ಪೊಲೀಸ್, ಎಸ್ಐಟಿಯಿಂದ ಹತ್ರಾಸ್ ದಾಖಲೆ ಸಂಗ್ರಹಿಸಲು ಸಿಬಿಐ ಮುಂದು
ಲಕ್ನೋ, ಅಕ್ಟೋಬರ್.13: ಉತ್ತರ ಪ್ರದೇಶ ಹತ್ರಾಸ್ ನಲ್ಲಿ 19 ವರ್ಷದ ಯುವತಿ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ಕೇಂದ್ರ ತನಿಖಾ ತಂಡವು ಉತ್ತರ ಪ್ರದೇಶ ಪೊಲೀಸರು ಮತ್ತು ಎಸ್ಐಟಿ ಅಧಿಕಾರಿಗಳನ್ನು ಭೇಟಿ ಮಾಡಿದೆ.
ಮಂಗಳವಾರ ಬೂಲಘರ್ಹಿ ಗ್ರಾಮಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು ಪೊಲೀಸರು ಮತ್ತು ಉತ್ತರ ಪ್ರದೇಶ ಸರ್ಕಾರವು ರಚಿಸಿದ್ದ ವಿಶೇಷ ತನಿಖಾ ತಂಡದ ಅಧಿಕಾರಿಗಳಿಂದ ಹತ್ರಾಸ್ ಪ್ರಕರಣದ ತನಿಖಾ ವರದಿ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಿದರು.
3 ವಿಡಿಯೋಗಳಲ್ಲಿ ತನ್ನ ಮೇಲಾದ ಅತ್ಯಾಚಾರದ ಬಗ್ಗೆ ಮಾಹಿತಿ ನೀಡಿದ್ದ ಹತ್ರಾಸ್ ಸಂತ್ರಸ್ತೆ
ಕೇಂದ್ರ ತನಿಖಾ ತಂಡವು ಗ್ರಾಮಕ್ಕೆ ಭೇಟಿ ನೀಡುವುದರ ಹಿನ್ನೆಲೆ ಸಂತ್ರಸ್ತೆ ನಿವಾಸದ ಸುತ್ತಮುತ್ತಲಿನಲ್ಲಿ ಮತ್ತು ಗ್ರಾಮದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿತ್ತು. ಉತ್ತರ ಪ್ರದೇಶ ಸರ್ಕಾರದ ಮನವಿ ಬಗ್ಗೆ ಅಧಿಸೂಚನೆ ನೀಡುತ್ತಿದ್ದಂತೆ ಕಳೆದ ಭಾನುವಾರ ಸಿಬಿಐ ಅಧಿಕಾರಿಗಳು ಐಪಿಸಿ ಸೆಕ್ಷನ್ 307 ಅಡಿ ಅತ್ಯಾಚಾರ, 307 ಅಡಿ ಕೊಲೆ ಯತ್ನ, 302 ಅಡಿ ಕೊಲೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ:
ಕಳೆದ ಸಪ್ಟೆಂಬರ್.14ರಂದು ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಹುಲ್ಲು ಕತ್ತರಿಸುತ್ತಿದ್ದ ಯುವತಿಯನ್ನು ಠಾಕೂರ್ ಸಮುದಾಯದ ನಾಲ್ವರು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರ ನಡೆಸಿದ್ದರು. ಇಷ್ಟಕ್ಕೆ ಸುಮ್ಮನಾಗದೇ ಯುವತಿ ಕತ್ತು ಹಿಸುಕಿ, ನಾಲಗೆ ಕತ್ತರಿಸುವ ಮೂಲಕ ಕ್ರೌರ್ಯ ಮೆರೆದಿದ್ದರು. ಎರಡು ವಾರ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ದಲಿತ ಯುವತಿ ಸಪ್ಟೆಂಬರ್.29ರಂದು ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆದಲ್ಲಿ ಕೊನೆಯುಸಿರೆಳೆದಿದ್ದಳು. ಸಪ್ಟೆಂಬರ್.30ರ ಮಧ್ಯರಾತ್ರಿ 2.30ರ ಸಂದರ್ಭದಲ್ಲಿ ಪೊಲೀಸರೇ ಯುವತಿಯ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದರು.
ಹತ್ರಾಸ್ ಅತ್ಯಾಚಾರ ಪ್ರಕರಣವನ್ನು ಸುಪ್ರೀಂಕೋರ್ಟ್ ನ್ಯಾಯಾಂಗ ತನಿಖೆ ನಡೆಸುವ ಒತ್ತಾಯ ಕೇಳಿ ಬಂದಿತ್ತು. ಈ ಹಿನ್ನೆಲೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರು.