ಅಂಜನಾದ್ರಿ ಬೆಟ್ಟದ ಅಭಿವೃದ್ಧಿ; 50 ಕೋಟಿ ಕಾಮಗಾರಿಗೆ ಶೀಘ್ರವೇ ಒಪ್ಪಿಗೆ
ಕೊಪ್ಪಳ, ಮಾರ್ಚ್ 16; ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದರು. ಆಂಜನೇಯ ಜನಿಸಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಗ್ರಾಮದಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಹೊಸ ರೂಪ ಕೊಡಲು ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು.
ಮಂಗಳವಾರ ವಿಧಾನಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ. ಸಿ. ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಸಭೆಯಲ್ಲಿ ಮಾಸ್ಟರ್ ಪ್ಲಾನ್ ರೂಪಿಸಲಾಯಿತು. ಮೊದಲ ಹಂತದಲ್ಲಿ ರೂ. 50 ಕೋಟಿ ವೆಚ್ಚದಲ್ಲಿ ಅತೀ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕಾಮಗಾರಿ ಆರಂಭಕ್ಕೆ ಒಪ್ಪಿಗೆ ಪಡೆಯಲಾಗುತ್ತದೆ.
ಏಪ್ರಿಲ್ 16 ರಂದು ಐದು ಜನ ಸಚಿವರು ಅಂಜನಾದ್ರಿ ಬೆಟ್ಟದ ಸ್ಥಳ ಪರಿಶೀಲನೆಯನ್ನು ನಡೆಸಲಿದ್ದಾರೆ. ಬಳಿಕ ಬೆಟ್ಟದ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ.

2ನೇ ಹಂತದ ಅಭಿವೃದ್ಧಿ ಕಾರ್ಯಗಳು
ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ 2ನೇ ಹಂತದಲ್ಲಿ ರೋಪ್ ವೇ, ಯಾತ್ರಿ ನಿವಾಸ, ವಾಟರ್ ಸ್ಪೋರ್ಟ್ಸ್ ಆರಂಭ ಸೇರಿದಂತೆ ವಿವಿಧ ಯೋಜನೆಗಳನ್ನು ಕೈಗೊಳ್ಳಲಾಗುತ್ತದೆ. ಆಂಜನೇಯ ಜನಿಸಿರುವ ಅಂಜನಾದ್ರಿ ಬೆಟ್ಟಕ್ಕೆ ಮೂಲಭೂತ ಸೌಕರ್ಯ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಇಂದು ಹಲವಾರು ತೀರ್ಮಾನಗಳನ್ನು ಕೈಗೊಂಡಿದೆ.

ಐವರು ಸಚಿವರ ಭೇಟಿ
ಏಪ್ರಿಲ್ 16 ರಂದು ಸಚಿವರಾದ ಕೆ. ಎಸ್. ಈಶ್ವರಪ್ಪ, ಸಿ. ಪಿ. ಯೋಗೇಶ್ವರ್, ಕೋಟ ಶ್ರೀನಿವಾಸ ಪೂಜಾರಿ, ಬಿ. ಸಿ. ಪಾಟೀಲ್ ಹಾಗೂ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಲಿದ್ದಾರೆ. ನಂತರ, ಬೆಟ್ಟಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಸಾವಿರಾರು ಭಕ್ತರ ಭೇಟಿ
ದೇಶದ ನಾಲ್ಕು ಐತಿಹಾಸಿಕ ಹಾಗೂ ಪುರಾತನ ಸರೋವರಗಳಲ್ಲಿ ಪಂಪ ಸರೋವರ ಸಹ ಒಂದು. ಇದನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುತ್ತದೆ. 101 ಬಾವಿಗಳ ಪುನಶ್ಚೇತನ ಸೇರಿದಂತೆ ಅಂಜನಾದ್ರಿ ಬೆಟ್ಟ ಮತ್ತು ಆನೆಗುಂದಿ ಪ್ರದೇಶದ 100 ಎಕರೆ ಪ್ರದೇಶದಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂಜನಾದ್ರಿ ಬೆಟ್ಟದಲ್ಲಿ ಒಂದು ಗೋಶಾಲೆಯಿದ್ದು, ಸಾವಿರ ದನ-ಕರುಗಳಿವೆ ಇದರ ಜೊತೆಗೆ ಇನ್ನೊಂದು ಗೋಶಾಲೆ ತೆರೆಯಲು ಸಹ ತೀರ್ಮಾನಿಸಲಾಯಿತು.

50 ಕೋಟಿ ರೂ. ಒದಗಿಸಿದ್ದಾರೆ
ಮುಖ್ಯಮಂತ್ರಿಗಳು ಬಜೆಟ್ನಲ್ಲಿ 50 ಕೋಟಿ ಅನುದಾನವನ್ನು ನೀಡಿದ್ದಾರೆ. ಬೆಟ್ಟದ ಮುಂಭಾಗದಲ್ಲಿರುವ ಹುಲಿಗಿ-ಗಂಗಾವತಿ ರಾಜ್ಯ ಹೆದ್ದಾರಿಯನ್ನು 1 ಕಿ.ಮೀ. ಅಗಲೀಕರಣ ಮಾಡುವುದು. ಬೀದಿ ದೀಪ ಅಳವಡಿಕೆ, ಸೇವಾ ಹಾಗೂ ಟಿಕೆಟ್ ಕೌಂಟರ್ ನಿರ್ಮಾಣ, ಪ್ರವಾಸಿಗರಿಗೆ ತುರ್ತು ಪರಿಸ್ಥಿತಿಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆ ನಿರ್ಮಾಣ, ಮೊಬೈಲ್ ಸಂಪರ್ಕಕ್ಕಾಗಿ ಮೊಬೈಲ್ ಟವರ್ ಅಳವಡಿಸುವುದು ಮುಂತಾದ ಕಾಮಗಾರಿಗಳನ್ನು ಮೊದಲು ಕೈಗೊಳ್ಳಲಾಗುತ್ತದೆ.
Recommended Video

ರಾಮಾಯಣದಲ್ಲಿ ಉಲ್ಲೇಖವಿದೆ
ನೂರಾರು ವರ್ಷಗಳ ಇತಿಹಾಸ ಹೊಂದಿರುವ ಅಂಜನಾದ್ರಿ ಪರ್ವತದ ಬಗ್ಗೆ ರಾಮಾಯಣದಲ್ಲಿಯೂ ಉಲ್ಲೇಖವಿದೆ. ಶ್ರೀ ರಾಮನ ಭಕ್ತನಾಗಿರುವ ಆಂಜನೇಯನನ್ನು ಶ್ರೀರಾಮ ಹಾಗೂ ಲಕ್ಷ್ಮಣರು ಅಂಜನಾದ್ರಿ ಬೆಟ್ಟದಲ್ಲಿ ಭೇಟಿಯಾಗಿದ್ದರಂತೆ. ಅಂಜನಾ ದೇವಿಯು ಆಂಜನೇಯನಿಗೆ ಇಲ್ಲಿ ಜನ್ಮ ನೀಡಿದ್ದರಿಂದ, ಈ ಬೆಟ್ಟಕ್ಕೆ ಅಂಜನಾದ್ರಿ ಪರ್ವತ ಎಂದು ಹೆಸರಿಡಲಾಗಿದೆ. ತುಂಗಾಭದ್ರಾ ನದಿಯ ದಡದಲ್ಲಿರುವ ಈ ಬೆಟ್ಟ ದಕ್ಷಿಣ ಭಾರತದ ಕಾಶಿ ಎಂದು ಪ್ರಸಿದ್ದಿ ಹೊಂದಿದೆ. ಅಂಜನಾದ್ರಿ ಬೆಟ್ಟಕ್ಕೆ ಪ್ರತಿ ದಿನ 3 ಸಾವಿರಕ್ಕೂ ಹೆಚ್ಚು ಹಾಗೂ ಮಂಗಳವಾರ ಮತ್ತು ಶನಿವಾರ 20 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸುತ್ತಾರೆ.












Click it and Unblock the Notifications