ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ, ನದಿಪಾತ್ರದ ಜನರಿಗೆ ಪ್ರವಾಹದ ಭೀತಿ
ಕೊಪ್ಪಳ, ಜುಲೈ 29 : ತುಂಗಭದ್ರಾ ನದಿಯ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಇದರಿಂದ ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀರನ್ನು ನದಿ ಮೂಲಕ ಹರಿಬಿಡಲಾಗುತ್ತಿದ್ದು ನದಿ ಪಾತ್ರದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.
ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದೆ. ಈಗ ನದಿಯ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ 72653 ಕ್ಯೂಸೆಕ್ ನೀರು ಒಳಹರಿವು ಇದೆ. ಇದರಿಂದಾಗಿ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿ ಬಿಡಲಾಗುತ್ತಿದೆ. ನದಿ ಮೂಲಕ ಜಲಾಶಯದಿಂದ 98,800 ಕ್ಯೂಸೆಕ್ ನೀರನ್ನು ಹರಿ ಬಿಡಲಾಗುತ್ತಿದ್ದು ನದಿ ಪಾತ್ರದ ಗ್ರಾಮಗಳಿಗೆ ಈಗ ಪ್ರವಾಹದ ಭೀತಿ ಎದುರಾಗಿದೆ.
ಕೊಪ್ಪಳ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಾದ ವಿರುಪಾಪುರಗಡ್ಡೆ, ನವವೃಂದಾವನ ಸಂಪರ್ಕ ಕಡಿದುಕೊಂಡಿವೆ. ಇನ್ನು ಕಕ್ಕರಗೋಳ, ಉಳೇನೂರು, ಸಾಣಾಪುರದ ನದಿ ಪಾತ್ರದ ಜಮೀನುಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಬಳ್ಳಾರಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ಸೇತುವೆಯಾಗಿರುವ ಚಿಕ್ಕಜಂತಕಲ್ ಬಳಿ ಇರುವ ಗಂಗಾವತಿ - ಕಂಪ್ಲಿ ಸೇತುವೆ ಮೇಲೆ ನದಿ ನೀರು ಹರಿಯುವ ಸಾಧ್ಯತೆ ಇದ್ದು ವಾಹನ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಬೆವಿನಹಾಳ ಸೇತುವೆ ಭರ್ತಿ
ಕೊಪ್ಪಳ ತಾಲೂಕು ವ್ಯಾಪ್ತಿಯಲ್ಲಿ ಗುರುವಾರ ರಾತ್ರಿಯಿಂದಲೇ ಸುರಿಯುತ್ತಿರುವ ಮಳೆಯಿಂದ ಬೆವಿನಹಾಳ ಬಳಿ ಸೇತುವೆ ತುಂಬಿ ಹರಿಯುತ್ತಿದೆ. ಇದರಿಂದ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಇತ್ತೀಚೆಗೆ ಸ್ಥಳಾಂತರಗೊಂಡಿದ್ದ ಎಪಿಎಂಸಿ ಮಾರುಕಟ್ಟೆ ಅಂಗಳದಲ್ಲಿ ನೀರು ನಿಂತಿದ್ದು, ಕೆಸರಿನ ಗದ್ದೆಯಾಗಿದೆ. ಇದರಿಂದ ಮಾರುಕಟ್ಟೆಗೆ ಬೇರೆ ಊರುಗಳಿಂದ ಬಂದಿದ್ದ ವ್ಯಾಪಾರಿಗಳು ತೀವ್ರ ತೊಂದರೆ ಅನುಭವಿಸಿದರು.

ಹೊಳೆ ಆಲೂರು-ಬದಾಮಿ ರಸ್ತೆ ಸಂಪರ್ಕ ಕಡಿತ
ಗದಗ ಜಿಲ್ಲೆಯಲ್ಲೂ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ಪರಿಣಾಮ ಮಲಪ್ರಭಾ ನದಿಗೆ ಅಡ್ಡಲಾಗಿ ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರು ಬಳಿ ಕಟ್ಟಿರುವ ಸೇತುವೆ ಮುಳುಗಡೆ ಯಾಗಿದ್ದು, ಹೊಳೆ ಆಲೂರು-ಬದಾಮಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ರಬಸವಾಗಿ ಹರಿಯುತ್ತಿದ್ದರೂ ಸಹಾ ಬೈಕ್ ಸವಾರರು, ರೈತರು ಅಪಾಯವನ್ನು ಲೆಕ್ಕಿಸದೇ ಸೇತುವೆ ಮೇಲೆ ಹೋಗುತ್ತಿದ್ದಾರೆ.
ಗುರುವಾರ ಸಂಜೆ ಸುರಿದ ಮಳೆ ನಗರದ ಎಸ್ಎಂ ಕೃಷ್ಣನಗರದ ಬಳಿ ಕೆರೆಯ ಕಟ್ಟೆ ಹೊಡೆದು 100ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಕೆರೆ ಅಕ್ಕಪಕ್ಕ ಗುಡಿಸಲು ನಿರ್ಮಿಸಿ ವಾಸ ಮಾಡಿಕೊಂಡಿದ್ದ ಕೂಲಿ ಕಾರ್ಮಿಕರ ಮನೆಗಳು ಮಳೆಗೆ ಮುಳುಗಡೆಗೊಂಡಿದೆ.

ಜುಲೈ 29ರಂದು ಕೆಲವು ಕಡೆ ಮಳೆಯಾಗುವ ಸಾಧ್ಯತೆ
ಜುಲೈ 29ರಂದು ಕೆಲವು ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದರು, ಕರಾವಳಿ-ಮಲೆನಾಡಿಗೆ ಅತಿ ಭಾರಿ ಮಳೆ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಜುಲೈ 29ರಂದು ಒಂದು ಅತೀ ಭಾರಿ ಮಳೆ ಸುರಿಯಲಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ.

ಹಳದಿ ಅಲರ್ಟ್ ಘೋಷಣೆ
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರುಗಳಲ್ಲಿಆಗಸ್ಟ್ 2ರ ತನಕ ಗಾಳಿ ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. ಹಾಗಾಗಿ ಈ ಜಿಲ್ಲೆಗಳಿಗೆ ಆಗಸ್ಟ್ 2ರವರೆಗೆ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಜುಲೈ 29ರಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ..












Click it and Unblock the Notifications