ಯುಪಿ ಚುನಾವಣೆ: ಕಮಲದ ಕೈಬಿಟ್ಟ 3ನೇ ಸಚಿವ ಧರಂ ಸಿಂಗ್ ಸೈನಿ
ಲಕ್ನೋ ಜನವರಿ 13: ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಒಬ್ಬರಾದ ಮೇಲೆ ಒಬ್ಬರಂತೆ ಸಚಿವರು ಶಾಸಕರು ಬಿಜೆಪಿ ಪಕ್ಷ ತೊರೆಯುತ್ತಿದ್ದಾರೆ. ಇಂದು ಮತ್ತೋರ್ವ ಸಚಿವ ಕಮಲದ ಕೈ ಬಿಟ್ಟಿದ್ದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉತ್ತರ ಪ್ರದೇಶದ ಸಚಿವ ಧರಂ ಸಿಂಗ್ ಸೈನಿ ಗುರುವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು, ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಲ್ಲಿ ಕೇಸರಿ ಪಕ್ಷದೊಂದಿಗಿನ ಸಂಬಂಧವನ್ನು ಮುರಿದುಕೊಂಡ ಒಂಬತ್ತನೇ ಶಾಸಕರಾಗಿದ್ದಾರೆ.
ನಿನ್ನೆಯಷ್ಟೆ ಧರಂ ಸಿಂಗ್ ಸೈನಿ ಅವರಿಗೆ ರಾಜ್ಯ ಸರ್ಕಾರ ಮಂಜೂರು ಮಾಡಿದ ಭದ್ರತೆ ಮತ್ತು ನಿವಾಸವನ್ನು ಹಿಂಪಡೆಯಲಾಗಿತ್ತು. ಇದು ಅವರು ಬಿಜೆಪಿಯನ್ನು ತೊರೆಯಲಿದ್ದಾರೆ ಎಂಬ ಊಹಾಪೋಹಕ್ಕೆ ಸಾಕ್ಷಿಯಾಗಿತ್ತು. ಇದಕ್ಕೆ ಇಂದು ತೆರೆ ಎಳೆಯಲಾಗಿದೆ. ಧರಂ ಸಿಂಗ್ ಸೈನಿ ಅವರು ರಾಜ್ಯ (ಸ್ವತಂತ್ರ ಉಸ್ತುವಾರಿ), ಆಯುಷ್, ಆಹಾರ ಭದ್ರತೆ ಮತ್ತು ಔಷಧ ಆಡಳಿತ ಸಚಿವರಾಗಿದ್ದರು.
ಚುನಾವಣೆಗೂ ಮುನ್ನ ಮಂಗಳವಾರ (ಜನವರಿ 11) ಸಂಪುಟ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ನೀಡಿದ ರಾಜೀನಾಮೆಯಿಂದ ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗವಾಗಿತ್ತು. ಕೆಲ ಗಂಟೆಗಳಲ್ಲಿ ಅವರ ನಿಕಟವರ್ತಿಗಳಾದ ರೋಷನ್ ಲಾಲ್ ವರ್ಮಾ, ಬ್ರಿಜೇಶ್ ಪ್ರಜಾಪತಿ, ಭಗವತಿ ಸಾಗರ್ ಮತ್ತು ವಿನಯ್ ಶಾಕ್ಯ ಅವರು ತಮ್ಮ ರಾಜೀನಾಮೆಯನ್ನು ಘೋಷಿಸಿದರು. ಇದಾದ ಬಳಿಕ ಸಚಿವರಾಗಿದ್ದ ದಾರಾ ಸಿಂಗ್ ಚೌಹಾಣ್ ಬುಧವಾರ ಸಂಪುಟಕ್ಕೆ ರಾಜೀನಾಮೆ ನೀಡಿದರು.

ಕ್ಯಾಬಿನೆಟ್ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ನೀಡಿದ ಬಳಿಕ ಮಾತನಾಡಿ, ಇನ್ನೂ ಹಲವು ಶಾಸಕರು ಇದನ್ನು ಅನುಸರಿಸಲಿದ್ದಾರೆ ಎಂದು ಹೇಳುವ ಮೂಲಕ ಶಾಸಕರ ರಾಜೀನಾಮೆ ಬಗ್ಗೆ ಸುಳಿವು ನೀಡಿದ್ದರು. ಇದಕ್ಕೆ ಪುಷ್ಠಿ ನೀಡುವಂತೆ 'ಬಿಜೆಪಿಯನ್ನು ಸಚಿವರು ತೊರೆದಿದ್ದು ಕೇವಲ ಟೀಸರ್ ಮಾತ್ರ' ಎಂದು ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಓಂ ಪ್ರಕಾಶ್ ರಾಜ್ಭರ್ ಹೇಳಿದ್ದಾರೆ. ಈ ಹೇಳಿಕೆ ಉತ್ತರಪ್ರದೇಶದಲ್ಲಿ ಮತ್ತಷ್ಟು ಜನನಾಯಕರು ಬಿಜೆಪಿ ತೊರೆಯಲಿದ್ದಾರೆನ್ನುವುದನ್ನು ಸೂಚಿಸಿದ್ದು ಮುಂಬರುವ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. ಉತ್ತರಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಸಚಿವರು, ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದು ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಬಿಜೆಪಿಯ ಮಿತ್ರಪಕ್ಷವಾಗಿದ್ದ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಓಂ ಪ್ರಕಾಶ್ ರಾಜ್ಭರ್ ಈಗ ಸಮಾಜವಾದಿ ಪಕ್ಷದ ಜತೆಗೆ ಮೈತ್ರಿ ಮಾಡಿಕೊಂಡಿದ್ದಾರೆ.
ರಾಜೀನಾಮೆ ನೀಡಲು ಏನು ಕಾರಣ?
ರಾಜೀನಾಮೆ ನೀಡುತ್ತಿರುವ ಜನನಾಯಕರು ಬಿಜೆಪಿ ಆಡಳಿತದ ವಿರುದ್ಧ ಅಸಮಾಧಾನಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ. ಜೊತೆಗೆ ಬಿಜೆಪಿಗೆ ದಲಿತರು, ಹಿಂದುಳಿದವರು, ರೈತರು, ನಿರುದ್ಯೋಗಿ ಯುವಕರು ಮತ್ತು ಸಣ್ಣ ವ್ಯಾಪಾರಿಗಳ ಬಗ್ಗೆ ತೀವ್ರ ನಿರ್ಲಕ್ಷ್ಯವಿದೆ ಎಂದು ಆರೋಪಿಸಿ ರಾಜೀನಾಮೆ ನೀಡುತ್ತಿದ್ದಾರೆ.
ಒಬಿಸಿ ನಾಯಕ ದಾರಾ ಸಿಂಗ್ ಚೌಹಾಣ್ ಬುಧವಾರ ಯೋಗಿ ಆದಿತ್ಯನಾಥ್ ಸಂಪುಟಕ್ಕೆ ರಾಜೀನಾಮೆ ನೀಡಿ ಸಮಾಜವಾದಿ ಪಕ್ಷದತ್ತ ಮುಖ ಮಾಡಿರುವುದು ಕಂಡುಬಂದಿದೆ. ಕಳೆದ ಐದು ವರ್ಷಗಳಿಂದ ತಾನು ಸಮರ್ಪಣಾ ಭಾವದಿಂದ ದುಡಿದಿದ್ದೇನೆ ಆದರೆ ದಲಿತರು, ಒಬಿಸಿಗಳು ಮತ್ತು ನಿರುದ್ಯೋಗಿಗಳಿಗೆ ಬಿಜೆಪಿ ಸರ್ಕಾರದಿಂದ ನ್ಯಾಯ ಸಿಕ್ಕಿಲ್ಲ ಎಂದು ಚೌಹಾಣ್ ರಾಜೀನಾಮೆಗೆ ಕಾರಣ ಹೇಳಿಕೊಂಡಿದ್ದಾರೆ.
Recommended Video
ಇದಕ್ಕೂ ಮೊದಲು, ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್ಬಿಎಸ್ಪಿ) ಮುಖ್ಯಸ್ಥ ಓಂ ಪ್ರಕಾಶ್ ರಾಜ್ಭರ್ ಅವರು ಯೋಗಿ ಆದಿತ್ಯನಾಥ್ ಕ್ಯಾಬಿನೆಟ್ನಿಂದ ಪ್ರತಿದಿನ ಒಂದರಿಂದ ಇಬ್ಬರು ಸಚಿವರು ಹೊರಬರುತ್ತಾರೆ ಮತ್ತು ಜನವರಿ 20 ರ ವೇಳೆಗೆ ಈ ಸಂಖ್ಯೆ 18 ಕ್ಕೆ ಏರುತ್ತದೆ ಎಂದು ಹೇಳಿದ್ದಾರೆ. ಸದ್ಯ ವಿಧಾನಸಭೆಗೂ ಮುನ್ನ ಸಚಿವರು ಶಾಸಕರು ಪಕ್ಷ ತೊರೆಯುತ್ತಿದ್ದಾರೆ. ಇದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಏಳು ಹಂತಗಳಲ್ಲಿ ನಡೆಯಲಿದೆ. ಫೆಬ್ರವರಿ 10 ರಿಂದ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.












Click it and Unblock the Notifications