ಉತ್ತರ ಪ್ರದೇಶದಲ್ಲಿ ಪರಸ್ಪರ ಭದ್ರಕೋಟೆಗಳ ಮೇಲೆ ಬಿಜೆಪಿ, ಸಮಾಜವಾದಿ ಕಣ್ಣು
ಲಕ್ನೋ, ನವೆಂಬರ್ 13: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಾಗಿ ತಮ್ಮ ಕಾರ್ಯಕರ್ತರನ್ನು ಹಾಗೂ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಸಮಾಜವಾದಿ ಪಕ್ಷಗಳು ಶನಿವಾರ ಮುಖಾಮುಖಿಯಾದವು. ಕಳೆದ ಚುನಾವಣೆಯಲ್ಲಿ ಮಾಡಿದ ತಪ್ಪುಗಳನ್ನು ತಿದ್ದಿಕೊಳ್ಳಲು ಸಮಾಜವಾದಿ ಭದ್ರಕೋಟೆಯಲ್ಲಿ ಬಿಜೆಪಿ ಹಾಗೂ ಬಿಜೆಪಿಯ ಭದ್ರಕೋಟೆಯಲ್ಲಿ ಸಮಾಜವಾದಿ ಪಕ್ಷದ ನಾಯಕರು ರಣತಂತ್ರ ಹೆಣೆಯುತ್ತಿದ್ದಾರೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಮ್ಮ 'ಸಮಾಜವಾದಿ ವಿಜಯ್ ಯಾತ್ರೆ'ಯ ಮೂರನೇ ಹಂತವನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತವರು ಕ್ಷೇತ್ರವಾಗಿರುವ ಗೋರಖ್ಪುರದಿಂದ ಶನಿವಾರ ಪ್ರಾರಂಭಿಸಿದರು. ಇದೇ ಸಮಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಿಎಂ ಯೋಗಿ ಆದಿತ್ಯನಾಥ್ ಜೊತೆ ಅಖಿಲೇಶ್ ಯಾದವ್ ಅವರ ಸಂಸದೀಯ ಕ್ಷೇತ್ರ ಅಜಂಗಢದಲ್ಲಿ ಭರ್ಜರಿ ಪ್ರಚಾರ ನಡೆಸಿದರು.
ಉ.ಪ್ರ ಚುನಾವಣೆ: ಯಾವ ಪಕ್ಷದೊಂದಿಗೂ ಮೈತ್ರಿ ಇಲ್ಲ ಎಂದ ಮಾಯಾವತಿ
ಕಳೆದ 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆಯ ಅಲೆಯಲ್ಲಿ ಭಾರಿ ಬಹುಮತದಿಂದ ಗೆಲುವು ಸಾಧಿಸಿತ್ತು. ಬಿಜೆಪಿಯ ಸಂಘಟನೆಗೆ ಅನುಗುಣವಾಗಿ ವಿಭಾಗಿಸಿದ ಎಲ್ಲ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಅನಿರೀಕ್ಷಿತ ಯಶಸ್ಸು ಸಿಕ್ಕಿದೆ. ಗೋರಖ್ಪುರ ಪ್ರದೇಶದಲ್ಲಿ (ಬಸ್ತಿ, ಗೋರಖ್ಪುರ ಮತ್ತು ಅಜಂಗಢ ವಿಭಾಗಗಳು) 62 ವಿಧಾನಸಭೆ ಸ್ಥಾನಗಳಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 46 ಸ್ಥಾನಗಳನ್ನು ಪಡೆದಿದ್ದವು.
ಅಜಂಗಢದಲ್ಲಿ ಮುಗ್ಗರಿಸಿದ್ದ ಬಿಜೆಪಿ:
ಗೋರಖ್ಪುರ ಪ್ರದೇಶದಲ್ಲಿ ಗೆಲುವಿನ ನಗೆ ಬೀರಿದ್ದ ಬಿಜೆಪಿ, ಅಜಂಗಢ ಜಿಲ್ಲೆಯಲ್ಲಿ ಮುಗ್ಗರಿಸಿತ್ತು. ಅಜಮ್ಗಢದ 10 ವಿಧಾನಸಭೆ ಕ್ಷೇತ್ರಗಳ ಪೈಕಿ ಸಮಾಜವಾದಿ ಪಕ್ಷವು ಐದು ಕಡೆಗಳಲ್ಲಿ ವಿಜಯ ಪತಾಕೆ ಹಾರಿಸಿತ್ತು. ನಾಲ್ಕು ಸ್ಥಾನದಲ್ಲಿ ಬಿಎಸ್ ಪಿ ಗೆಲುವು ಸಾಧಿಸಿದ್ದರೆ, ಬಿಜೆಪಿ ಕೇವಲ ಒಂದು ಕಡೆಯಲ್ಲಿ ಮಾತ್ರ ಗೆಲುವಿನ ನಗೆ ಬೀರಿತ್ತು. ಅಲ್ಲದೇ 2019ರಲ್ಲಿ ಅಜಂಗಢ ಜಿಲ್ಲೆಯ ಎರಡು ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಮುಗ್ಗರಿಸಿದ್ದು, ಅಜಂಗಢ ಜಿಲ್ಲೆಯು ಸಮಾಜವಾದಿ ಪಕ್ಷದ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿತ್ತು.
2014ರ ಲೋಕಸಭಾ ಚುನಾವಣೆಯಲ್ಲಿ ಅಜಂಗಢ ಜಿಲ್ಲೆಯ ಲಾಲ್ಗಂಜ್ ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡಿತು. ಅದೇ ರೀತಿ ಸಮಾಜವಾದಿ ಪಕ್ಷದ ಭದ್ರಕೋಟೆಯಲ್ಲಿ ಮತ್ತೊಮ್ಮೆ ಬಿಜೆಪಿ ಬಾವುಟ ಹಾರಿಸುವುದಕ್ಕೆ ಪಕ್ಷವು ಯೋಜನೆ ಹಾಕಿಕೊಂಡಿದೆ.
ಗೋರಖ್ಪುರದ ಮೇಲೆ ಸಮಾಜವಾದಿ ಕಣ್ಣು:
ಕಳೆದ 2017ರ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಗೋರಖ್ಪುರದಲ್ಲಿ ಖಾತೆ ತೆರೆಯುವುದಕ್ಕೆ ಸಾಧ್ಯವಾಗಿರಲಿಲ್ಲ. ಗೋರಖ್ಪುರದ ಒಂಬತ್ತು ವಿಧಾನಸಭಾ ಸ್ಥಾನಗಳ ಪೈಕಿ ಎಂಟನ್ನು ಬಿಜೆಪಿ ವಶಪಡಿಸಿಕೊಂಡಿದ್ದರೆ, ಒಂದು ಸ್ಥಾನ ಬಿಎಸ್ಪಿ ಪಾಲಾಗಿತ್ತು. ಕುಶಿನಗರದ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ 6ರಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಒಂದು ಕಾಂಗ್ರೆಸ್ ಪಾಲಾಗಿತ್ತು.
2012ರ ವಿಧಾನಸಭಾ ಚುನಾವಣೆಯಲ್ಲಿ ಎಸ್ಪಿ ಮೂರು ಸ್ಥಾನಗಳನ್ನು ಪಡೆದಿದ್ದರೆ, ಬಿಎಸ್ಪಿ ಒಂದು ಸ್ಥಾನವನ್ನು ಪಡೆದಿದ್ದು, ಕಾಂಗ್ರೆಸ್ಗೆ ಎರಡು ಸ್ಥಾನಗಳು ಮತ್ತು ಬಿಜೆಪಿ ಕೇವಲ ಒಂದು ಸ್ಥಾನವನ್ನು ಪಡೆದುಕೊಂಡಿತ್ತು.
2017ರಲ್ಲಿ ಯುಪಿ ಚುನಾವಣೆ ಫಲಿತಾಂಶ ಹೇಗಿತ್ತು?
ಕಳೆದ 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಮತ್ತು ಕಾಂಗ್ರೆಸ್ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಿದ್ದವು. ಕಾಂಗ್ರೆಸ್ 114 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಸಮಾಜವಾದಿ ಪಕ್ಷವು 311 ಕ್ಷೇತ್ರಗಳಲ್ಲಿ ಕಣಕ್ಕೆ ಇಳಿದಿತ್ತು. ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿತ್ತು. ಇನ್ನೊಂದು ಕಡೆ 277 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ ಆರ್ಎಲ್ಡಿ ಕೇವಲ 1 ಕ್ಷೇತ್ರದಲ್ಲಿ ಮಾತ್ರ ಗೆಲವು ಸಾಧಿಸಿತ್ತು.
ರಾಜ್ಯದ ಒಟ್ಟು 403 ಸ್ಥಾನಗಳ ಪೈಕಿ ಬಿಜೆಪಿ 312 ರಲ್ಲಿ ಗೆಲುವು ದಾಖಲಿಸಿತ್ತು. ಈ ಪಕ್ಷ ಶೇ. 39.67ರಷ್ಟು ಮತವನ್ನು ಪಡೆದುಕೊಂಡಿತ್ತು. ಅಂದು ಸಮಾಜವಾದಿ ಪಕ್ಷವು 47 ಸ್ಥಾನಗಳನ್ನು, ಬಹುಜನ ಸಮಾಜ ಪಕ್ಷ (BSP) 19 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.