Breaking; ಕೊಪ್ಪಳದ ಕನಕಗಿರಿಯ ಆಸ್ಪತ್ರೆ ಸ್ಥಳಾಂತರ, ಸ್ಪಷ್ಟನೆ
ಕೊಪ್ಪಳ, ಸೆಪ್ಟೆಂಬರ್ 14: ಕೊಪ್ಪಳ ಜಿಲ್ಲೆಯ ಕನಕಗಿರಿಯ 100 ಹಾಸಿಗೆಗಳ ತಾಲೂಕು ಆಸ್ಪತ್ರೆ ಸ್ಥಳಾಂತರ ಮಾಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿವೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಲಕನಂದಾ ಮಳಗಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಕನಕಗಿರಿ ತಾಲೂಕು ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುವುದು ಮತ್ತು ಕನಕಗಿರಿಯಿಂದ ಕಾರಟಗಿ ತಾಲ್ಲೂಕಿಗೆ ಸ್ಥಳಾಂತರಿಸುವುದಿಲ್ಲ ಎಂದು ಡಿಹೆಚ್ಓ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಹರಿದಾಡುತ್ತಿರುವ ಸುದ್ದಿಗಳಿಂದ ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದು ಎಂದು ಹೇಳಿದ್ದಾರೆ. 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಲು ನಿವೇಶನಕ್ಕಾಗಿ ಕನಕಗಿರಿ ತಹಶೀಲ್ದಾರ್ಗೆ ಮನವಿ ಮಾಡಲಾಗಿದೆ. ನಿವೇಶನ ಹಸ್ತಾಂತರವಾದ ತಕ್ಷಣ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

2022-23ನೇ ಸಾಲಿನ ಬಜೆಟ್ ಭಾಷಣದಲ್ಲಿ ತಾಲೂಕು ಮಟ್ಟದಲ್ಲಿ ಸುಸಜ್ಜಿತ ವೈದ್ಯಕೀಯ ಸೇವೆ ಒದಗಿಸಲು ರಾಜ್ಯದ 7 ತಾಲೂಕು ಆಸ್ಪತ್ರೆಗಳನ್ನು 100 ಹಾಸಿಗೆಗಳ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೆರಿಸುವ ಘೋಷಣೆಯನ್ನು ಮುಖ್ಯಮಂತ್ರಿಗಳು ಮಾಡಿದ್ದರು.
ಈ ಘೋಷಣೆಯಲ್ಲಿ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿಗೆ ಸಹ ಒಂದು ಆಸ್ಪತ್ರೆ ಮಂಜೂರು ಮಾಡಿ ಮುಖ್ಯಮಂತ್ರಿಗಳು ಆದೇಶಿಸಿದ್ದರು. ಆದರೆ ಈಗ ಆಸ್ಪತ್ರೆಯನ್ನು ಕಾರಟಗಿಗೆ ಸ್ಥಳಾಂತರ ಮಾಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿವೆ.
ಕಾರಟಗಿಯೂ ಸಹ ತಾಲೂಕ ಕೇಂದ್ರವಾಗಿದೆ. ಅಲ್ಲಿಯೂ ಸಹ 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಕನಕಗಿರಿ ತಾಲೂಕು ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆರಿಸುವ ಕಾಮಗಾರಿಯನ್ನು ಕನಕಗಿರಿಯಿಂದ ಕಾರಟಗಿ ತಾಲೂಕಿಗೆ ಸ್ಥಳಾಂತರಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
2022-23ನೇ ಸಾಲಿನ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವರು ಆಗಿರುವ ಬಸವರಾಜ ಬೊಮ್ಮಾಯಿ ಹಲವು ಘೋಷಣೆಗಳನ್ನು ಮಾಡಿದ್ದರು.
* ಬೆಳಗಾವಿಯಲ್ಲಿ 50 ಕೋಟಿ ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪನೆ
* 7 ತಾಲೂಕು ಆಸ್ಪತ್ರೆಗಳು 100 ಹಾಸಿಗೆಗಳ ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ
* ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ
* ಬೆಂಗಳೂರು ನಗರದ ಪ್ರತಿ ವಾರ್ಡ್ನಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ ಮುಂತಾದ ಘೋಷಣೆಗಳನ್ನು ಮಾಡಿದ್ದರು.












Click it and Unblock the Notifications