ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಗೆ ಚಿಕಿತ್ಸೆ ನೀಡಿದ್ದ ವೈದ್ಯ ನಿಗೂಢ ಸಾವು
ಉನ್ನಾವೋ, ಜನವರಿ 14: ಉತ್ತರ ಪ್ರದೇಶದ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಗೆ ಚಿಕಿತ್ಸೆ ನೀಡಿದ್ದ ವೈದ್ಯ ಸೋಮವಾರ ನಿಗೂಢ ರೀತಿಯಲ್ಲಿ ಸಾವಿಗೀಡಾಗಿದ್ದಾರೆ.
ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು 2018ರ ಏಪ್ರಿಲ್ನಲ್ಲಿ ವಶಕ್ಕೆ ತೆಗೆದುಕೊಂಡಿದ್ದ ಪೊಲೀಸರು, ತೀವ್ರ ಚಿತ್ರಹಿಂಸೆ ನೀಡಿದ್ದರು. ಗಂಭೀರ ಗಾಯಗೊಂಡಿದ್ದ ಅವರಿಗೆ ವೈದ್ಯ ಪ್ರಶಾಂತ್ ಉಪಾಧ್ಯಾಯ ಚಿಕಿತ್ಸೆ ನೀಡಿದ್ದರು.
ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಉಪಾಧ್ಯಾಯ, ಅತ್ಯಾಚಾರ ಸಂತ್ರಸ್ತೆಯ ತಂದೆಗೆ ಪ್ರಥಮ ಚಿಕಿತ್ಸೆ ನೀಡಿ ಬಿಡುಗಡೆ ಮಾಡಿದ್ದರು. ಆದರೆ ಸಂತ್ರಸ್ತೆಯ ತಂದೆ ಕೆಲವು ಗಂಟೆಗಳ ಬಳಿಕ ಪೊಲೀಸರ ವಶದಲ್ಲಿ ಮೃತಪಟ್ಟಿದ್ದರು.

ಈ ಪ್ರಕರಣದಲ್ಲಿ ಪ್ರಶಾಂತ್ ಉಪಾಧ್ಯಾಯ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು. ನಂತರ ಅವರನ್ನು ಅಮಾನತು ಮಾಡಲಾಗಿತ್ತು. ಬಳಿಕ ಮತ್ತೆ ಕರ್ತವ್ಯಕ್ಕೆ ಕರೆಯಿಸಿಕೊಂಡು ಫತೇಹ್ಪುರದಲ್ಲಿ ನಿಯೋಜನೆ ಮಾಡಲಾಗಿತ್ತು.
ಸೋಮವಾರ ಬೆಳಿಗ್ಗೆ ಉಪಾಧ್ಯಾಯ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಆದರೆ ಆಸ್ಪತ್ರೆಗೆ ತೆರಳಲು ನಿರಾಕರಿಸಿದರು. ಬಳಿಕ ಸಮಸ್ಯೆ ಉಲ್ಬಣವಾದಾಗ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿಗೆ ತಲುಪುವಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಉಪಾಧ್ಯಾಯ ಅವರು ಮಧುಮೇಹದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.
ಉನ್ನಾವೋದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬಿಜೆಪಿಯ ಉಚ್ಚಾಟಿತ ಶಾಸಕ ಕುಲದೀಪ್ ಸೆಂಗರ್ ತಿಹಾರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಮಹಿಳೆಯ ತಂದೆಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಕುಲದೀಪ್ ಸಹೋದರ ಅತುಲ್ ಸೆಂಗರ್ ಕೂಡ ಜೈಲಿನಲ್ಲಿದ್ದಾರೆ.












Click it and Unblock the Notifications