Breaking: ಯುಪಿಯಲ್ಲಿ ಅಪಘಾತ; 8 ಸಾವು, 20ಕ್ಕೂ ಹೆಚ್ಚು ಗಾಯಾಳು
ಲಕ್ನೋ, ಜುಲೈ 25: ಉತ್ತರ ಪ್ರದೇಶದ ಬಾರಾಬಂಕಿಯ ಪೂರ್ವಾಂಚಲ ಎಕ್ಸ್ಪ್ರೆಸ್ವೇಯಲ್ಲಿ ವೇಗವಾಗಿ ಬಂದ ಡಬಲ್ ಡೆಕ್ಕರ್ ಬಸ್ ನಿಂತಿದ್ದ ಡಬಲ್ ಡೆಕ್ಕರ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಭೀಕರ ಅಪಘಾತದಲ್ಲಿ 18 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾರಾಬಂಕಿಯ ಲೋನಿಕ್ತ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಪೂರ್ವಾಂಚಲ್ ಎಕ್ಸ್ಪ್ರೆಸ್ವೇಯಲ್ಲಿ ಡಬಲ್ ಡೆಕ್ಕರ್ ಬಸ್ ರಸ್ತೆಯ ಬದಿಯಲ್ಲಿ ನಿಂತಿತ್ತು. ನಿಂತಿದ್ದ ಬಸ್ಗೆ ಬಿಹಾರ ಕಡೆಯಿಂದ ಬರುತ್ತಿದ್ದ ಮತ್ತೊಂದು ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಗಳು ನುಜ್ಜುಗುಜ್ಜಾಗಿವೆ.

ಅಪಘಾತದ ಬಗ್ಗೆ ಮಾಹಿತಿ ದೊರೆತ ತಕ್ಷಣ ಉನ್ನತ ಪೊಲೀಸ್ ಅಧಿಕಾರಿಗಳು ಸೇರಿದಂತೆ ರಕ್ಷಣಾ ಪಡೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ.
ಗಂಭೀರವಾಗಿ ಗಾಯಗೊಂಡವರನ್ನು ಲಕ್ನೋದಲ್ಲಿನ ಟ್ರಾಮಾ ಸೆಂಟರ್ಗೆ ಕಳುಹಿಸಲಾಗಿದೆ, ಸಣ್ಣಪುಟ್ಟ ಗಾಯಗಳಾದವರನ್ನು ಬಾರಾಬಂಕಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮೃತರ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಬಾರಾಬಂಕಿ ಎಸ್ಪಿ ಅನುರಾಗ್ ವತ್ಸ್ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದುರಂತದಲ್ಲಿ ಸಾವನ್ನಪ್ಪಿದ ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
Recommended Video
'ಪೂರ್ವಾಂಚಲ್ ಎಕ್ಸ್ ಪ್ರೆಸ್ ವೇಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣಹಾನಿಯಾಗಿರುವುದು ತುಂಬಾ ದುಃಖಕರ ಸಂಗತಿ. ಶೀಘ್ರ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಭಗವಾನ್ ಶ್ರೀರಾಮನು ಅಗಲಿದ ಆತ್ಮಗಳಿಗೆ ಶಾಂತಿ ನೀಡಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ' ಎಂದು ಟ್ವೀಟ್ ಮಾಡಿದ್ದಾರೆ.












Click it and Unblock the Notifications