ಸಿಗದ ಟಿಕೆಟ್: ರಾಜೀನಾಮೆ ನೀಡಿದ ರಾಯಣ್ಣ ಬ್ರಿಗೇಡ್ನ ವಿರೂಪಾಕ್ಷಪ್ಪ
ಬೆಂಗಳೂರು, ಏಪ್ರಿಲ್ 20: ಬಿಜೆಪಿಗೆ ಸಡ್ಡು ಹೊಡೆದು ಸ್ಥಾಪಿಸಲಾಗಿದ್ದ ರಾಯಣ್ಣ ಬ್ರಿಗೇಡ್ನ ರಾಜ್ಯ ಅಧ್ಯಕ್ಷರಾಗಿದ್ದ ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾಗಿರುವ ವಿರೂಪಾಕ್ಷಪ್ಪ ಸಿಂಧನೂರು ವಿಧಾನಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ರಾಯಣ್ಣ ಬ್ರಿಗೇಡ್ನಲ್ಲಿ ಗುರುತಿಸಿಕೊಂಡಿದ್ದ ಅನೇಕರನ್ನು ಪಕ್ಷ ಪರಿಗಣಿಸಿಲ್ಲ. ಇದರಿಂದ ಬೇಸರಗೊಂಡಿರುವ ವಿರೂಪಾಕ್ಷಪ್ಪ ರಾಜೀನಾಮೆ ಸಲ್ಲಿಸಿದ್ದಾರೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
'ನಾನು ಸುಮಾರು ಐದು ವರ್ಷಗಳಿಂದ ಭಾರತೀಯ ಜನತಾ ಪಕ್ಷದಲ್ಲಿ ಸಕ್ರಿಯ ಸದಸ್ಯನಾಗಿದ್ದು, ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ತನು, ಮನ, ಧನದಿಂದ ಸೇವೆ ಸಲ್ಲಿಸಿದ್ದೇನೆ. ಪ್ರತಿ ಕಾರ್ಯಕ್ರಮದಲ್ಲಿಯೂ ಪಕ್ಷದ ಪರವಾಗಿ ಭಾಗವಹಿಸಿ ಲೋಕಸಭೆ ಮತ್ತು ರಾಯಚೂರು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದೇನೆ.

ಸಿಂಧನೂರಿನಲ್ಲಿ ನಡೆದ ಪರಿವರ್ತನಾ ಯಾತ್ರೆ ಕಾರ್ಯಕ್ರಮ ಯಶಸ್ವಿಯಾಗಲು ಕಾರಣಿಭೂತನಾಗಿದ್ದೇನೆ. ಆದರೆ, ಪಕ್ಷ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಪ್ರತಿಯೊಂದು ಹಂತದಲ್ಲಿಯೂ ಕಡೆಗಣಿಸಿರುವುದರಿಂದ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವಿರೂಪಾಕ್ಷಪ್ಪ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ರಾಯಣ್ಣ ಬ್ರಿಗೇಡ್ನಲ್ಲಿ ಗುರುತಿಸಿಕೊಂಡಿದ್ದ ಸುಮಾರು 21 ಮುಖಂಡರಿಗೆ ವಿವಿಧ ಕ್ಷೇತ್ರಗಳಲ್ಲಿ ಟಿಕೆಟ್ ನೀಡುವಂತೆ ಬೇಡಿಕೆ ಸಲ್ಲಿಸಲಾಗಿತ್ತು. ಆದರೆ, ಒಬ್ಬರಿಗೆ ಮಾತ್ರ ಟಿಕೆಟ್ ನೀಡಲಾಗಿದ್ದು, ಉಳಿದ ಆಕಾಂಕ್ಷಿಗಳ ಹೆಸರನ್ನು ಹೈಕಮಾಂಡ್ ಪರಿಗಣಿಸಿಲ್ಲ. ರಾಯಣ್ಣ ಬ್ರಿಗೇಡ್ ಸ್ಥಾಪನೆಯ ನೇತೃತ್ವ ವಹಿಸಿದ್ದ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ನಗರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.












Click it and Unblock the Notifications