ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ 2.0 ಸರ್ಕಾರದಲ್ಲಿ ಯಾರಿಗೆಲ್ಲ ಸಚಿವ ಸ್ಥಾನ?
ಲಕ್ನೋ, ಮಾರ್ಚ್ 13: ಉತ್ತರ ಪ್ರದೇಶದಲ್ಲಿ ಎರಡನೇ ಬಾರಿ ಅಧಿಕಾರದ ಗದ್ದುಗೆ ಏರುತ್ತಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಲ್ಲಿ ಯಾರಿಗೆಲ್ಲ ಸಚಿವ ಸ್ಥಾನ ನೀಡಲಾಗುತ್ತದೆ ಎಂಬುದು ಇದೀಗ ಸಾಕಷ್ಟು ಚರ್ಚೆ ಆಗುತ್ತಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 2.0 ಸರ್ಕಾರದಲ್ಲಿ ಯಾರಿಗೆಲ್ಲ ಸಚಿವ ಸ್ಥಾನ ನೀಡಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಯೋಗಿ ಸಂಪುಟದಲ್ಲಿ ಈ ಬಾರಿ ಉಪ ಮುಖ್ಯಮಂತ್ರಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ದಲಿತರೊಬ್ಬರಿಗೆ ಡಿಸಿಎಂ ಸ್ಥಾನ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.
ಉ.ಪ್ರ: ಕಣದಲ್ಲಿದ್ದ 399 ಕಾಂಗ್ರೆಸ್ ಅಭ್ಯರ್ಥಿಗಳು, ಠೇವಣಿ ಕಳೆದುಕೊಂಡವರೆಷ್ಟು?
ದಲಿತರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡುವುದರ ಜೊತೆಗೆ ಈ ಬಾರಿ ಯೋಗಿ ಸರ್ಕಾರದಲ್ಲಿ ಹೊಸ ಮುಖಗಳಿಗೆ ಮಣೆ ಹಾಕುವ ಬಗ್ಗೆ ಚರ್ಚೆ ನಡೆಯುತ್ತಿದೆ. ಹಾಗಿದ್ದರೆ ಯೋಗಿ ಸರ್ಕಾರದ 2.0 ಸಂಪುಟದಲ್ಲಿ ಯಾರಿಗೆಲ್ಲ ಸಚಿವ ಸ್ಥಾನ ಸಿಗಲಿದೆ. ಸಂಪುಟ ರಚನೆ ಬಗ್ಗೆ ಬಿಜೆಪಿ ಹಾಕಿಕೊಂಡಿರುವ ಯೋಜನೆಗಳೇನು ಎಂಬುದರ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ಓದಿ.
ಬಿಜೆಪಿ ಹಿರಿಯ ನಾಯಕರನ್ನು ಭೇಟಿ ಮಾಡಿದ ಯೋಗಿ ಆದಿತ್ಯನಾಥ್
ನವದೆಹಲಿಯಲ್ಲಿ ಶೀಘ್ರದಲ್ಲೇ ನಡೆಯಲಿರುವ ಪ್ರಮುಖ ಸಭೆಯಲ್ಲಿ ಉತ್ತರ ಪ್ರದೇಶ ಸರ್ಕಾರ ರಚನೆ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈಗಾಗಲೇ ಉಪಾಧ್ಯಕ್ಷ ವೆಂಕಯ್ಯ ನಾಯ್ಡು ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ ಅವರನ್ನು ಭೇಟಿ ಮಾಡಿದ್ದಾರೆ. ಭಾನುವಾರ ಸಂಜೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನೂ ಭೇಟಿಯಾದ ಯೋಗಿ, ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಬಿಜೆಪಿ ಮುಖಂಡರನ್ನು ಯೋಗಿ ಭೇಟಿ ಮಾಡಲಿದ್ದಾರೆ.
ಜಾತಿ ಮತ್ತು ಪ್ರಾದೇಶಿಕ ಸಮತೋಲನ
ಹೊಸ ಸರ್ಕಾರದಲ್ಲಿ ಜಾತಿ ಮತ್ತು ಪ್ರಾದೇಶಿಕ ಸಮೀಕರಣದ ಸಮತೋಲನವನ್ನು ಕಾಯ್ದುಕೊಳ್ಳಲು ಬಿಜೆಪಿ ಲೆಕ್ಕಾಚಾರ ಹಾಕಿಕೊಂಡಿದೆ. ಉತ್ತರ ಪ್ರದೇಶದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಎಲ್ಲ ಬೆಳವಣಿಗೆಳನ್ನು ನೋಡಿಕೊಳ್ಳುವುದಕ್ಕಾಗಿ ಬಿಜೆಪಿಯ ಸಂಸದೀಯ ಮಂಡಳಿಯು ಇಬ್ಬರು ವೀಕ್ಷಕರನ್ನು ನೇಮಿಸಿದೆ. ದಲಿತರನ್ನು ಉಪ ಮುಖ್ಯಮಂತ್ರಿಯಾಗಿ ನೇಮಿಸುವ ಕುರಿತು ಪ್ರಾಥಮಿಕ ಹಂತದ ಚರ್ಚೆ ನಡೆದಿದೆ. ರಾಜ್ಯ ಸಚಿವ ಸಂಪುಟಕ್ಕೆ ಇನ್ನಷ್ಟು ಪರಿಶಿಷ್ಟ ಜಾತಿ (ಎಸ್ಸಿ) ಶಾಸಕರನ್ನು ಸೇರಿಸಿಕೊಳ್ಳುವ ಬಗ್ಗೆಯೂ ಮಾತುಕತೆ ನಡೆಸಲಾಗುತ್ತಿದೆ.
ಹೊಸ ಮುಖಗಳಿಗೆ ಮಣೆ ಹಾಕಲು ಚಿಂತನೆ
ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ ಅಖಾಡದಲ್ಲಿ ಸ್ಪರ್ಧಿಸಿದ ಹಿಂದಿನ ಸರ್ಕಾರದ 11 ಸಚಿವರು ಸೋಲು ಕಂಡಿದ್ದಾರೆ. ಇದರಿಂದ ಖಾಲಿ ಆಗಿರುವ ಸಚಿವರ ಕುರ್ಚಿಯಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲು ಅವಕಾಶ ಸಿಕ್ಕಿದೆ. ಸಚಿವ ಸ್ಥಾನವನ್ನು ಪಡೆದುಕೊಳ್ಳಬಹುದಾದ ಹೊಸ ಮುಖಗಳ ಪಟ್ಟಿಯಲ್ಲಿ ಹಲವರ ಹೆಸರು ಕೇಳಿ ಬಂದಿದೆ. ಈ ಪೈಕಿ ಕನ್ನೌಜ್ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿರುವ ನಿವೃತ್ತ ಐಪಿಎಸ್ ಅಧಿಕಾರಿ ಆಸಿಮ್ ಅರುಣ್, ಆಗ್ರಾ ಗ್ರಾಮಾಂತರ ಕ್ಷೇತ್ರದಲ್ಲಿ ಗೆದ್ದಿರುವ ಬೇಬಿ ರಾಣಿ ಮೌರ್ಯ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಸಾಧ್ಯತೆಯಿದೆ.
ಮೂಲಗಳ ಪ್ರಕಾರ, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಎಂಎಲ್ಸಿ ಸ್ವತಂತ್ರ ದೇವ್ ಸಿಂಗ್, ಲಕ್ನೋದ ಸರೋಜಿನಿ ನಗರ ಕ್ಷೇತ್ರದ ಶಾಸಕ ರಾಜೇಶ್ವರ್ ಸಿಂಗ್ ಮತ್ತು ನಿವೃತ್ತ ಐಎಎಸ್ ಮತ್ತು ಎಂಎಲ್ಸಿ ಎಕೆ ಶರ್ಮಾ ಅವರಿಗೆ ಸಚಿವ ಸ್ಥಾನ ಸಿಗಬಹುದು.
ಯೋಗಿ ಸಂಪುಟದಲ್ಲಿ ಯಾರಿಗೆಲ್ಲ ಎರಡನೇ ಅವಕಾಶ?
ಸಿರಥು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರೂ ಸಹ ಪ್ರಮುಖ ಒಬಿಸಿ ನಾಯಕರು ಹಾಗೂ ವಿಧಾನ ಪರಿಷತ್ತಿನ (ಎಂಎಲ್ಸಿ) ಸದಸ್ಯರೂ ಆಗಿರುವ ಕೇಶವ್ ಪ್ರಸಾದ್ ಮೌರ್ಯ ಅವರಿಗೆ ಸರ್ಕಾರದಲ್ಲಿ ಸ್ಥಾನ ಸಿಗಬಹುದು. ಇದೇ ವೇಳೆ ಮೈತ್ರಿಕೂಟದ ಪಾಲುದಾರರನ್ನು ಸಹ ಬಿಡಲಾಗುವುದಿಲ್ಲ. ಅಪ್ನಾ ದಳದಿಂದ ಎಂಎಲ್ಸಿ ಆಶಿಶ್ ಪಟೇಲ್ ಮತ್ತು ನಿಶಾದ್ ಪಕ್ಷದಿಂದ ಡಾ ಸಂಜಯ್ ನಿಶಾದ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವ ಸಾಧ್ಯತೆಯಿದೆ.
ಯುಪಿಯಲ್ಲಿ 255 ಕ್ಷೇತ್ರಗಳನ್ನು ಗೆದ್ದಿರುವ ಬಿಜೆಪಿ
2022ರಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಎರಡನೇ ಬಾರಿ ಗೆಲುವಿನ ಬಾವುಟ ಹಾರಿಸಿದೆ. ರಾಜ್ಯದ 75 ಜಿಲ್ಲೆಗಳ 403 ಕ್ಷೇತ್ರಗಳಲ್ಲಿ ಸರ್ಕಾರ ರಚಿಸುವುದಕ್ಕೆ ಕನಿಷ್ಠ 202 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು. ಆದರೆ ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ 255 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಬಿಜೆಪಿಗೆ ಸೆಡ್ಡು ಹೊಡೆದ ಸಮಾಜವಾದಿ ಪಕ್ಷವು 111 ಕ್ಷೇತ್ರಗಳಲ್ಲಿ ಗೆಲುವಿನ ಸೈಕಲ್ ಏರಿದೆ. ಅಪ್ನಾ ದಳ 12, ಬಹುಜನ ಸಮಾಜವಾದಿ ಪಕ್ಷ 1, ಜೆಡಿಎಲ್ 2, ನಿರ್ಬಲ್ ಇಂಡಿಯನ್ ಶೋಷಿತ ಹಮಾರಾ ಆಮ್ ದಳ 6, ರಾಷ್ಟ್ರೀಯ ಲೋಕ ದಳ 8, ಸುಹೇಲ್ದೇವ್ ಭಾರತೀಯ ಸಮಾಜ ಪಾರ್ಟಿ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಮಾತ್ರ ಕೇವಲ 2 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳುವಂತೆ ಆಗಿದೆ.