ಕೊಪ್ಪಳದಲ್ಲಿ ವಿನೂತನವಾಗಿ ನಡೆದ ಮತದಾನ ಜಾಗೃತಿ
ಕೊಪ್ಪಳ, ಏಪ್ರಿಲ್ 29; ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಮೇ 10ರಂದು ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಬೇಕು ಎಂದು ಜನರಿಗೆ ಚುನಾವಣಾ ಆಯೋಗ ಕರೆ ನೀಡಿದೆ. ಮತದಾನದ ಕುರಿತು ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಮೂಡಿಸಲು ಕೊಪ್ಪಳ ತಾಲೂಕು ಸ್ವೀಪ್ ಸಮಿತಿಯಿಂದ ಇಂದರಗಿ ಗ್ರಾಮದಲ್ಲಿ ವಿನೂತನ ಸ್ವೀಪ್ ಕಾರ್ಯಕ್ರಮ ನಡೆಯಿತು. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಿಂದ ಮಹಿಳೆಯರು ಪೂರ್ಣ ಕುಂಬ ಮೆರವಣಿಗೆಯೊಂದಿಗೆ ಮತದಾನ ಜಾಗೃತಿ ಮೂಡಿಸಿದ್ದು ವಿಶೇಷವಾಗಿತ್ತು.

ತಾಲೂಕು ಸ್ವೀಪ್ ನೋಡಲ್ ಅಧಿಕಾರಿ ಹನಮಂತಪ್ಪ ಎಚ್. ಮಾತನಾಡಿ, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಸಲಹೆ ನೀಡಿದರು. ಬಳಿಕ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ ಇವಿಎಂ, ವಿವಿ ಪ್ಯಾಟ್ ಮೂಲಕ ಮತದಾನ ಮಾಡುವ ಕುರಿತು ಸವಿಸ್ತಾರವಾದ ಮಾಹಿತಿಯನ್ನು ಜನರಿಗೆ ನೀಡಲಾಯಿತು.
ಅಣಕು ಮತದಾನ; ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಮಹೇಶ್ ಎಚ್. ಮಾತನಾಡಿ, "18 ವರ್ಷ ತುಂಬಿದ ಪ್ರತಿಯೊಬ್ಬರು ಕಡ್ಡಾಯ ಮತ್ತು ನೈತಿಕ ಹಾಗೂ ವಿವೇಚನಾಯುಕ್ತವಾಗಿ ಮತ ಚಲಾಯಿಸಬೇಕು" ಎಂದು ಕರೆ ನೀಡಿದರು.

ಗ್ರಾಮದ ಜನರು ಅಣುಕು ಮತದಾನ ಮಾಡುವ ಮೂಲಕ ಸಂತಸಪಟ್ಟರು. ಮೇ 10ರಂದು ತಪ್ಪದೇ ಮತದಾನ ಮಾಡುತ್ತೇವೆ ಎಂದು ಹೇಳಿದರು. ಬಳಿಕ ಮಹಿಳೆಯರು ಪೂರ್ಣ ಕುಂಬವನ್ನು ಹೊತ್ತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯನ್ನು ನಡೆಸಿದರು. ಅರ್ಹರು ತಪ್ಪದೇ ಮತದಾನ ಮಾಡಬೇಕು ಎಂದು ಕರೆ ನೀಡಿದರು.
ಈ ವಿನೂತನ ಕಾರ್ಯಕ್ರಮದಲ್ಲಿ ತಾಲೂಕ ಯೋಜನಾಧಿಕಾರಿ, ಗ್ರಾಮ ಪಂಚಾಯತಿ ಪಿಡಿಒ, ತಾಲೂಕ ಐಇಸಿ ಸಂಯೋಜಕರು, ತಾಲೂಕ ಸ್ವೀಪ್ ತಂಡದ ಸದಸ್ಯರು, ಆಶಾ & ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಕಾಯಕ ಮಿತ್ರ, ಗ್ರಾಮದ ಮತದಾರರು ಉಪಸ್ಥಿತರಿದ್ದರು.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ಹಾಗೂ ಶ್ರೀರಾಮನಗರ ಗ್ರಾಮ ಪಂಚಾಯತಿ ಸ್ವೀಪ್ ಸಮಿತಿಯಿಂದ ಗುಂತಗಲ್ ಕ್ಯಾಂಪಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆದಿತ್ತು. ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟು ಎಲ್ಲರ ಗಮನ ಸೆಳೆದರು. ಮತದಾನ ಜಾಗೃತಿ ಗೀತೆಗಳಿಗೆ ಲಂಬಾಣಿ ಸಮುದಾಯದ ಮಹಿಳೆಯರು ನೃತ್ಯ ಮಾಡುವ ಮೂಲಕ ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಜಾಗೃತಿ ಮೂಡಿಸಲಾಗಿತ್ತು.
ವೇತನ ಸಹಿತ ರಜೆ; ಮೇ 10ರ ಬುಧವಾರ ಮತದಾನ ಮಾಡಲು ಅನುಕೂಲವಾಗಿವಂತೆ ವೇತನ ಸಹಿತ ರಜೆ ನೀಡಲು ಈಗಾಗಲೇ ಆದೇಶಿಸಲಾಗಿದೆ. ಚುನಾವಣಾ ಆಯೋಗದ ಸೂಚನೆಯಂತೆ ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-1963 ಕಲಂ 3(ಎ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಲು ಸೂಚನೆ ನೀಡಲಾಗಿದೆ.
ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ ನಿಯೋಜಕರು ಅನುವು ಮಾಡಿ ಕೊಡಬೇಕಾಗಿರುತ್ತದೆ. ಆದ್ದರಿಂದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಮತದಾನದ ದಿನದಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ, ತಪ್ಪಿದ್ದಲ್ಲಿ ಸಂಬಂಧಪಟ್ಟ ಸಂಸ್ಥೆ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.












Click it and Unblock the Notifications