ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಕೊರೊನಾ ಕೇಸ್ ಎಷ್ಟು?
ನವದೆಹಲಿ, ಮಾರ್ಚ್ 14: ಉತ್ತರಪ್ರದೇಶದಲ್ಲೂ ಕೊರೊನಾ (ಕೋವಿಡ್ 19) ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಶನಿವಾರಕ್ಕೆ ಒಟ್ಟು 13 ಕೊರೊನಾ ಸೋಂಕಿತ ಪ್ರಕರಣಗಳನ್ನು ದೃಡಪಡಿಸಲಾಗಿದೆ. ಈ ನಿಟ್ಟಿನಲ್ಲಿ ಅಲ್ಲಿನ ಸರ್ಕಾರ ಗಂಭೀರವಾಗಿದ್ದು, ಮಾರ್ಚ್ 22 ರವರಗೆ ಇಡೀ ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಮುಚ್ಚಲು ತೀರ್ಮಾನ ತೆಗೆದುಕೊಂಡಿದೆ.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಆದೇಶ ಹೊರಡಿಸಿದ್ದಾರೆ. ಉತ್ತರಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ 13 ಜನರು ತುತ್ತಾಗಿದ್ದಾರೆ. ಇದರಿಂದ ಉತ್ತರ ಪ್ರದೇಶ ಸರ್ಕಾರ ಗಂಭೀರವಾಗಿದ್ದು, ಪ್ರಮುಖ ನಗರಗಳಲ್ಲಿ ಮಾಲ್ ಹಾಗೂ ಚಿತ್ರಮಂದಿರಗಳನ್ನು ಸಹ ಮುಚ್ಚಲು ಆದೇಶ ಮಾಡಲಾಗಿದೆ.
ಈ ಕುರಿತು ಮಾತನಾಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು, ಸೋಂಕು ಹರಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಜನರು ಭಯಗೊಳ್ಳುವ ಅವಶ್ಯಕತೆ ಇಲ್ಲ ಎಂದು ಅಭಯ ನೀಡಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಮಾರ್ಚ್ 22 ರ ನಂತರ ಶಾಲಾ ಕಾಲೇಜುಗಳನ್ನು ಪುನಾರಾಂಭಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದುವರೆಗೆ ದೇಶದಲ್ಲಿ ಸೋಂಕಿತರ ಸಂಖ್ಯೆ ಶನಿವಾರಕ್ಕೆ 83 ಏರಿಕೆಯಾಗಿದೆ.