ಮತ್ತೆ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ ಮಾಯಾವತಿ
ಲಕ್ನೋ, ಜನವರಿ 15: ಮುಂಬರುವ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಬಹುಜನ ಸಮಾಜವಾದಿ ಪಕ್ಷ ಕಣಕ್ಕೆ ಇಳಿಯಲಿದೆ ಎಂದು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಶುಕ್ರವಾರ ಘೋಷಣೆ ಮಾಡಿದ್ದಾರೆ.
ತಮ್ಮ ಹುಟ್ಟುಹಬ್ಬದ ದಿನ ಈ ಘೋಷಣೆ ಮಾಡಿದ್ದು, 2007ರಂತೆ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜವಾದಿ ಪಕ್ಷ ಸರ್ಕಾರ ರಚನೆ ಮಾಡಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಯಾವುದೇ ಚುನಾವಣೆಯಲ್ಲಿಯೂ ಬಿಜೆಪಿ ಜೊತೆ ಮೈತ್ರಿಯಿಲ್ಲ: ಮಾಯಾವತಿ
"ಅಧಿಕಾರ ಪಡೆಯಲು ನಾನು ನನ್ನ ಆದರ್ಶಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಂಡಿಲ್ಲ. ಈ ಚುನಾವಣೆಗೆ ಎಲ್ಲಾ ಬಿಎಸ್ ಪಿ ಕಾರ್ಯಕರ್ತರು ಒಟ್ಟಾಗಿ ಸಜ್ಜಾಗುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಅಧಿಕಾರಕ್ಕೆ ಬಂದರೆ, ಕೊರೊನಾ ಲಸಿಕೆಯನ್ನು ಎಲ್ಲರಿಗೂ ಉಚಿತವಾಗಿ ನೀಡುತ್ತೇನೆ" ಎಂದು ಭರವಸೆ ನೀಡಿದ್ದಾರೆ.
ದೆಹಲಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಅವರು, "ರೈತರ ಬೇಡಿಕೆಗಳನ್ನು ಒಪ್ಪಿಕೊಂಡು ಕೇಂದ್ರ ಸರ್ಕಾರ ಹೊಸ ಕಾಯ್ದೆಗಳನ್ನು ಹಿಂಪಡೆಯಬೇಕು" ಎಂದು ಆಗ್ರಹಿಸಿದರು.
ಈಚೆಗೆ, 'ಬಿಜೆಪಿ ಜೊತೆಗೆ ಬಿಎಸ್ಪಿ ಎಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಯಾವುದೇ ಚುನಾವಣೆಯಲ್ಲಿಯೂ ಬಿಜೆಪಿ ಜೊತೆ ಮೈತ್ರಿ ಸಾಧ್ಯವಿಲ್ಲ. ಬಿಜೆಪಿ ಮತ್ತು ಬಿಎಸ್ಪಿ ಸಿದ್ಧಾಂತ ಪರಸ್ಪರ ವಿರುದ್ಧವಾಗಿವೆ'' ಎಂದು ಹೇಳಿದ್ದರು.