ಲಾಕ್ ಡೌನ್; ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ನೆರವಾದ ನರೇಗಾ
ಕೊಪ್ಪಳ, ಏಪ್ರಿಲ್ 20 : ಲಾಕ್ ಡೌನ್ ಸಮಯದಲ್ಲಿ ಸಂಕಷ್ಟದ ಸ್ಥಿತಿಯಲ್ಲಿರುವ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆಯಡಿ ಕೆಲಸ ನೀಡಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೂಲಿ ಆಧಾರಿತ ಕಾಮಗಾರಿಗಳನ್ನು ಗುರುತಿಸಲಾಗಿದೆ.
"ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೂಲಿ ಆಧಾರಿತ ಕಾಮಗಾರಿಗಳನ್ನು ಗುರುತಿಸಲಾಗಿದೆ" ಎಂದು ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಹೇಳಿದ್ದಾರೆ.
ಕೊರೊನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೆಲಸ ಮಾಡಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕೆರೆ ಅಭಿವೃದ್ಧಿ, ಕೃಷಿ ಹೊಂಡ, ಬದು ನಿರ್ಮಾಣ, ನಾಲಾ ಅಭಿವೃದ್ಧಿ, ಅರಣ್ಯೀಕರಣ ಇನ್ನೂ ಮುಂತಾದ ಕಾಮಗಾರಿ ಆರಂಭವಾಗಿದೆ.

ಸರ್ಕಾರದ ಆದೇಶದಂತೆ 5 ಜನರಿಗಿಂತ ಹೆಚ್ಚು ಕೂಲಿಕಾರರು ಕೆಲಸ ನಿರ್ವಹಿಸದಂತೆ ನಿಗಾವಹಿಸಿ ಮತ್ತು ಪರಸ್ಪರ ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವಂತೆ ನೋಡಿಕೊಳ್ಳಲಾಗುತ್ತಿದೆ. ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯವಾಗಿ ಲಭ್ಯವಿರುವ ಈ ಕಾಮಗಾರಿಗಳಲ್ಲಿ ಕೆಲಸ ಒದಗಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಅನುಷ್ಠಾನ ಇಲಾಖೆಗಳಿಗೆ ಸೂಚಿಸಲಾಗಿದೆ.
ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರತಿ ಗ್ರಾಮದಲ್ಲಿ ಕನಿಷ್ಟ 20 ಎಕರೆ ಜಮೀನಿನಲ್ಲಿ ಕ್ಷೇತ್ರ ಬದು ನಿರ್ಮಾಣಕ್ಕೆ ಕಾರ್ಯಾದೇಶವನ್ನು ನೀಡಲಾಗುತ್ತಿದೆ. ಕ್ಷೇತ್ರ ಬದು ನಿರ್ಮಿಸಲಾದ ಜಮೀನುಗಳಲ್ಲಿ ಮುಂಗಾರು ಅವಧಿಯಲ್ಲಿ ಕೃಷಿ ಅರಣ್ಯೀಕರಣದ ಮೂಲಕ ಗಿಡಗಳನ್ನು ನೆಡಲು ಗುಂಡಿಗಳನ್ನು ತೆಗೆಯಲಾಗುತ್ತದೆ.

ಪ್ರತಿ ಗ್ರಾಮ ಪಂಚಾಯತಿಯಲ್ಲಿ ಕನಿಷ್ಟ 10 ಕೃಷಿ ಹೊಂಡ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗುತ್ತದೆ. ಈ ಕಾಮಗಾರಿಗಳನ್ನು ನಿರ್ವಹಿಸಬೇಕಾದ ಇಲಾಖೆಗಳು ಕೃಷಿ ಮತ್ತು ಅರಣ್ಯ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ರಸ್ತೆ ಬದಿಯಲ್ಲಿ ಗಿಡಗಳನ್ನು ನೆಡಲು ಮುಂಗಡವಾಗಿ ಗುಂಡಿಗಳನ್ನು ತೆಗೆಯಲಾಗುತ್ತದೆ.
ಯೋಜನೆಯ ಮಾರ್ಗ ಸೂಚಿಯನ್ವಯ ಮಹಿಳೆ ಮತ್ತು ಪುರುಷರಿಗೆ ಸಮಾನಕೂಲಿ ಇದ್ದು, ಉದ್ಯೋಗ ಚೀಟಿಗಳನ್ನು ಗ್ರಾಮ ಪಂಚಾಯತಿಗಳಲ್ಲಿ ಪಡೆಯಬೇಕು. ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ 15 ದಿನಗಳೊಳಗಾಗಿ ಕೆಲಸ ಖಾತರಿ, ಕೂಲಿ ಹಣವನ್ನು ಸಕಾಲದಲ್ಲಿ ಪಾವತಿಸಲಾಗುವುದು. ವೃದ್ಧರು ಮತ್ತು ವಿಕಲಚೇತನರಿಗೆ ಕೆಲಸದ ಪರಿಮಾಣದಲ್ಲಿ ಶೇ.50 ರಿಯಾಯಿತಿ ಹಾಗೂ ಅಂಗವಿಕಲರಿಗೆ ಪ್ರತ್ಯೇಕ ಉದ್ಯೋಗ ಚೀಟಿ ನೀಡಲಾಗುವುದು.












Click it and Unblock the Notifications