ಉತ್ತರ ಪ್ರದೇಶದಲ್ಲಿ ಮತದಾರರ ಮನಸು ಗೆಲ್ಲಲು ಕಾಂಗ್ರೆಸ್ಸಿನ "ಪ್ರತಿಜ್ಞಾ ಚೌಪಲ್"
ಲಕ್ನೋ, ಜನವರಿ 17: ಉತ್ತರ ಪ್ರದೇಶದಲ್ಲಿ ಕೊರೊನಾವೈರಸ್ ಶಿಷ್ಟಾಚಾರಗಳನ್ನು ಅನುಸರಿಸುವುದರ ಮೂಲಕವೇ ವಿಧಾನಸಭೆ ಚುನಾವಣೆಗೆ ಪ್ರಚಾರ ಮಾಡುವುದಕ್ಕೆ ಪ್ರತಿಜ್ಞಾ ಚೌಪಲ್(ಪ್ರಾರ್ಥನಾ ಮಂದಿರಗಳಲ್ಲಿ ಸಭೆ)'ಗಳನ್ನು ನಡೆಸುವುದಾಗಿ ಕಾಂಗ್ರೆಸ್ ಸೋಮವಾರ ತಿಳಿಸಿದೆ.
ಪ್ರಸ್ತುತ ಕೊವಿಡ್-19 ಅಲೆಯ ಹಿನ್ನೆಲೆ ಕಾಂಗ್ರೆಸ್ ತನ್ನ ಎಲ್ಲಾ ದೊಡ್ಡ ಮತ್ತು ಬಹಿರಂಗ ಸಭೆಗಳನ್ನು ಮುಂದೂಡಿದೆ, ಅದರ ಬದಲಿಗೆ ಸಣ್ಣ ಪ್ರಮಾಣದಲ್ಲಿ ಕಾರ್ಯಕ್ರಮಗಳನ್ನು ಎಚ್ಚರಿಕೆಯಿಂದ ಆಯೋಜಿಸಬಹುದು ಎಂದು ಯುಪಿಸಿಸಿ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ಹೇಳಿದ್ದಾರೆ. ಈ ಕುರಿತು ಸೋಮವಾರ ಪಕ್ಷದ ಅಭ್ಯರ್ಥಿಗಳು ಹಾಗೂ ಪದಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಕ್ಷವು ಗ್ರಾಮಗಳು, ಮೊಹಲ್ಲಾಗಳು ಮತ್ತು ವಾರ್ಡ್ಗಳಲ್ಲಿ 'ಪ್ರತಿಜ್ಞಾ ಚೌಪಾಲ್'ಗಳನ್ನು ನಡೆಸಲಿದೆ ಎಂದು ಅವರು ಹೇಳಿದ್ದಾರೆ.
'ಯುಪಿ ಚುನಾವಣೆಯಲ್ಲಿ ಗೆದ್ದರೆ ರೈತರಿಗೆ ಉಚಿತ ವಿದ್ಯುತ್' ಅಖಿಲೇಶ್
ಪ್ರತಿದಿನ ಎರಡು-ಮೂರು ಗ್ರಾಮಗಳಲ್ಲಿ 'ಪ್ರತಿಜ್ಞಾ ಚೌಪಲ್ಸ್' ನಡೆಯಲಿದ್ದು, ಇದರಲ್ಲಿ ಪಕ್ಷದ ರಾಜ್ಯ, ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಯುಪಿಸಿಸಿ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ತಿಳಿಸಿದ್ದಾರೆ.
ಪ್ರತಿಜ್ಞಾ ಚೌಪಲ್ಸ್
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರಕ್ಕಾಗಿ 'ಚೌಪಲ್'ಗಳಲ್ಲಿ ಮಹಿಳೆಯರಿಗಾಗಿ ಪಕ್ಷದ ಪ್ರಣಾಳಿಕೆ ಮತ್ತು ರೈತರಿಗೆ ಕಾಂಗ್ರೆಸ್ ಭರವಸೆ ಕುರಿತು ಚರ್ಚಿಸಲಾಗುವುದು. ಯುವಕರು, ನಿರುದ್ಯೋಗಿಗಳು ಮತ್ತು ಮಹಿಳಾ ಸ್ವಸಹಾಯ ಗುಂಪುಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಅಜಯ್ ಕುಮಾರ್ ಲಲ್ಲು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ತನ್ನ ಶೇಕಡಾ 40 ರಷ್ಟು ಟಿಕೆಟ್ಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ನೀಡುವುದಾಗಿ ಭರವಸೆ ನೀಡಿದೆ. ಉತ್ತರ ಪ್ರದೇಶ ಚುನಾವಣೆಯಲ್ಲಿ ಪಕ್ಷವು ಗೆದ್ದರೆ ಮಹಿಳೆಯರಿಗೆ ಇತರ ಹಲವಾರು ಪ್ರಯೋಜನಗಳ ಜೊತೆಗೆ ಶೇಕಡಾ 40ರಷ್ಟು ಸರ್ಕಾರಿ ಉದ್ಯೋಗಗಳನ್ನು ಮೀಸಲಿಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಹತ್ತನೇ ತರಗತಿ ಮತ್ತು ಪಿಯುಸಿ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ಫೋನ್ ಮತ್ತು ಪದವಿ ಕೋರ್ಸ್ಗಳಿಗೆ ವಿದ್ಯಾರ್ಥಿನಿಯರಿಗೆ ಸ್ಕೂಟರ್ ನೀಡುವುದಾಗಿ ಪಕ್ಷ ಘೋಷಿಸಿದೆ.
ಜನವರಿ 5ರಂದು ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವಾಗ, ಚುನಾವಣಾ ಆಯೋಗವು ಎಲ್ಲಾ ರೀತಿಯ ಸಾರ್ವಜನಿಕ ಸಮಾರಂಭ ಮತ್ತು ಸಭೆಗಳನ್ನು ನಿಷೇಧಿಸಿತು. ಐದು ಅಥವಾ ಅದಕ್ಕಿಂತ ಕಡಿಮೆ ಜನರ ಗುಂಪುಗಳಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ಮನೆ-ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ನೀಡಿತು. ಇದರ ಮಧ್ಯೆ ಸಾರ್ವಜನಿಕ ಸಭೆಗಳನ್ನು ಜನವರಿ 22ರವರೆಗೂ ನಿಷೇಧಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ಚುನಾವಣೆ ಪೈಪೋಟಿ:
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.
2017 ಉತ್ತರ ಪ್ರದೇಶ ಚುನಾವಣೆ ಫಲಿತಾಂಶ
Recommended Video
ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.