ಉತ್ತರ ಪ್ರದೇಶದಲ್ಲಿ ಸಂಕ್ರಾಂತಿ ವೇಳೆಗೆ ಕೊರೊನಾ ಲಸಿಕೆ ಲಭ್ಯ: ಯೋಗಿ ಆದಿತ್ಯನಾಥ್
ಗೋರಖ್ಪುರ, ಜನವರಿ 03: ಉತ್ತರ ಪ್ರದೇಶದಲ್ಲಿ ಮಕರ ಸಂಕ್ರಾಂತಿ ವೇಳೆಗೆ ಕೊರೊನಾ ಲಸಿಕೆ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ ಆಕ್ಸ್ಫರ್ಡ್ ಕೋವಿಡ್ -19 ಲಸಿಕೆ ಕೋವಿಶೀಲ್ಡ್ ತುರ್ತು ಬಳಕೆಗೆ ರಾಷ್ಟ್ರೀಯ ಔಷಧ ನಿಯಂತ್ರಕದ ತಜ್ಞರ ಸಮಿತಿ ಅನುಮತಿ ನೀಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಲಸಿಕೆ ಬಳಕೆಗೆ ಅನುಮತಿ ನೀಡುವ ಸಾಧ್ಯತೆ ಇದೆ.
ನಾವು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಾರ್ಚ್ 2020ರಲ್ಲಿ ಕೋವಿಡ್ -19 ವಿರುದ್ಧ ಅಭಿಯಾನ ಪ್ರಾರಂಭಿಸಿದ್ದೇವೆ ಮತ್ತು ಈ ವರ್ಷದ ಆರಂಭದಲ್ಲಿ ಲಸಿಕೆಯ ಡ್ರೈ ರನ್ ನಡೆಯುತ್ತಿದೆ ಎಂದರು.

ಬ್ರಿಟನ್ ನ ಔಷಧ ಹಾಗೂ ಆರೋಗ್ಯ ಸೇವೆಗಳ ನಿಯಂತ್ರಣ ಮಂಡಳಿಯು ಬುಧವಾರ ಸೆರಂ ಇನ್ ಸ್ಟಿಟ್ಯೂಟ್ ನ ಆಕ್ಸ್ ಫರ್ಡ್ ಆಸ್ಟ್ರಾಜೆನೆಕಾ ಲಸಿಕೆ ಬಳಕೆಗೆ ಅನುಮತಿ ನೀಡಿದ ಬೆನ್ನಲ್ಲೇ, ಭಾರತದಲ್ಲೂ ತುರ್ತು ಬಳಕೆಗೆ ಅನುಮತಿ ನೀಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ.
ಶನಿವಾರದಿಂದ ಭಾರತದ ಎಲ್ಲಾ ರಾಜ್ಯಗಳಲ್ಲಿ ಕೊರೊನಾ ಲಸಿಕೆ ಪೂರ್ವಾಭ್ಯಾಸ ಆರಂಭವಾಗಿದೆ. ಕೊರೊನಾ ಸೋಂಕಿನ ವಿರುದ್ಧ ನಾಲ್ಕು ಲಸಿಕೆಗಳನ್ನು ಏಕಕಾಲಕ್ಕೆ ಅಭಿವೃದ್ಧಿಪಡಿಸುತ್ತಿರುವ ಏಕೈಕ ದೇಶ ಭಾರತ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಬ್ರಿಟನ್ ನಲ್ಲಿ ಈಗಾಗಲೇ ಫೈಜರ್ ಹಾಗೂ ಆಸ್ಟ್ರಾಜೆನೆಕಾ ಲಸಿಕೆಗಳ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಅಮೆರಿಕದಲ್ಲಿ ಫೈಜರ್ ಲಸಿಕೆಗೆ ಅನುಮತಿ ನೀಡಲಾಗಿದೆ. ಭಾರತದಲ್ಲಿ ಕೊರೊನಾ ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ ಈಗಾಗಲೇ ಮೂರು ಅರ್ಜಿಗಳು ಬಂದಿವೆ. ಹೀಗಾಗಿ ತುರ್ತು ಬಳಕೆಗೆ ಒಂದಕ್ಕಿಂತ ಹೆಚ್ಚಿನ ಲಸಿಕೆಗಳು ಲಭ್ಯವಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.












Click it and Unblock the Notifications