IAS transfer; ಕೊಪ್ಪಳ ಜಿಲ್ಲಾಧಿಕಾರಿ ವರ್ಗಾವಣೆ
ಕೊಪ್ಪಳ, ಆಗಸ್ಟ್ 18: ಕರ್ನಾಟಕದ ಕಾಂಗ್ರೆಸ್ ಸರ್ಕಾರ ವರ್ಗಾವಣೆಯನ್ನು ಮುಂದುವರೆಸಿದೆ. ಐಎಎಸ್ ಅಧಿಕಾರಿಗಳ ವರ್ಗಾವಣೆ ಕುರಿತು ಶುಕ್ರವಾರ ಆದೇಶವಾಗಿದ್ದು, ಕೊಪ್ಪಳದ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಶುಕ್ರವಾರ ಕರ್ನಾಟಕ ಸರ್ಕಾರ ಕೊಪ್ಪಳ ಜಿಲ್ಲಾಧಿಕಾರಿಯಾದ ಎಂ. ಸುಂದರೇಶ ಬಾಬು ಅವರನ್ನು ವರ್ಗಾವಣೆಗೊಳಿಸಿದೆ. ಕೆಎಸ್ಆರ್ಟಿಸಿಯ ನಿರ್ದೇಶಕರಾಗಿ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಕೊಪ್ಪಳದ ನೂತನ ಜಿಲ್ಲಾಧಿಕಾರಿಯಾಗಿ ನಲಿನ್ ಅತುಲ್ (ಕೆಎನ್ 2014) ನೇಮಕ ಮಾಡಲಾಗಿದೆ. ನಲಿನ್ ಅತುಲ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬೆಂಗಳೂರು ಇಲ್ಲಿನ ಸಾಮಾಜಿಕ ಲೆಕ್ಕಪರಿಶೋಧನೆ ವಿಭಾಗದ ನಿರ್ದೇಶಕರಾಗಿದ್ದರು.
ಎಂ. ಸುಂದರೇಶ ಬಾಬು 2022ರ ಜುಲೈ 20ರಂದು ಕೊಪ್ಫಳ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಅದಕ್ಕೂ ಮೊದಲು ವಿಕಾಸ್ ಕಿಶೋರ್ ಸುರಳ್ಕರ್ ಅವರು ಜಿಲ್ಲಾಧಿಕಾರಿಯಾಗಿದ್ದರು. ಅವರನ್ನು ವರ್ಗಾವಣೆ ಮಾಡಿದ್ದ ಸರ್ಕಾರ ಎಂ. ಸುಂದರೇಶ ಬಾಬು ನೇಮಕ ಮಾಡಿತ್ತು.
ಕರ್ನಾಟಕ ಕೇಡರ್ನ 2014ನೇ ಬ್ಯಾಚ್ ಐಎಎಸ್ ಅಧಿಕಾರಿ ನಲಿನ್ ಅತುಲ್ ಈ ಹಿಂದೆ ಕಲಬುರಗಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ ಕಾರ್ಯ ನಿರ್ವಹಣೆ ಮಾಡಿದ್ದರು. ಅದಕ್ಕೂ ಮೊದಲು ಕರ್ನಾಟಕ ಮುನ್ಸಿಪಲ್ ಡಾಟಾ ಸೊಸೈಟಿಯ (ಸುಧಾರಣೆಗಳು) ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.
ಎಂ. ಸುಂದರೇಶ ಬಾಬು ಪರಿಚಯ; 2012ನೇ ಬ್ಯಾಚ್ ಐಎಎಸ್ ಅಧಿಕಾರಿಯಾದ ಎಂ. ಸುಂದರೇಶ ಬಾಬು ತಮಿಳುನಾಡು ಮೂಲದವರು. ಮಧುರೈನ ಕೃಷಿ ವಿಶ್ವವಿದ್ಯಾಲಯದಿಂದ 2004ರಲ್ಲಿ ಬಿಎಸ್ಸಿ ಪದವಿ ಪಡೆದಿದ್ದಾರೆ.
ಕೆನರಾ ಬ್ಯಾಂಕ್ನಲ್ಲಿ ಕೆಲವು ಕಾಲ ಅವರು ಕಾರ್ಯ ನಿರ್ವಹಣೆ ಮಾಡಿದ್ದರು. 2012ರಲ್ಲಿ ಐಎಎಸ್ ಪರೀಕ್ಷೆ ಬರೆದು ಸರ್ಕಾರಿ ಸೇವೆ ಆರಂಭಿಸಿದರು. ಧಾರವಾಡ ಉಪವಿಭಾಗಾಧಿಕಾರಿಯಾಗಿ, ವಿಜಯಪುರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
ಗದಗ ಜಿಲ್ಲಾಧಿಕಾರಿಯಾಗಿದ್ದ ಅವರು ಬಳಿಕ ಕೊಪ್ಪಳ ಜಿಲ್ಲಾಧಿಕಾರಿಯಾಗಿ ನೇಮಕಗೊಂಡರು. 2023ರ ವಿಧಾನಸಭೆ ಚುನಾವಣೆಯನ್ನು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ್ದರು.
ನಲಿನ್ ಅತುಲ್ ಅಧಿಕಾರ ಸ್ವೀಕಾರ; ಐಎಎಸ್ ಅಧಿಕಾರಿ ನಲಿನ್ ಅತುಲ್ ಕೊಪ್ಪಳದ ನೂತನ ಜಿಲ್ಲಾಧಿಕಾರಿಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಕೊಪ್ಪಳ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರನ್ನು ಕೊಪ್ಪಳದ ಜಿಲ್ಲಾಧಿಕಾರಿಯಾಗಿ ಸರ್ಕಾರ ವರ್ಗಾವಣೆ ಮಾಡಿತ್ತು.
2014ನೇ ಬ್ಯಾಚ್ನ ಐಎಎಸ್ ಅಧಿಕಾರಿ ನಲಿನ್ ಅತುಲ್ ಮೂಲತಃ ಬಿಹಾರ ರಾಜ್ಯದವರು. ಈ ಮೊದಲು ಕಲಬುರಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯಾಗಿ, ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.












Click it and Unblock the Notifications