ಕೊಪ್ಪಳ; ಗಮನ ಸೆಳದ ಬೃಹತ್ ಮತದಾನ ಜಾಗೃತಿ ಕಾರ್ಯಕ್ರಮ
ಕೊಪ್ಪಳ, ಮೇ 8; ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನಕ್ಕೆ ಎರಡು ದಿನ ಬಾಕಿ ಇದೆ. ಮೇ 10ರ ಬುಧವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಮತದಾನದ ಕುರಿತು ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮ ನಡೆಸಲಾಗುತ್ತಿದೆ. ಕೊಪ್ಪಳ ಜಿಲ್ಲೆಯಲ್ಲಿ ಮತದಾನ ಜಾಗೃತಿ ಮೂಡಿಸಲು ವಿವಿಧ ಚಟುವಟಿಕೆ ಕೈಗೊಳ್ಳಲಾಗಿದೆ. ಕೊಪ್ಪಳದ ಸ್ವೀಪ್ ಸಮಿತಿ ನರೇಗಾ ಕೂಲಿ ಕಾರ್ಮಿಕರು ಇರುವ ಕಡೆಗೆ ಸಂಚರಿಸಿ ಅವರಿಗೆ ಮತದಾನ ಜಾಗೃತಿ ಪಾಠ ಹೇಳಿದೆ. ಜಿಲ್ಲೆಯಲ್ಲಿ ಏಕಕಾಲಕ್ಕೆ ನಡೆದ ಈ ಕಾರ್ಯಕ್ರಮ ರಾಜ್ಯದ ಗಮನ ಸೆಳೆದಿದೆ.
ಜಿಲ್ಲಾ ಚುನಾವಣಾಧಿಕಾರಿ, ಕೊಪ್ಪಳ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆ ಮಾರ್ಗದರ್ಶನದಲ್ಲಿ ಮತದಾನ ಜಾಗೃತಿಗಾಗಿ ವಾಕ್ಥಾನ್, ಬೈಕ್ ರ್ಯಾಲಿ, ಬೃಹತ್ ಮಾನವ ಸರಪಳಿ, ಮನೆ-ಮನೆ ಭೇಟಿ, ಬೀದಿನಾಟಕ, ಆಡಿಯೋ ಮೂಲಕ ಪ್ರಚಾರ, ಬಸ್ ನಿಲ್ದಾಣಗಳಲ್ಲಿ ಪ್ರಚಾರ, ಶಾಲಾ-ಕಾಲೇಜು ಹಂತದಲ್ಲಿ ಜಾಗೃತಿ ಸೇರಿದಂತೆ ಹಲವು ಬಗೆಯ ಚಟುವಟಿಕೆಗಳು ನಡೆದಿವೆ.

ಏಕಕಾಲಕ್ಕೆ ಮತದಾನ ಜಾಗೃತಿ; ಮೇ 7ರ ಭಾನುವಾರ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಂದ ಏಕಕಾಲದಲ್ಲಿ ಬೃಹತ್ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಹಿಂದಿನ ಚುನಾವಣೆಗಳಲ್ಲಿ ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿ ಸ್ಥಳದಲ್ಲಿ ನಡೆದ ಈ ಕಾರ್ಯಕ್ರಮ ಗಮನಸೆಳೆಯಿತು.
ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇಓ, ಪಿಡಿಓಗಳು ಸೇರಿದಂತೆ ತಾಲೂಕು ಹಾಗೂ ಗ್ರಾಮಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ, ತಾಲೂಕು ಪಂಚಾಯತಿ ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕರು, ಐಇಸಿ ಸಂಯೋಜಕರು, ಎಂಐಎಸ್ ಸಂಯೋಜಕರು, ತಾಂತ್ರಿಕ ಸಹಾಯಕರು, ಗ್ರಾಮ ಕಾಯಕ ಮಿತ್ರರು, ಗ್ರಾಮ ಪಂಚಾಯತಿ ಸಿಬ್ಬಂದಿ ಸಕ್ರಿಯವಾಗಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಕೊಪ್ಪಳ ತಾಲೂಕು ಗಿಣಿಗೇರಾ ಗ್ರಾಮ, ಕನಕಗಿರಿ ತಾಲೂಕಿನ 11 ಗ್ರಾಮ ಪಂಚಾಯಿತಿ ವ್ಯಾಪ್ತಿ, ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮ ಪಂಚಾಯಿತಿಯ ಬೆಳವಿನಾಳ ಗ್ರಾಮ, ಕಾರಟಗಿ ತಾಲೂಕಿನ ಗುಂಡೂರು, ಹುಳ್ಕಿಹಾಳ್ ಹಾಗೂ ಚಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿ ಮತ್ತು ಗಂಗಾವತಿ ತಾಲೂಕಿನ ವಿಠಲಾಪುರ ಕೆರೆಯ ಹೂಳೆತ್ತುವ ನರೇಗಾ ಕೆಲಸದ ಸ್ಥಳದಲ್ಲಿ ಈ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು, "ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳನ್ನು ಗುರುತಿಸಿ ಅಲ್ಲಿ ಸ್ವೀಪ್ ಚಟುವಟಿಕೆಗಳನ್ನು ವಿಸ್ತರಿಸಿ ಎಂದು ಭಾರತ ಚುನಾವಣಾ ಆಯೋಗ ಮತ್ತು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಸೂಚಿಸಿದಂತೆ ಕೊಪ್ಪಳ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಚುನಾವಣೆ ಪ್ರಕ್ರಿಯೆ ಆರಂಭದಿಂದ ಇಲ್ಲಿಯವರೆಗೂ ಯಶಸ್ವಿಯಾಗಿ ನಡೆಸಲಾಗಿದೆ" ಎಂದರು.
ಕೊಪ್ಪಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆ ಮಾತನಾಡಿ, "ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಇದುವರೆಗೂ ಮಾಡಿರುವ ಜಾಗೃತಿ ಕಾರ್ಯಕ್ರಮಗಳು ಫಲಪ್ರದವಾಗಬೇಕಿದೆ. ಮತದಾನ ಮಾಡಲು ಬರುವವರಿಗೆ ಅನುಕೂಲವಾಗುವಂತೆ ಮತಗಟ್ಟೆಗಳಲ್ಲಿ ಕುಡಿಯುವ ನೀರು, ವಿಶ್ರಾಂತಿ ಕೊಠಡಿ ಸೇರಿದಂತೆ ವಿಶೇಷ ಸೌಲಭ್ಯಗಳನ್ನು ಒದಗಿಸಲಾಗಿದೆ" ಎಂದು ಹೇಳಿದರು.
ಕೊಪ್ಪಳ ಜಿಲ್ಲೆಯಲ್ಲಿ 5 ವಿಧಾನಸಭಾ ಕ್ಷೇತ್ರಗಳಿವೆ. ಮೇ 10ರಂದು ಮತದಾನ ನಡೆಯುವ ಹಿನ್ನಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕೊಪ್ಪಳ ಜಿಲ್ಲೆಯಾದ್ಯಂತ ಮೇ 8ರ ಸಂಜೆ 6ರಿಂದ ಮೇ 10ರ ರಾತ್ರಿ 12 ಗಂಟೆಯವರೆಗೆ ವಿವಿಧ ಷರತ್ತುಗಳಿಗೊಳಪಟ್ಟು ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ 126ರನ್ವಯ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬುಧವಾರ ಮತದಾನ ನಡೆಯಲಿದ್ದು, ಮತದಾನಕ್ಕಿಂತ ಪೂರ್ವ 72 ಗಂಟೆಗಳು ಮತ್ತು 48 ಗಂಟೆಗಳ ಅವಧಿಯಲ್ಲಿ ಪಾಲಿಸಬೇಕಾದ ಕ್ರಮಗಳ ಕುರಿತು ರಾಜಕೀಯ ಪಕ್ಷಗಳ ಮುಖಂಡರು ಮತ್ತು ಅಭ್ಯರ್ಥಿಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಜಿಲ್ಲಾಡಳಿತ ಕರೆ ನೀಡಿದೆ.












Click it and Unblock the Notifications