ಮಳೆಯಲ್ಲೂ ಕೊಪ್ಪಳ ಹುಲಿಗೆಮ್ಮ ದೇವಿ ಮಹಾರಥೋತ್ಸವಕ್ಕೆ ಭಕ್ತ ಸಾಗರ
ಕೊಪ್ಪಳ, ಮೇ 22: ಬುಧವಾರ ಸುರಿಯುತ್ತಿದ್ದ ಮಳೆಯ ನಡುವೆಯೂ ಕೊಪ್ಪಳ ತಾಲೂಕಿನ ಹುಲಿಗೆ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಾಲಯದ ಜಾತ್ರೆಗೆ ಸಾವಿರಾರು ಭಕ್ತರು ಆಗಮಿಸಿದ್ದರು. ಉಧೋ ಉಧೋ ಘೋಷಣೆಯ ಮೂಲಕ ವಿಜೃಂಭಣೆಯಿಂದ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ 2025 ಪೂರ್ಣಗೊಂಡಿತು.
ಉತ್ತರ ಕರ್ನಾಟಕ ಭಾಗದ ಶಕ್ತಿ ಪೀಠ ಎಂದೇ ಖ್ಯಾತವಾಗಿರುವ ಹುಲಿಗಿ ಕ್ಷೇತ್ರದ ಆದಿಶಕ್ತಿ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ 2025 ವಿಜೃಂಭಣೆಯಿಂದ ನಡೆಯಿತು. ಮಹಾರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾಗಿದ್ದು, ದೇವಿಯ ದರ್ಶನ ಪಡೆದು ಪುನೀತರಾದರು.

ರಥೋತ್ಸವದಲ್ಲಿ ಕೊಪ್ಪಳ ಸಂಸದ ಕೆ. ರಾಜಶೇಖರ ಬಸವರಾಜ ಹಿಟ್ನಾಳ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಮಾಜಿ ಸಂಸದ ಕರಡಿ ಸಂಗಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ. ಹೆಚ್. ಪ್ರಕಾಶ್ರಾವ್ ಸೇರಿದಂತೆ ಹಲವು ಅಧಿಕಾರಿಗಳು ಸಾಕ್ಷಿಯಾದರು.
ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಹುಲಿಗೆಮ್ಮ ದೇವಿ ದೇವಾಲಯದ 2025ನೇ ಜಾತ್ರಾ ಮಹೋತ್ಸವದ ಅಂಗವಾಗಿ ಮೇ 24ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಜಾತ್ರೆಯ ಮುಖ್ಯ ಭಾಗವಾದ ಮಹಾರಥೋತ್ಸವವು ಮೇ 21ರ ಸಾಯಂಕಾಲ 5.30 ಗಂಟೆಗೆ ಲಕ್ಷಾಂತರ ಭಕ್ತಾಧಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ಮಳೆಯ ನಡುವೆಯೂ ಮಹಾರಥೋತ್ಸವಕ್ಕೆ ಭಕ್ತರು ಸಾಗರದಂತೆ ಹರಿದು ಬಂದಿರುವುದು ವಿಶೇಷವಾಗಿತ್ತು.
ಲಕ್ಷಾಂತರ ಭಕ್ತರು ಭಾಗಿ: ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವದಲ್ಲಿ ಭಕ್ತರ ಉಧೋ ಉಧೋ ಘೋಷಣೆ ಮುಗಿಲು ಮುಟ್ಟಿತ್ತು. ಭಕ್ತವೃಂದ ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಸಮರ್ಪಿಸಿ, ಭಕ್ತಿ ಭಾವ ಮೆರೆದರು. ದೇವಿಯ ದರ್ಶನವನ್ನು ಪಡೆದರು.
ಕೊಪ್ಪಳ ಮಾತ್ರವಲ್ಲದೇ ಕರ್ನಾಟಕದ ವಿವಿಧ ಜಿಲ್ಲೆಗಳು ಮತ್ತು ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳಿಂದಲೂ ಭಕ್ತಾದಿಗಳು ಜಾತ್ರೆಗೆ ಆಗಮಿಸಿದ್ದರು. ಭಕ್ತರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿತ್ತು.
ಸಾವಿರಾರು ಭಕ್ತರು ಮಹಾರಥೋತ್ಸವವನ್ನು ಕಣ್ತುಂಬಿಕೊಂಡರು. ರಥವು ಪಾಜಕಟ್ಟಿ ತನಕ ಹೋಗಿ ದೇವಾಲಯದ ಬಳಿ ಮರಳುತ್ತಿದ್ದಂತೆ ಎಲ್ಲರೂ ಚಪ್ಪಾಳೆ ತಟ್ಟಿ ಸಂಭ್ರಮಿಸಿದರು. ಜಾತ್ರೆಯ ಅಂಗವಾಗಿ ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ 1959 ಮತ್ತು ಕರ್ನಾಟಕ ಪ್ರಾಣಿ ಬಲಿ ನಿಷೇಧ ನಿಯಮಗಳು 1963 ರ ಪ್ರಕಾರ ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ನೀಡುವುದನ್ನು ನಿಷೇಧಿಸಿ ಕೊಪ್ಪಳ ತಹಶೀಲ್ದಾರ್ ಹಾಗೂ ತಾಲ್ಲೂಕಾ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ವಿಠ್ಠಲ್ ಚೌಗಲಾ ಆದೇಶ ಹೊರಡಿಸಿದ್ದರು.
ಜಾತ್ರಾ ಮಹೋತ್ಸವಕ್ಕೆ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ದೇವಾಲಯದ ಆಡಳಿತ ಮಂಡಳಿಯು ಅಚ್ಚುಕಟ್ಟಾದ ವ್ಯವಸ್ಥೆ ಮಾಡಿತ್ತು. ಕುಡಿಯುವ ನೀರು, ಶೌಚಾಲಯ, ಸ್ನಾನ ಗೃಹ, ಸಾರಿಗೆ ಮತ್ತು ವಾಹನಗಳ ಪಾರ್ಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.












Click it and Unblock the Notifications