Koppal: ಹಾಲಿ ಸಂಸದರಿಗೆ ಕೈತಪ್ಪಿದ ಟಿಕೆಟ್; ಕೊಪ್ಪಳದಲ್ಲಿ ಈ ಬಾರಿ ಗೆಲುವು ಯಾರಿಗೆ?
ಲೋಕಸಭಾ ಚುನಾವಣೆ ಎದುರಿಸಲು ಎಲ್ಲಾ ಪಕ್ಷಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ. ಕರ್ನಾಟಕದ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಹಲವು ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಿದ್ದು ಹೊಸ ಮುಖಗಳಿಗೆ ಬಿಜೆಪಿ ಮಣೆ ಹಾಕಿದೆ.
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕೂಡ ಈ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈತಪ್ಪಿದ್ದು, ಡಾ. ಬಸವರಾಜ ಕ್ಯಾತನೂರು ಅವರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.

ಕಳೆದ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಸಮಬಲದ ಸ್ಪರ್ಧೆ ನೀಡಿ ಕಡಿಮೆ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಹಿಟ್ನಾಳ್ ಸೋಲು ಕಂಡಿದ್ದರು. ಈ ಬಾರಿ ಕೂಡ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ.
ಎಂಟು ವಿಧಾನಸಭಾ ಕ್ಷೇತ್ರಗಳು
ಕೊಪ್ಪಳ ಲೋಕಸಭಾ ಕ್ಷೇತ್ರವು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. 8 ವಿಧಾನಸಭಾ ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದರೆ, ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕ ಇದ್ದಾರೆ. ಮತ್ತೊಂದು ಕ್ಷೇತ್ರದಲ್ಲಿ ಜನಾರ್ಧನ ರೆಡ್ಡಿ ಶಾಸಕರಾಗಿದ್ದಾರೆ.
ಸಿಂಧನೂರು, ಮಸ್ಕಿ, ಕುಷ್ಠಗಿ, ಕನಕಗಿರಿ, ಗಂಗಾವತಿ, ಯಲ್ಬುರ್ಗಾ, ಕೊಪ್ಪಳ, ಸಿರುಗುಪ್ಪ ವಿಧಾನಸಭಾ ಕ್ಷೇತ್ರಗಳು ಕೊಪ್ಪಳ ಲೋಕಸಭಾ ವ್ಯಾಪ್ತಿಗೆ ಬರುತ್ತವೆ.
ಹಾಲಿ ಸಂಸದರಿಗೆ ಕೈತಪ್ಪಿದ ಟಿಕೆಟ್
ಎರಡು ಬಾರಿ ಗೆಲುವು ಸಾಧಿಸಿರುವ ಸಂಗಣ್ಣ ಕರಡಿ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದೆ. ಬದಲಾಗಿ ಖ್ಯಾತ ಕೀಲು ಮೂಳೆ ವೈದ್ಯರಾಗಿರುವ ಡಾ. ಬಸವರಾಜ ಕ್ಯಾವತೂರು ಅವರಿಗೆ ಈ ಬಾರಿ ಟಿಕೆಟ್ ನೀಡಿದೆ. ಡಾ. ಬಸವರಾಜ ಕ್ಯಾವತೂರು ಅವರು ವೈದ್ಯರಾಗಿದ್ದರು ತಮ್ಮ ಸಮಾಜಸೇವಾ ಕಾರ್ಯಗಳಿಂದ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ.
ಆದರೆ ಇಲ್ಲಿ 6 ಮಂದಿ ಕಾಂಗ್ರೆಸ್ ಶಾಸಕರಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿನ ಅನುಕೂಲ ಸಿಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಬಿಜೆಪಿ ಕಾಂಗ್ರೆಸ್ ನಡುವೆ ಈ ಬಾರಿ ಕೂಡ ನೇರ ಹಣಾಹಣಿಯನ್ನು ನಿರೀಕ್ಷೆ ಮಾಡಲಾಗಿದೆ.
ಕಳೆದ ಚುನಾವಣೆ ಫಲಿತಾಂಶ
2014 ಮತ್ತು 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕರಡಿ ಸಂಗಣ್ಣ ಅಮರಪ್ಪ ಅವರು ಗೆಲುವು ಸಾಧಿಸಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಸಂಗಣ್ಣ ಕರಡಿ ಅವರು, ಕಾಂಗ್ರೆಸ್ನ ರಾಜಶೇಖರ್ ಬಸವರಾಜ ಹಿಟ್ನಾಳ್ ವಿರುದ್ಧ 38,397 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.
ಬಿಜೆಪಿಯ ಸಂಗಣ್ಣ ಕರಡಿ 5,86,783 ಮತಗಳನ್ನು ಪಡೆದರೆ, ರಾಜಶೇಖರ್ ಬಸವರಾಜ ಹಿಟ್ನಾಳ್ 5,48,386 ಮತಗಳನ್ನು ಪಡೆದಿದ್ದರು. ಇಬ್ಬರ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದರೂ, ಬಿಜೆಪಿ ಅಭ್ಯರ್ಥಿ ಅಂತಿಮವಾಗಿ ಗೆಲುವಿನ ನಗೆ ಬೀರಿದ್ದರು.












Click it and Unblock the Notifications