ಯುಪಿ: 4 ಹಿಂದೂಗಳಿಗೆ ಟಿಕೆಟ್ ನೀಡಿದ ಎಐಎಂಐಎಂ
ಮುಜಾಫರ್ನಗರ ಜನವರಿ 25: ಈ ಬಾರಿ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ ಕುತೂಹಲ ಮೂಡಿಸಿದೆ. ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ನಾಲ್ಕು ಹಿಂದೂಗಳನ್ನು ಕಣಕ್ಕಿಳಿಸಿದೆ. ಇಲ್ಲಿಯವರೆಗೆ ಪಕ್ಷದಿಂದ ಒಟ್ಟು 27 ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಅದರಲ್ಲಿ 4 ಹಿಂದೂಗಳಿಗೆ ಟಿಕೆಟ್ ನೀಡಲಾಗಿದೆ. ಈ ಅಭ್ಯರ್ಥಿಗಳಲ್ಲಿ ಒಬ್ಬರು ಮುಜಾಫರ್ಗರ್ನ ಬುಧಾನಾ ವಿಧಾನಸಭಾ ಕ್ಷೇತ್ರದಿಂದ ಕೂಡ ಇದ್ದಾರೆ. ಇಲ್ಲಿಂದ ಎಐಎಂಐಎಂ ಹಿಂದೂ ಅಭ್ಯರ್ಥಿಗೆ ಟಿಕೆಟ್ ನೀಡಿದೆ.
ಈ ಬಗ್ಗೆ ರಾಜ್ಯಾಧ್ಯಕ್ಷ ಶೌಕತ್ ಅಲಿ ಮಾತನಾಡಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಹಿಂದೂ ಬಾಂಧವರಿಗೆ ಟಿಕೆಟ್ ನೀಡುತ್ತೇವೆ. ನಾವು ಧರ್ಮದ ಆಧಾರದಲ್ಲಿ ರಾಜಕೀಯ ಮಾಡುವುದಿಲ್ಲ. ನಮ್ಮನ್ನು ಕೋಮುವಾದಿ ಎನ್ನುತ್ತಾರೆ ಆದರೆ ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು ಮುಸ್ಲಿಮರಿಗೆ ಟಿಕೆಟ್ ನೀಡುವುದಿಲ್ಲ ಎಂದಿದ್ದಾರೆ.
ಪಂಡಿತ್ ಮನಮೋಹನ್ ಝಾ ಅವರನ್ನು ಸಾಹಿಬಾಬಾದ್ ವಿಧಾನಸಭಾ ಕ್ಷೇತ್ರದಿಂದ ಪಕ್ಷವು ನಾಮನಿರ್ದೇಶನ ಮಾಡಿದೆ ಎಂದು ಶೌಕತ್ ಅಲಿ ತಿಳಿಸಿದ್ದಾರೆ. ಬುಧಾನಾ ವಿಧಾನಸಭಾ ಕ್ಷೇತ್ರದಿಂದ ಭೀಮ್ ಸಿಂಗ್ ಬಲ್ಯಾನ್ ಅವರಿಗೆ ಟಿಕೆಟ್ ನೀಡಲಾಗಿದೆ. ವಿನೋದ್ ದಾವೋ ಅವರಿಗೆ ಹಸ್ತಿನಾಪುರ ವಿಧಾನಸಭಾ ಕ್ಷೇತ್ರದಿಂದ ಮತ್ತು ವಿಕಾಸ್ ಶ್ರೀವಾಸ್ತವ ಅವರಿಗೆ ಬಾರಾಬಂಗಿಯ ರಾಮನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಬಾಬು ಸಿಂಗ್ ಕುಶ್ವಾಹಾ ನೇತೃತ್ವದ ಜನ್ ಅಧಿಕ್ ಪಾರ್ಟಿ ಮತ್ತು ಭಾರತ್ ಮುಕ್ತಿ ಮೋರ್ಚಾ ಎರಡು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ತಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಇಬ್ಬರಿಗೆ ಮುಖ್ಯಮಂತ್ರಿ ಸ್ಥಾನಗಳನ್ನು ನೀಡಲಾಗುತ್ತದೆ. ಈ ಪೈಕಿ ಒಬ್ಬರು ಒಬಿಸಿ ಸಮುದಾಯದವರು ಆಗಿದ್ದರೆ ಇನ್ನೊಬ್ಬರು ದಲಿತ ಸಮುದಾಯದವರು ಆಗುತ್ತಾರೆ. ಮುಸ್ಲಿಂ ಸಮುದಾಯ ಸೇರಿದಂತೆ 3 ಉಪಮುಖ್ಯಮಂತ್ರಿಗಳಿಗೆ ಸ್ಥಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಸಂವಿಧಾನದ 153 ಮತ್ತು 164 ನೇ ವಿಧಿಗಳ ನಿಬಂಧನೆಗಳ ಅಡಿಯಲ್ಲಿ ರಾಜ್ಯದ ಮುಖ್ಯಮಂತ್ರಿಯನ್ನು ನೇಮಿಸಲಾಗುತ್ತದೆ, ಎರಡೂ ವಿಧಿಗಳು ಒಬ್ಬ ವ್ಯಕ್ತಿಯನ್ನು ರಾಜ್ಯದ ಸಿಎಂ ಎಂದು ಪರಿಗಣಿಸುತ್ತವೆ. ಸಂವಿಧಾನದ ಯಾವ ನಿಯಮದ ಅಡಿಯಲ್ಲಿ ರಾಜ್ಯಕ್ಕೆ ಇಬ್ಬರು ಸಿಎಂಗಳು ಇರುತ್ತಾರೆ ಎಂಬುದನ್ನು ಓವೈಸಿ ವಿವರಿಸಲಿಲ್ಲ.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.