲ್ಲಿಯೂ ಸಂಗಣ್ಣ ಕರಡಿಗೆ ಟಿಕೆಟ್ ನೀಡಬಾರದು ಎಂಬ ಮಾತು ಕೇಳಿ ಬಂದಿತ್ತು. ಆದರೆ ಅಂತಿಮವಾಗಿ ಬಿಜೆಪಿ ಟಿಕೆಟ್ ಘೋಷಣೆ ಮಾಡಿತ್ತು. ಚುನಾವಣೆಯಲ್ಲಿ ಅವರು 586,783 ಮತಗಳನ್ನು ಪಡೆದು ಕಾಂಗ್ರೆಸ್ನ ರಾಜಶೇಖರ ಹಿಟ್ನಾಳ್ (548,386 ಮತ) ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದರು.
ಆದರೆ ಈ ಬಾರಿ ಬಿಜೆಪಿ ಹೊಸ ಮುಖಕ್ಕೆ ಮಣೆ ಹಾಕಿದೆ. ವೈದ್ಯರಾಗಿರುವ ಡಾ. ಬಸವರಾಜ ಕ್ಯಾವಟರ್ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಅವರಿಗೆ ಕಳೆದ ಬಾರಿಯೇ ಟಿಕೆಟ್ ಸಿಗಲಿದೆ ಎಂಬ ಮಾತು ಕೇಳಿ ಬಂದಿತ್ತು.
ಡಾ. ಬಸವರಾಜ ಕ್ಯಾವಟರ್ ತಂದೆ ಕೆ. ಶರಣಪ್ಪ. 1994ರಲ್ಲಿ ಕುಷ್ಟಗಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಕಂಡಿದ್ದರು. ಹಿಂದಿನ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಶರಣಪ್ಪ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು.












Click it and Unblock the Notifications