ಕೊರೊನಾ ಸಂಕಷ್ಟದಲ್ಲಿ ಗ್ರಾಮೀಣ ಜನರಿಗೆ ನೆರವಾದ ನರೇಗಾ
ಕೊಪ್ಪಳ, ಏಪ್ರಿಲ್ 27 : ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ಕೆಲಸ ಸಿಗದೆ ಜನರು ಪರದಾಡುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ನರೇಗಾ ಯೋಜನೆಯಡಿ ಜನರಿಗೆ ಕೆಲಸ ನೀಡಲಾಗುತ್ತಿದೆ.
"ಗ್ರಾಮೀಣ ಭಾಗದ ಕೂಲಿಕಾರರಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮತ್ತು ಕೃಷಿ, ತೋಟಗಾರಿಕೆ ಇಲಾಖೆಗಳಿಂದ ಕೂಲಿ ಆಧಾರಿತ ಕಾಮಗಾರಿಗಳನ್ನು ಗುರುತಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೆಲಸ ಮಾಡಿಸಲಾಗುತ್ತಿದೆ" ಎಂದು ಕೊಪ್ಪಳ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಹೇಳಿದರು.
ಕೆಪಿಎಸ್ಸಿ ನೇಮಕಾತಿ; ಅರ್ಜಿ ಸಲ್ಲಿಕೆಗೆ ಜೂನ್ 1ರ ತನಕ ಅವಕಾಶ
ಕೊಪ್ಪಳ ತಾಲೂಕಿನ ಇರಕಲ್ಲಗಡಾ, ಹುಲಿಗಿ, ಅಳವಂಡಿ, ಬೆಟಗೇರಿ ಮುಂತಾದ ಗ್ರಾಮಗಳು. ಕುಷ್ಟಗಿ ತಾಲೂಕಿನ ಶಿರಗುಂಪಿ, ಬಿಜಕಲ್, ಹೂಲಗೇರಾ, ಚಳಗೇರಾ, ಹಿರೇಬನ್ನಿಗೊಳ ಮುಂತಾದ ಗ್ರಾಮಗಳು. ಯಲಬುರ್ಗಾ ತಾಲೂಕಿನ ಮುಧೋಳ, ಬಂಡಿ, ತುಮ್ಮರಗುದ್ದಿ, ಬಳೂಟಗಿ, ಬೇವೂರು ಮುಂತಾದ ಗ್ರಾಮಗಳು. ಗಂಗಾವತಿ ತಾಲೂಕಿನ ಮುಸಲಾಪುರ, ಹುಲಿಹೈದರ, ಬಸರಿಹಾಳ, ಚಿಕ್ಕಮಾದಿನಾಳ ಮುಂತಾದ ಗ್ರಾಮಗಳಲ್ಲಿ ಕೆಲಸಗಳು ನಡೆಯುತ್ತಿವೆ.
ಲಾಕ್ ಡೌನ್ ಸಂಕಷ್ಟದಲ್ಲಿ ಹಳ್ಳಿ ಜನರಿಗೆ ನೆರವಾದ ನರೇಗಾ
ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನಾಲಾ ಅಭಿವೃದ್ಧಿ ಇನ್ನೂ ಮುಂತಾದ ಕೂಲಿ ಆಧಾರಿತ ಕಾಮಗಾರಿಗಳಲ್ಲಿ ಕೆಲಸ ಒದಗಿಸಲಾಗಿದೆ. ಕೂಲಿ ಮಾಡಿದವರಿಗೆ ಸಕಾಲದಲ್ಲಿ ಹಣ ಪಾವತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಆದೇಶದಂತೆ 5 ಜನರಿಗಿಂತ ಹೆಚ್ಚು ಕೂಲಿಕಾರರು ಕೆಲಸ ನಿರ್ವಹಿಸದಂತೆ ನಿಗಾವಹಿಸಿ ಮತ್ತು ಪರಸ್ಪರ ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ; ಮೇ 15ರೊಳಗೆ ಅರ್ಜಿ ಹಾಕಿ
ಕೃಷಿಗೆ ಪೂರಕ ನರೇಗಾಯೋಜನೆ
ರೈತರು ತಮ್ಮ ಸ್ವಂತ ಜಮೀನುಗಳಲ್ಲಿ ಮುಂಗಾರು ಹಂಗಾಮಿಗೆ ಪೂರ್ವ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ನೀರಾವರಿ ಇಲ್ಲದ ಪ್ರದೇಶಗಳಲ್ಲಿ ಕೃಷಿ ಇಲಾಖೆಯಿಂದ ಕ್ಷೇತ್ರ ಬದು ಮತ್ತು ಕಂದಕ ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣ ಕಾಮಗಾರಿಗಳಲ್ಲಿ ಕೆಲಸ ನೀಡಲಾಗಿದೆ. ನೀರಾವರಿ ಪ್ರದೇಶಗಳಲ್ಲಿ ರೈತರು ತಮ್ಮ ಹೊಲಗಳಲ್ಲಿ ಬದು ನಿರ್ಮಾಣ, ಕೃಷಿ ಹೊಂಡದ ಕಾಮಗಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಮಳೆಗಾಲದಲ್ಲಿ ನೀರು ಸಂಗ್ರಹವಾಗಿ ಅಂತರ್ಜಲ ಹೆಚ್ಚಿಸಿಕೊಳ್ಳಲು ಮತ್ತು ಕೊಳವೆ ಬಾವಿಗಳು ಮರುಪೂರಣಗೊಳ್ಳಲು ಉಪಯೋಗವಾಗಲಿದೆ.
ಸಂಕಷ್ಟ ಸಮಯದಲ್ಲಿ ಪರಿಹಾರ
ಕೊರೋನಾ ಸಂಕಷ್ಟದಿಂದಾಗಿ ಎಲ್ಲಾ ಕಡೆ ಉದ್ಯೋಗಗಳು ಸ್ಥಗಿತಗೊಂಡಿವೆ. ಉದ್ಯೋಗಕ್ಕೆಂದು ಮಹಾನಗರಗಳಿಗೆ ವಲಸೆ ಹೋದ ಅನೇಕ ಕೂಲಿಕಾರರು ತಮ್ಮ ಗ್ರಾಮಗಳಿಗೆ ಮರಳಿದ್ದಾರೆ. ಉದ್ಯೋಗವಿಲ್ಲದೆ ಕುಳಿತುಕೊಂಡಿದ್ದ ಗ್ರಾಮಸ್ಥರಿಗೆ, ಕೃಷಿ ಕಾರ್ಮಿಕರಿಗೆ, ರೈತರಿಗೆ ಮಹಾತ್ಮಗಾಂಧಿ ನರೇಗಾ ಯೋಜನೆಯಿಂದ ಸ್ವಗ್ರಾಮಗಳಲ್ಲಿ ಉದ್ಯೋಗವನ್ನು ಒದಗಿಸಲಾಗಿದೆ. ಇದರಿಂದ ಜನರಿಗೆ ಆರ್ಥಿಕವಾಗಿ ಕೊಂಚ ಸಮಾಧಾನಗೊಂಡಿದ್ದಾರೆ. ನರೇಗಾ ಯೋಜನೆಯಡಿ ಒಂದು ದಿನಕ್ಕೆ 275 ರೂ. ಗಳ ಹಣವನ್ನು ನೀಡಲಾಗುತ್ತಿದೆ. ಕೆಲಸಕ್ಕೆ ಬರುವರರು ತಮ್ಮದೇ ಗುದ್ದಲಿ, ಸಲಕೆ ತಂದರೆ ಹೆಚ್ಚುವರಿಯಾಗಿ ರೂ.10/- ಸೇರಿ ಒಟ್ಟು ರೂ.285 ನೀಡಲಾಗುತ್ತದೆ.
ತುರ್ತಾಗಿ ಜಾಬ್ ಕಾರ್ಡ್ ವಿತರಣೆ
ಲಾಕ್ ಡೌನ್ ಹಿನ್ನಲೆಯಲ್ಲಿ ನಗರ ಪ್ರದೇಶಗಳಲ್ಲಿನ ಗ್ರಾಮೀಣ ಕೂಲಿಕಾರರು ತಮ್ಮ ಗ್ರಾಮಗಳಿಗೆ ವಾಪಸ್ ಆಗಿದ್ದಾರೆ. ಅಂತಹವರು ಜಾಬ್ಕಾರ್ಡ್ ಕೇಳಿದರೆ ತುರ್ತಾಗಿ ಒದಗಿಸಬೇಕು ಎಂದು ಸೂಚನೆ ನೀಡಲಾಗಿದೆ. ಪ್ರತಿ ದಿನ ಕೂಲಿಕಾರರು ಸ್ಥಳದಲ್ಲಿ ಕೆಲಸ ಪ್ರಾರಂಭಿಸುವ ಮುನ್ನ ಕೋವಿಡ್-19ರ ಕುರಿತು ಅರಿವು ಮೂಡಿಸುವ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಗುತ್ತಿದೆ. ಕೆಲಸದ ಸ್ಥಳದಲ್ಲಿ ಕುಡಿಯುವ ನೀರು, ಕೈತೊಳೆಯಲು ನೀರು ಹಾಗೂ ಸಾಬೂನು, ನೆರಳಿನ ವ್ಯವಸ್ಥೆ, ಮಕ್ಕಳ ಪಾಲನೆಗೆ ವ್ಯವಸ್ಥೆ, ಪ್ರಥಮ ಚಿಕಿತ್ಸಾ ಸೌಲಭ್ಯ ಒದಗಿಸಲಾಗಿದೆ.
ವೈದ್ಯಕೀಯ ಪರೀಕ್ಷೆಗೆ ವ್ಯವಸ್ಥೆ
ತಾಂತ್ರಿಕ ಸಹಾಯಕರು, ಬೇರ್ ಫುಟ್ ಟೆಕ್ನಿಷಿಯನ್, ಕಾಯಕ ಬಂಧುಗಳನ್ನು ನೇಮಿಸಿ ಕೂಲಿಕಾರರಲ್ಲಿ ನೆಗಡಿ, ಕೆಮ್ಮು, ಜ್ವರ ಇತ್ಯಾದಿ ಅನಾರೋಗ್ಯ ಕಂಡುಬಂದಲ್ಲಿ ಸಮೀಪದ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಪರೀಕ್ಷೆಗೆ ಹಾಗೂ ವೈದ್ಯಕೀಯ ಚಿಕಿತ್ಸೆಗೆ ನಿಗಾವಹಿಸಲಾಗಿದೆ. ನರೇಗಾ ಯೋಜನೆಯಲ್ಲಿ ಕೆಲಸ ಮಾಡುವವರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸಲಹೆ ನೀಡಲಾಗಿದೆ.