ಕೊಪ್ಪಳ : ವಿದ್ಯಾರ್ಥಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ
ಬೆಂಗಳೂರು, ಆಗಸ್ಟ್ 18 : ಕೊಪ್ಫಳದಲ್ಲಿ ವಿದ್ಯುತ್ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣದ ಕುರಿತು ತನಿಖೆಗೆ ಆದೇಶಿಸಲಾಗಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ.
ಭಾನುವಾರ ಬೆಳಗ್ಗೆ ಕೊಪ್ಪಳ ನಗರದ ದೇವರಾಜ ಅರಸು ಬಿಸಿಎಂ ಹಾಸ್ಟೆಲ್ನಲ್ಲಿ ಧ್ವಜದ ಕಂಬ ತೆರವುಗೊಳಿಸುವಾಗ ವಿದ್ಯುತ್ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್ ವಶಕ್ಕೆ ಪಡೆಯಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಕೊಪ್ಪಳ ಜಿಲ್ಲೆಯ ವಸತಿ ನಿಲಯದಲ್ಲಿ ವಿದ್ಯುತ್ ಶಾಕ್ನಿಂದ ಮೃತಪಟ್ಟ ಐವರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ. ರೂ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಯಡಿಯೂರಪ್ಪ ಈ ಕುರಿತು ಟ್ವೀಟ್ ಮಾಡಿದ್ದು, "ಕೊಪ್ಪಳದ ಬಿಸಿಎಂ ದೇವರಾಜ ಅರಸು ವಿದ್ಯಾರ್ಥಿನಿಲಯದಲ್ಲಿ ವಿದ್ಯುತ್ ಅವಘಡದಲ್ಲಿ ಐವರು ವಿದ್ಯಾರ್ಥಿಗಳು ಮೃತಪಟ್ಟಿರುವುದು ನನಗೆ ತೀವ್ರ ಆಘಾತವನ್ನುಂಟು ಮಾಡಿದೆ. ಈ ದುರ್ಘಟನೆ ಕುರಿತು ಸಮಗ್ರ ತನಿಖೆಗೆ ಅಲ್ಲಿನ ಅಧಿಕಾರಿಗಳಿಗೆ ಆದೇಶಿಸಿರುವೆ. ಮೃತರ ಕುಟುಂಬಕ್ಕೆ ಸೋಮವಾರವೇ ಸೂಕ್ತ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚಿಸಿರುವೆ" ಎಂದು ಹೇಳಿದ್ದಾರೆ.
ಧ್ವಜಾರೋಹಣ ಮಾಡಲು ಹಾಕಿದ್ದ ಕಬ್ಬಿಣದ ಕಂಬವನ್ನು ಇಂದು ಮುಂಜಾನೆ ತೆರವುಗೊಳಿಸುವಾಗ ಅದು ವಿದ್ಯುತ್ ತಂತಿಗೆ ತಗುಲಿತ್ತು. ಇದರಿಂದಾಗಿ ಒಬ್ಬ ವಿದ್ಯಾರ್ಥಿಗೆ ಶಾಕ್ ಹೊಡೆದಿತ್ತು. ಆತನನ್ನು ರಕ್ಷಣೆ ಮಾಡಲು ಹೋದ ಇತರ ನಾಲ್ವರಿಗೂ ಸಹ ಶಾಕ್ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹಾಸ್ಟೆಲ್ ವಾರ್ಡನ್ ನಿರ್ಲಕ್ಯವೇ ಇದಕ್ಕೆ ಕಾರಣ ಎಂದು ಪೋಷಕರು ಹಾಸ್ಟೆಲ್ ಮುಂದೆ ಪ್ರತಿಭಟನೆ ನಡೆಸಿದರು. ಕೊಪ್ಪಳ ನಗರ ಠಾಣೆ ಪೊಲೀಸರು ವಾರ್ಡನ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.












Click it and Unblock the Notifications