50 ಸಾವು: "ಉತ್ತರ ಪ್ರದೇಶದಲ್ಲಿ ಇದೇನಾ ನಂ.1 ಆಸ್ಪತ್ರೆಗಳ ಹಣೆಬರಹ!?"
ಲಕ್ನೋ, ಸಪ್ಟೆಂಬರ್ 2: ಉತ್ತರ ಪ್ರದೇಶದಲ್ಲಿ ತೀವ್ರ ಜ್ವರದಿಂದ ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಮಕ್ಕಳ ಸಾವಿನ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಯಾವುದೇ ಶಿಸ್ತುಕ್ರಮಗಳನ್ನು ತೆಗೆದುಕೊಂಡಿಲ್ಲ. ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸದ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಉತ್ತರ ಪ್ರದೇಶದ ಆಗ್ರಾ, ಫಿರೋಜಾಬಾದ್, ಮಥುರಾ, ಮಣಿಪುರಿ ಮತ್ತು ಇಟಾ ಹಾಗೂ ಕಾಸಗಂಜ್ ಜಿಲ್ಲೆಗಳಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಹೆಚ್ಚು ಮಕ್ಕಳು ತೀವ್ರ ಜ್ವರ, ನಿರ್ಜಲೀಕರಣ ಮತ್ತು ಪ್ಲೆಟ್ಲೆಟ್ ಪ್ರಮಾಣದ ಹಠಾತ್ ಕುಸಿತದಿಂದ ಪ್ರಾಣ ಬಿಟ್ಟಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ನಿಟ್ಟಿನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ಯಾವುದೇ ರೀತಿಯ ನಿರ್ದಿಷ್ಟ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

"ಇದೇನಾ ನಂಬರ್ 1 ವೈದ್ಯಕೀಯ ವ್ಯವಸ್ಥೆ?"
"ಉತ್ತರ ಪ್ರದೇಶದಲ್ಲಿ ನಿಮ್ಮ ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿಯನ್ನೊಮ್ಮೆ ನೋಡಿ, ಇದೇನಾ ವೈದ್ಯಕೀಯ ಚಿಕಿತ್ಸೆಗೆ ನೀವು ಒದಗಿಸುವ ನಂಬರ್ 1 ಸೌಲಭ್ಯಗಳು," ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಶ್ನೆ ಮಾಡಿದ್ದಾರೆ. ಫಿರೋಜಾಬಾದ್ ಜಿಲ್ಲೆಯಲ್ಲಿ ತೀವ್ರ ಜ್ವರದಿಂದ 40ಕ್ಕೂ ಹೆಚ್ಚು ಮಂದಿ ಪ್ರಾಣ ಬಿಟ್ಟಿರುವ ಬಗ್ಗೆ ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ಅವರು ಟ್ವೀಟ್ ಮಾಡಿದ್ದಾರೆ. ಫಿರೋಜಾಬಾದ್ ಮತ್ತು ಮಥುರಾ ಜಿಲ್ಲೆಯಲ್ಲಿ ಸಾವಿನ ಪ್ರಕರಣಗಳಿಗೆ ಡೆಂಗ್ಯೂ ಜ್ವರ ಕಾರಣ ಎಂದು ಶಂಕಿಸಲಾಗಿದೆ.

ಒಂದೇ ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ಜನರ ದುರ್ಮರಣ
ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಕಳೆದ ಒಂದೇ ವಾರದಲ್ಲಿ 40 ಮಂದಿ ಪ್ರಾಣ ಬಿಟ್ಟಿದ್ದಾರೆ. ಪ್ರಾಥಮಿಕ ಕಾರಣ ಡೆಂಗ್ಯೂ ಎಂದು ತೋರುತ್ತದೆ, ಆದರೂ ಇತರ ಕಾರಣಗಳನ್ನು ಪತ್ತೆ ಮಾಡಲಾಗುತ್ತಿದೆ ಎಂದು ಆಗ್ರಾ ವಿಭಾಗೀಯ ಆಯುಕ್ತ ಅಮಿತ್ ಗುಪ್ತಾ ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದ್ದಾರೆ. "ನಾವು ಸಂಬಂಧಪಟ್ಟ ಆಸ್ಪತ್ರೆಗಳಿಗೆ ಪ್ಲೇಟ್ಲೆಟ್ಗಳನ್ನು ಒದಗಿಸಲು ಕ್ರಮಗಳನ್ನು ಹೆಚ್ಚಿಸಿದ್ದೇವೆ ಮತ್ತು ಅವುಗಳನ್ನು ಆಗ್ರಾದಿಂದಲೂ ತರಲಾಗುತ್ತಿದೆ. ಅಧಿಕೃತ ತಂಡಗಳಿಂದ ತಪಾಸಣೆ ನಡೆಸಲಾಗುತ್ತಿದೆ," ಎಂದು ಹೇಳಿದ್ದರು.

ಮಕ್ಕಳ ಸಾವಿನ ಹಿಂದಿನ ಅಸಲಿ ಕಾರಣವೇನು?
"ಫಿರೋಜಾಬಾದ್ ಜಿಲ್ಲೆಯಲ್ಲಿ ಈವರೆಗಿನ ಅಂಕಿ-ಅಂಶಗಳ ಪ್ರಕಾರ, 36 ಮಕ್ಕಳು ಸೇರಿದಂತೆ 41 ಮಂದಿ ಮೃತಪಟ್ಟಿದ್ದು, ಎಲ್ಲರ ಸಾವಿಗೆ ಡೆಂಗ್ಯೂ ಹಾಗೂ ತೀವ್ರ ಜ್ವರವೇ ಕಾರಣ ಎಂದು ಶಂಕಿಸಲಾಗಿದೆ. ಈ ಸಾವಿನ ಪ್ರಕರಣಗಳು ಕೊವಿಡ್-19 ಮೂರನೇ ಅಲೆಯ ಸೂಚಕವಲ್ಲ, ಏಕೆಂದರೆ ಆಸ್ಪತ್ರೆಗೆ ದಾಖಲಾದ ಯಾವುದೇ ರೋಗಿಗಳಲ್ಲಿ ಸೋಂಕಿನ ಲಕ್ಷಣ ಕಂಡು ಬಂದಿಲ್ಲ," ಎಂದು ಫಿರೋಜಾಬಾದ್ನ ಸರ್ಕಾರಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಂಗೀತಾ ಅನೀಜಾ ಹೇಳಿದ್ದಾರೆ. "ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ತಂಡ ಒಳಗೊಂಡಂತೆ ಅನೇಕ ತಂಡಗಳು ಈ ಸಾವಿವ ಪ್ರಕರಣ ಹಾಗೂ ರೋಗ ಹರಡುವಿಕೆಯ ನಿಖರವಾದ ಕಾರಣವನ್ನು ಕಂಡುಹಿಡಿಯುವ ನಿಟ್ಟಿನಲ್ಲಿ ತನಿಖೆ ನಡೆಸುತ್ತಿವೆ" ಎಂದು ಅನೇಜಾ ಹೇಳಿದ್ದಾರೆ.

ಮಥುರಾದಲ್ಲಿ 14 ಮಂದಿಯನ್ನು ಬಲಿ ತೆಗೆದುಕೊಂಡ ರೋಗ
ತೀವ್ರ ಜ್ವರದಿಂದಾಗಿ ಮಥುರಾ ಜಿಲ್ಲೆಯಲ್ಲಿ 12 ಮಕ್ಕಳು ಸೇರಿದಂತೆ 14 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಕೊವಿಡ್-19 ನಿಯಂತ್ರಣ ಕೇಂದ್ರದ ಜಿಲ್ಲಾ ಮೇಲುಸ್ತುವಾರಿ ಡಾ. ಭೂದೇವ್ ಹೇಳಿದ್ದಾರೆ. ಕಳೆದ ಗುರುವಾರ ಜಿಲ್ಲೆಯಲ್ಲಿ 7ರಷ್ಟಿದ್ದ ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿತ್ತು. ಗ್ರಾಮೀಣ ಪ್ರದೇಶದ ಜನರು ಇದರಿಂದ ಆತಂಕಗೊಂಡಿದ್ದು, ಹಳ್ಳಿಗಳಲ್ಲಿ ತಾತ್ಕಾಲಿಕ ವೈದ್ಯಕೀಯ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಕೊಹಾ ಗ್ರಾಮದಲ್ಲಿ ಇದೇ ರೋಗದ ಭಯದಿಂದ 50ಕ್ಕೂ ಹೆಚ್ಚು ಕುಟುಂಬಗಳು ವಲಸೆ ಹೋಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವೈದ್ಯಕೀಯ ಮುಖ್ಯಾಧಿಕಾರಿಗಳ ವರ್ಗಾವಣೆ ಮಾಡಿದ ಸಿಎಂ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾವಿನ ಪ್ರಮಾಣ ಹೆಚ್ಚಾದ ಹಿನ್ನೆಲೆ ನಿರ್ಲಕ್ಷ್ಯ ಧೋರಣೆ ಆರೋಪದಡಿ ಜಿಲ್ಲಾ ಆರೋಗ್ಯ ಅಧಿಕಾರಿಯನ್ನು ತೆಗೆದು ಹಾಕಲಾಗಿದ್ದು, ರೋಗ ನಿಯಂತ್ರಣಕ್ಕೆ ಶಿಸ್ತುಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಫಿರೋಜಬಾದ್ ಜಿಲ್ಲೆಯಲ್ಲಿನ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುವಂತೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ. ಅದರ ಜೊತೆ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಸೂಚಿಸಲಾಗಿದೆ. ಕಳೆದ ಸೋಮವಾರ ನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಿಗೆ ಭೇಟಿ ನೀಡಿದ ಯೋಗಿ ಆದಿತ್ಯನಾಥ್, ಡೆಂಗ್ಯೂ ರೋಗದ ನಿಯಂತ್ರಣ ಮತ್ತು ನಿರ್ವಹಣೆ ಬಗ್ಗೆ ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲನೆ ನಡೆಸಿದರು.

ಮನೆಮನೆಗೆ ತೆರಳಿ ಜ್ವರ ಮತ್ತು ಕೊವಿಡ್-19 ಪರೀಕ್ಷೆ
ರಾಜ್ಯದಲ್ಲಿ ಸಾವಿನ ಪ್ರಕರಣಗಳ ಸಂಖ್ಯೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 7 ರಿಂದ 16ರವರೆಗೆ ಜಾಗೃತಿ ಕಾರ್ಯಕ್ರಮವನ್ನು ನಡೆಸಲು ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಈ ವೇಳೆ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜ್ವರ ಹಾಗೂ ಕೊವಿಡ್-19 ಲಕ್ಷಣಗಳಿರುವ ಜನರ ಆರೋಗ್ಯ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಇದರ ಜೊತೆಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ.












Click it and Unblock the Notifications