ಲಖೀಂಪುರ್ ಖೇರಿ ಘಟನೆಯ ತಪ್ಪಿತಸ್ಥರ ವಿರುದ್ಧ ಕ್ರಮಕ್ಕಾಗಿ ಪ್ರಧಾನಿಗೆ ವರುಣ್ ಗಾಂಧಿ ಪತ್ರ
ಲಕ್ನೋ, ನವೆಂಬರ್ 20: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಘಟನೆಯು "ನಮ್ಮ ಪ್ರಜಾಪ್ರಭುತ್ವಕ್ಕೆ ಕಳಂಕ" ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ವರುಣ್ ಗಾಂಧಿ ಶನಿವಾರ ಹೇಳಿದ್ದಾರೆ. ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅವರು ಪತ್ರ ಬರೆದಿದ್ದಾರೆ. ಈ ಪ್ರಕರಣದಲ್ಲಿ ಕೇಳಿಬಂದಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ದೇಶದ ರೈತರ ಸಮಸ್ಯೆ ಕುರಿತು ಪ್ರಧಾನಿ ಮೋದಿಗೆ ಬರೆದಿರುವ ಪತ್ರವನ್ನು ಸಂಸದ ವರುಣ್ ಗಾಂಧಿ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಅವರು, "ಪ್ರತಿಭಟಿಸುವ ರೈತರ ವಿರುದ್ಧ ಎಲ್ಲಾ ರಾಜಕೀಯ ಪ್ರೇರಿತ ಮತ್ತು ಸುಳ್ಳು ಎಫ್ಐಆರ್ಗಳನ್ನು" ರದ್ದುಗೊಳಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಲಖೀಂಪುರ್ ಹಿಂಸಾಚಾರ: ಸಾಕ್ಷಿದಾರರಿಗೆ ರಕ್ಷಣೆ ಕೊಡಲು ಸುಪ್ರೀಂಕೋರ್ಟ್ ನಿರ್ದೇಶನ
"ಹಿರಿಯ ಸ್ಥಾನಗಳಲ್ಲಿ ಕುಳಿತಿರುವ ಅನೇಕ ನಾಯಕರು ನಮ್ಮ ಪ್ರತಿಭಟನಾನಿರತ ರೈತರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಇಂತಹ ಹೇಳಿಕೆಗಳು ಮತ್ತು ಚಳವಳಿಯ ಸುತ್ತ ಸೃಷ್ಟಿಯಾದ ಪ್ರತಿಕೂಲ ವಾತಾವರಣದ ಪರಿಣಾಮವಾಗಿದೆ. ಅಕ್ಟೋಬರ್ 3 ರಂದು ಲಖೀಂಪುರ್ ಖೇರಿಯಲ್ಲಿ ಐವರು ರೈತ ಸಹೋದರರು ವಾಹನಗಳಿಗೆ ಸಿಲುಕಿ ಸಾವನ್ನಪ್ಪಿದರು. ಈ ಹೃದಯವಿದ್ರಾವಕ ಘಟನೆ ನಮ್ಮ "ಪ್ರಜಾಪ್ರಭುತ್ವಕ್ಕೆ ಕಳಂಕ"ವಾಗಿದೆ ಎಂದು ವರುಣ್ ಗಾಂಧಿ ಹೇಳಿದ್ದಾರೆ.
ನ್ಯಾಯಯುತ ತನಿಖೆಗೆ ವರುಣ್ ಗಾಂಧಿ ಒತ್ತಾಯ:
"ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿರುವ ಕೇಂದ್ರ ಸಚಿವರ ವಿರುದ್ಧ ಸೂಕ್ತವಾಗಿ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ಹಿನ್ನೆಲೆ ನ್ಯಾಯಯುತ ವಿಚಾರಣೆ ನಡೆಯಬೇಕು" ಎಂದು ವರುಣ್ ಗಾಂಧಿ ಅವರು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಕಳೆದ ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಭುಗಿಲೆದ್ದ ಹಿಂಸಾಚಾರವನ್ನು ವರುಣ್ ಗಾಂಧಿ ಉಲ್ಲೇಖಿಸಿದ್ದಾರೆ.
ಕಳೆದ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು, ಒಬ್ಬ ಪತ್ರಕರ್ತ ಸೇರಿದಂತೆ ಎಂಟು ಮಂದಿ ಪ್ರಾಣ ಬಿಟ್ಟಿದ್ದರು. ಈ ಸಂಬಂಧ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ವಿರುದ್ಧ ರೈತರ ಮೇಲೆ ಕಾರು ಹರಿಸಿದ ಆರೋಪ ಮಾಡಲಾಗಿದ್ದು, ಅಕ್ಟೋಬರ್ 9ರಂದು ಪೊಲೀಸರು ಆರೋಪಿಗಳನ್ನು ಬಂಧಿಸಲಾಗಿತ್ತು. ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಗುಂಪಿನ ಮೇಲೆ ಎಸ್ಯುವಿ ಹರಿದು ನಾಲ್ವರು ರೈತರು ಮೃತಪಟ್ಟಿದ್ದರು ಎಂದು ಆರೋಪಿಸಲಾಗಿದೆ.