ಜಿಲ್ಲಾಧಿಕಾರಿಗಳ ಕಚೇರಿ ಪ್ರವೇಶಿಸಲು ವ್ಯಾಕ್ಸಿನ್ ಪ್ರಮಾಣ ಪತ್ರ ಕಡ್ಡಾಯ!
ಕೊಪ್ಪಳ, ಸೆಪ್ಟೆಂಬರ್ 06; ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಕಚೇರಿಗಳಿಗೆ ಬರುವ ಜನರು, ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರವನ್ನು ಹೊಂದಿರಬೇಕು ಎಂದು ಸೂಚನೆ ನೀಡಲಾಗಿದೆ.
ಸೋಮವಾರ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಈ ಕುರಿತು ಸೂಚನೆ ನೀಡಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಮಟ್ಟದ ಕಚೇರಿಗಳಿಗೆ ದೈನಂದಿನ ಕೆಲಸ ಕಾರ್ಯಗಳಿಗೆ ಬರುವ ಎಲ್ಲ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರು ಲಸಿಕಾ ಪ್ರಮಾಣ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ.
ಜಿಲ್ಲಾ ಮಟ್ಟದ ಕಚೇರಿಗೆ ಪ್ರತಿದಿನ ಸುಮಾರು 500 ರಿಂದ 1000 ಜನರು ಆಗಮಿಸುತ್ತಾರೆ. ಕೋವಿಡ್ 3ನೇ ಅಲೆ ಹರಡುವಿಕೆ ತಡೆಗಟ್ಟುವ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಜಿಲ್ಲಾಡಳಿತ ಭವನ ಪ್ರವೇಶಿಸುವಾಗ ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಿಕೊಂಡ ಬಗ್ಗೆ ಪ್ರಮಾಣ ಪತ್ರ ತೋರಿಸಬೇಕು.
ಒಂದು ವೇಳೆ ಯಾರಾದರೂ ಲಸಿಕೆ ಹಾಕಿಸಿಕೊಳ್ಳದಿದ್ದರೆ ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಮ್ ಹಾಲ್ ಮುಂಭಾಗದಲ್ಲಿ ಲಸಿಕೆಯನ್ನು ಹಾಕಲಾಗುತ್ತಿದೆ. ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಲಸಿಕೆ ಪಡೆಯಬಹುದಾಗಿದೆ.

ಲಸಿಕೆ ಹಾಕಿಸಿಕೊಳ್ಳಲು ವ್ಯವಸ್ಥೆ
ಕೊಪ್ಪಳ ಜಿಲ್ಲಾಡಳಿತ ಭವನದ ಮುಖ್ಯ ಪ್ರವೇಶ ದ್ವಾರದಲ್ಲಿ ಆರೋಗ್ಯ ಇಲಾಖೆಯ ಲಸಿಕಾ ವಿತರಣೆ ತಂಡದಿಂದ ಜಿಲ್ಲಾಡಳಿತ ಭವನಕ್ಕೆ ಬರುವ ಸಾರ್ವಜನಿಕರು, ಜಿಲ್ಲಾಡಳಿತ ಭವನದ ವಿವಿಧ ಇಲಾಖೆಗಳ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಸಿಬ್ಬಂದಿಗಳು ಸೇರಿದಂತೆ ಸಾರ್ವಜನಿಕರಿಗೂ ಲಸಿಕೆಯನ್ನು ನೀಡಲಾಯಿತು.
ಪ್ರತಿದಿನವೂ ಸಹ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಲಸಿಕೆ ಹಾಕಿಸಿಕೊಳ್ಳುವಾಗ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಡ್ರೈವಿಂಗ್ ಲೈಸೆನ್ಸ್, ಬ್ಯಾಂಕ್ ಖಾತೆ ಪುಸ್ತಕ (ಇದರಲ್ಲಿ ಯಾವುದಾದರು ಒಂದು ದಾಖಲೆ) ತೋರಿಸಬೇಕು ಎಂದು ಜಿಲ್ಲಾಡಳಿತ ಹೇಳಿದೆ.

ಸಿಬ್ಬಂದಿ ನಿಯೋಜನೆ ಮಾಡಲಾಗಿದೆ
ಜಿಲ್ಲಾಡಳಿತ ಭವನಕ್ಕೆ ಬರುವವರು ಕಡ್ಡಾಯವಾಗಿ ಲಸಿಕೆ ಪ್ರಮಾಣ ಪತ್ರವನ್ನು ಹೊಂದಿರಬೇಕು. ಈ ಸೂಚನೆಯನ್ನು ಯಶಸ್ವಿಗೊಳಿಸಲು ಸಿಬ್ಬಂದಿ ಹಾಗೂ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲಾಡಳಿತ ಭವನದ ಮುಂಭಾಗದ ಗೇಟ್ನಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜನರು ಆಗಮಿಸುವಾಗ ಪ್ರಮಾಣ ಪತ್ರ ಪರಿಶೀಲನೆ ನಡೆಸಲಾಗುತ್ತಿದೆ.
ಜಿಲ್ಲಾಡಳಿತ ಭವನ ಪ್ರವೇಶಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜಿಲ್ಲಾಡಳಿತ ಭವನದ ಆವರಣದಲ್ಲಿ ಮಾಸ್ಕ್ ಧರಿಸದೇ, ಕೋವಿಡ್ ನಿಯಮಗಳನ್ನು ಪಾಲಿಸದೇ ಇರುವವರನ್ನು ಗುರುತಿಸಿ ಮಾರ್ಗಸೂಚಿ ಅನ್ವಯ ದಂಡ ವಿಧಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಜಿಲ್ಲೆಯ ಕೋವಿಡ್ ಲಸಿಕೆ ಪರಿಸ್ಥಿತಿ
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅಧಿಕಾರಿಗಳ ಜೊತೆ ಜಿಲ್ಲೆಯ ಕೋವಿಡ್ ಲಸಿಕಾ ಕಾರ್ಯಕ್ರಮದ ಕುರಿತು ಸಭೆಯನ್ನು ನಡೆಸಿದ್ದಾರೆ. ಲಸಿಕೆ ಹಾಕಿಸಿಕೊಳ್ಳಲು ಸಾರ್ವಜನಿಕರು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರಲ್ಲಿ ಲಸಿಕೆ ಕುರಿತು ಹಾಗೂ ಅದರಿಂದ ಉಂಟಾಗುವ ಪ್ರಯೋಜನಗಳ ಕುರಿತು ಜಾಗೃತಿ ಮೂಡಿಸಿ. ವಿವಿಧ ತಾಲ್ಲೂಕುಗಳ ಅನೇಕ ಗ್ರಾಮಗಳಲ್ಲಿ ಲಸಿಕೆ ಹಾಕಿಸಿಕೊಳ್ಳಲು ವಿರೋಧ ವ್ಯಕ್ತಪಡಿಸುತ್ತಾರೆ. ಅಂತವರಿಗೆ ಲಸಿಕೆ ಬಗ್ಗೆ ಮನವರಿಕೆ ಮಾಡಿ ಲಸಿಕೆ ನೀಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಾದ್ಯಂತ ಮೊದಲ ಡೋಸ್ನಲ್ಲಿ ಶೇ 59.82 ರಷ್ಟು ಹಾಗೂ ಎರಡನೇ ಡೋಸ್ನಲ್ಲಿ ಶೇ 82.96 ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ.

ಶಾಲೆಗಳು ಆರಂಭವಾಗಿವೆ
ಶಾಲೆಗಳಲ್ಲಿ ವಿದ್ಯಾರ್ಥಿಗಳ ಪಾಲಕರು ಲಸಿಕೆಯನ್ನು ಪಡೆದಿರುವ ಕುರಿತು ಮಾಹಿತಿ ಸಂಗ್ರಹಿಸಿ. ಲಸಿಕೆಯಿಂದ ಆಗುವ ಪ್ರಯೋಜನದ ಬಗ್ಗೆ ಮಕ್ಕಳಿಗೆ ತಿಳುವಳಿಕೆ ಮೂಡಿಸಿ, ಅವರಿಂದ ಪಾಲಕರ ಮನವೊಲಿಸಿ ಲಸಿಕೆ ಪಡೆಯುವಂತೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಗ್ರಾಮಗಳಲ್ಲಿ ಲಸಿಕೆ ಪಡೆದವರ ಮಾಹಿತಿ ಸಂಗ್ರಹಿಸಿ, ಲಸಿಕೆ ಪಡೆದವರ ಮನೆಗೆ ಹಸಿರು ಸ್ಟಿಕ್ಕರ್ ಅಂಟಿಸಿ. ಸ್ಟಿಕ್ಕರ್ ಇಲ್ಲದ ಮನೆಯವರಿಗೆ ಲಸಿಕೆ ಪಡೆಯಲು ತಿಳಿಸಿ. ಮಾಸ್ಕ್ ಧರಿಸದವರಿಗೆ ಕಡ್ಡಾಯವಾಗಿ ನಿಯಮಾನುಸಾರ ದಂಡ ವಿಧಿಸಿ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರಿಗೆ ಲಸಿಕೆ ಪ್ರಮಾಣ ಪತ್ರ ಕಡ್ಡಾಯ. ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಎಂದು ನಿರ್ದೇಶನ ನೀಡಲಾಗಿದೆ.












Click it and Unblock the Notifications